ಯುಪಿಯಲ್ಲಿ ನಕಲಿ ಸಮಾಜವಾದಿಗಳು ಅಧಿಕಾರಕ್ಕೆ ಬಂದರೆ ಅಪಾಯ: ಮೋದಿ
ಲಕ್ನೋ, ಫೆಬ್ರವರಿ 4: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಸಮಾಜ ವಿರೋಧಿಗಳನ್ನು ಕಣಕ್ಕಿಳಿಸುತ್ತಿದೆ. ಈ "ನಕಲಿ ಸಮಾಜವಾದಿಗಳು" ಅಧಿಕಾರಕ್ಕೆ ಬಂದರೆ ಕೇಂದ್ರದಿಂದ ಬಡವರಿಗೆ ನೀಡುವ ಸವಲತ್ತುಗಳನ್ನು ಮೂಲೆಗುಂಪು ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಪಶ್ಚಿಮ ಯುಪಿ ಕ್ಷೇತ್ರಗಳಲ್ಲಿ ವರ್ಚುವಲ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, "ಇತಿಹಾಸ-ಶೀಟರ್ಗಳನ್ನು" ಹೊರಗಿಡುವ ಬದಲಿಗೆ "ಹೊಸ ಇತಿಹಾಸ" ಸೃಷ್ಟಿಸುವಂತೆ ಜನರನ್ನು ಒತ್ತಾಯಿಸಿದ್ದಾರೆ.
ಎಐಎಂಐಎಂ ಮುಖ್ಯಸ್ಥನ ಮೇಲೆ ದಾಳಿ ಪ್ರಕರಣ: ಝಡ್ ಭದ್ರತೆ ತಿರಸ್ಕರಿಸಿದ ಓವೈಸಿ
"ಜನ್ ಚೌಪಾಲ್"ನಲ್ಲಿ ರೈತರಿಗೆ ಸಹಾಯ ಮಾಡುವಂತಹ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸರ್ಕಾರದ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಕೇಂದ್ರೀಕರಿಸಿದ್ದರು. ಮತದಾನದ ದಿನ ಅತಿಹೆಚ್ಚಿನ ಸಂಖ್ಯೆಯಲ್ಲಿ ಜನರು ಮನೆಗಳಿಂದ ಹೊರಗೆ ಬರಬೇಕು, ಬೆಳಗ್ಗಿನ ತಿಂಡಿ ಸೇವಿಸುವುದಕ್ಕೂ ಮೊದಲು ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಡಬಲ್ ಇಂಜಿನ್ ಸರ್ಕಾರದಿಂದ ಡಬಲ್ ಲಾಭ:
ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಕೇಂದ್ರದಲ್ಲಿ ಬಿಜೆಪಿ ಮತ್ತು ರಾಜ್ಯದಲ್ಲೂ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ಈ ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನರಿಗೆ ಎರಡರಷ್ಟು ಲಾಭ ಸಿಕ್ಕಿದೆ. ಕಳೆದ ಐದು ವರ್ಷಗಳ ಹಿಂದೆ ಈ ಮಾಫಿಯಾಗಳು ಕೇಂದ್ರ ಸರ್ಕಾರದ ಯೋಜನೆಗಳು ರಾಜ್ಯದ ದಲಿತರು, ಹಿಂದುಳಿದವರು ಮತ್ತು ಬಡವರಿಗೆ ತಲುಪುವುದಕ್ಕೆ ಬಿಡುತ್ತಿರಲಿಲ್ಲ. ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ಅವರು ತಿಳಿಸುತ್ತಲೇ ಇರಲಿಲ್ಲ ಎಂದು ಮೋದಿ ಆರೋಪಿಸಿದ್ದಾರೆ.
ಮೊದಲು ಮತದಾನ, ನಂತರ ಜಲಪಾನ:
ಪೆಹಲಾ ಮತದಾನ್, ಫಿರ್ ಜಲಪಾನ್(ಮೊದಲು ಮತದಾನ, ನಂತರ ಜಲಪಾನ) ಎನ್ನುವ ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ, ಅತಿಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಬೇಕು ಎಂದು ಹೇಳಿದ್ದರು. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೀರತ್, ಗಜಿಯಾಬಾದ್, ಹಾಪುರ್, ಅಲಿಘರ್ ಮತ್ತು ನೋಯ್ಡಾದ ಮತದಾರರನ್ನು ಹೆಚ್ಚು ಗಮನದಲ್ಲಿಟ್ಟುಕೊಳ್ಳಲಾಗಿದೆ.
ಸಮಾಜವಿರೋಧಿಗಳಿಗೆ ಪ್ರತಿಪಕ್ಷಗಳ ಟಿಕೆಟ್:
"ವಿರೋಧ ಪಕ್ಷವು ಸಮಾಜ ವಿರೋಧಿಗಳಿಗೆ ಟಿಕೆಟ್ ನೀಡುತ್ತಿದೆ. ಇದರಿಂದ ಅವರ ಭವಿಷ್ಯದ ಉದ್ದೇಶಗಳನ್ನು ಅರ್ಥಮಾಡಿಕೊಳ್ಳಬಹುದು. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ. ಎಷ್ಟೇ ಚಳಿ ಇರಲಿ, ನಿಮ್ಮ ಮತ ಚಲಾಯಿಸಿ, ತದನಂತರ ನಿಮ್ಮ ಉಪಹಾರವನ್ನು ಸೇವಿಸುವುದನ್ನು ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು," ಎಂದು ಮೋದಿ ಹೇಳಿದ್ದಾರೆ.
ಏಳು ಹಂತಗಳಲ್ಲಿ ನಡೆಯಲಿರುವ ಯುಪಿ ಚುನಾವಣೆ
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
Recommended Video
ಈ ಹಿಂದೆ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.