ಉತ್ತರ ಪ್ರದೇಶ ಪೊಲೀಸರಿಂದ ಟ್ವಿಟ್ಟರ್ ಇಂಡಿಯಾ ಎಂಡಿಗೆ ನೋಟಿಸ್
ಘಾಜಿಯಾಬಾದ್, ಜೂನ್ 17: ಮುಸ್ಲಿಂ ವೃದ್ಧರೊಬ್ಬರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್ ಇಂಡಿಯಾ ಎಂಡಿಗೆ ಉತ್ತರ ಪ್ರದೇಶ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ರಾಷ್ಟ್ರಾದ್ಯಂತ ಸಂಚಲನ ಮೂಡಿಸಿದ್ದ ಮುಸ್ಲಿಂ ವೃದ್ಧರೊಬ್ಬರ ಮೇಲೆ ಹಲ್ಲೆ ಮಾಡಿ, ಜೈಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ.
ಗಾಜಿಯಾಬಾದ್ ದಾಳಿ ಪೋಸ್ಟ್: ಟ್ವಿಟ್ಟರ್, ಪತ್ರಕರ್ತರ ವಿರುದ್ದ ರಾತ್ರೋರಾತ್ರಿ ಎಫ್ಐಆರ್
ಟ್ವಿಟ್ಟರ್ನಲ್ಲಿ ಈ ವಿಡಿಯೋ ವೈರಲ್ ಆಗಿತ್ತು, ಹಲ್ಲೆಗೆ ಒಳಗಾದ ಸೈಫಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದರು. ಆದರೆ ಎಫ್ಐಆರ್ನಲ್ಲಿ ಅಂತಹ ಯಾವುದೇ ಆರೋಪಗಳನ್ನು ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಾಜಿಯಾಬಾದ್ ಪೊಲೀಸರು ಟ್ವಿಟ್ಟರ್ ಇಂಡಿಯಾ ಎಂಡಿ ಮನೀಶ್ ಮಹೇಶ್ವರಿ ಅವರಿಗೆ ಕಳುಹಿಸಿರುವ ನೋಟಿಸ್ನ್ನು ಎಎನ್ಐ ಹಂಚಿಕೊಂಡಿದೆ. ಲೋನಿ ಬಾರ್ಡರ್ನಲ್ಲಿರುವ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ನೋಟಿಸ್ನಲ್ಲಿ ಹೇಳಲಾಗಿದೆ.
ಟ್ವಿಟ್ಟರ್ ಐಎನ್ಸಿ, ಟ್ವಿಟ್ಟರ್ ಕಮ್ಯುನಿಕೇಷನ್ಸ್ ಇಂಡಿಯಾ, ದಿ ವೈರ್ ನ್ಯೂಸ್ ಪೋರ್ಟಲ್, ಪತ್ರಕರ್ತರಾದ ಮೊಹಮ್ಮದ್ ಜುಬೈರ್, ರಾಣಾ ಅಯೂಬ್, ಸಬಾ ನಖ್ವಿ ಮತ್ತು ಕಾಂಗ್ರೆಸ್ ಮುಖಂಡರಾದ ಸಲ್ಮಾನ್ ನಿಜಾಮಿ, ಮಸ್ಕೂರ್ ಉಸ್ಮಾನಿ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಸಾಮ ಮೊಹಮ್ಮದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಮುಸ್ಲಿಂ ವ್ಯಕ್ತಿಯೊಬ್ಬರ ವಿಡಿಯೋ ಹಂಚಿಕೊಂಡ ಕಾರಣಕ್ಕೆ ಉತ್ತರ ಪ್ರದೇಶದ ಸುದ್ದಿಸಂಸ್ಥೆ ಮತ್ತು ಕೆಲವು ಪತ್ರಕರ್ತರ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಸಂಪಾದಕರ ಕೂಟ ಖಂಡಿಸಿದ್ದು, ದೂರು ಹಿಂಪಡೆಯುವಂತೆ ಒತ್ತಾಯಿಸಿದೆ.
ವಯಸ್ಸಾದ ಮುಸ್ಲಿಂ ವ್ಯಕ್ತಿಯ ಮೇಲೆ ನಡೆಸಲಾಗಿದೆ ಎಂದು ಟ್ವೀಟ್ ಮಾಡಿದ್ದಕ್ಕಾಗಿ ದಿ ವೈರ್ ಮತ್ತು ಹಲವು ಪತ್ರಕರ್ತರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ದೂರು ದಾಖಲಿಸಿದೆ.
ಆರೋಪಿಗಳು ಸೈಫಿ ಮಾರಾಟ ಮಾಡಿದ ತಾಯತದ ಬಗ್ಗೆ ಅಸಮಾಧಾನಗೊಂಡಿದ್ದರು ಎಂದಿರುವ ಪೊಲೀಸರು, ಹಲ್ಲೆಯ ಹಿಂದೆ ಕೋಮು ದ್ವೇಷವಿರುವ ಬಗ್ಗೆ ಅಲ್ಲಗಳೆದಿದ್ದಾರೆ.