ಹತ್ರಾಸ್ ಅತ್ಯಾಚಾರ ಪ್ರಕರಣ: ಸುಪ್ರೀಂನಲ್ಲಿ ಹೊಸ ಪಿಐಎಲ್ ದಾಖಲು
ಲಕ್ನೋ, ಅಕ್ಟೋಬರ್ 14: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು, ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳ ವಿರುದ್ಧ ಎಸ್ಸಿಎಸ್ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಸುಪ್ರೀಂಕೋರ್ಟ್ ಎದುರು ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಚೇತನ್ ಕಾಂಬ್ಳೆ ಈ ಕುರಿತು ಅರ್ಜಿ ಸಲ್ಲಿಸಿದ್ದು, ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಪೊಲೀಸ್, ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳು ಸಾಕಷ್ಟು ಪ್ರಮಾದಗಳನ್ನು ಮಾಡಿದ್ದಾರೆ.
3 ವಿಡಿಯೋಗಳಲ್ಲಿ ತನ್ನ ಮೇಲಾದ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಿದ್ದ ಹತ್ರಾಸ್ ಸಂತ್ರಸ್ತೆ
ಒಂದೆಡೆ ದಾಖಲೆ ತಿರುಚಲಾಗಿದ್ದರೆ ಇನ್ನೊಂದೆಡೆ ಸಂತ್ರಸ್ತ ಕುಟುಂಬದ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆದಿದೆ.ಹಾಗೆಯೇ ತರಾತುರಿಯಲ್ಲಿ ಸಂತ್ರಸ್ತೆಯ ಅಂತ್ಯಸಂಸ್ಕಾರ ನಡೆಸಲಾಗಿದೆ.
ಸರ್ಕಾರ ಹಾಗೂ ಅಧಿಕಾರಿಗಳೇ ದಲಿತ ಸಂತ್ರಸ್ತೆಯ ಎಲ್ಲಾ ಹಕ್ಕುಗಳನ್ನು ಕಸಿದುಕೊಂಡಿದ್ದಾರೆ ಹೀಗಾಗಿ ಎಸ್ಸಿಎಸ್ಟಿ ದೌರ್ಜನ್ಯ ನಿಯಂತ್ರಣ ಹಾಗೂ ಐಪಿಸಿ ಕಾಯ್ದೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಬೇಕೆಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಸೆಪ್ಟೆಂಬರ್ 14 ರಂದು ಅತ್ಯಾಚಾರ ಸಂತ್ರಸ್ತೆ ತನ್ನ ತಾಯಿಯ ಜೊತೆ ಹುಲ್ಲು ತರಲು ಹೊಲಕ್ಕೆ ಹೋಗಿದ್ದಾಗ ನಾಲ್ವರು ಆಕೆಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದರು.
ಬಳಿಕ ಜನರ ಸಹಾಯದಿಂದ ಆಕೆಯ ತಾಯಿ ಮಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಳು, ಆರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ. ಇನ್ನೊಂದೆಡೆ ಆಕೆಯ ಮುಖವನ್ನು ಪೋಷಕರಿಗೆ ನೋಡಲು ಬಿಡದೆ ಮಧ್ಯರಾತ್ರಿ 2.30ರ ವೇಳೆಗೆ ಅಂತ್ಯ ಸಂಸ್ಕಾರವನ್ನು ನಡೆಸಿದ್ದು, ದೇಶದೆಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.