ದ್ವೇಷದ ಭಾಷಣಕ್ಕಾಗಿ ನರಸಿಂಹಾನಂದ ಯತಿ ಬಂಧನ: ಪೊಲೀಸರ ಹೇಳಿಕೆ
ಹೊಸದಿಲ್ಲಿ: ಕಳೆದ ತಿಂಗಳು ಹರಿದ್ವಾರದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆನೀಡುವ ಕಾರ್ಯಕ್ರಮವನ್ನು ಆಯೋಜಿಸಿದ್ದ ಯತಿ ನರಸಿಂಹಾನಂದ ಅವರನ್ನು ಇದೀಗ ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಎನ್ಡಿಟಿವಿಗೆ ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಬೇರೆ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.
ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ನರಸಿಂಹಾನಂದನನ್ನು ಶನಿವಾರ ಬಂಧಿಸಲಾಗಿತ್ತು. ಭಾನುವಾರ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು. ಆದರೆ ರಿಮಾಂಡ್ ಅರ್ಜಿಯಲ್ಲಿ ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣವನ್ನೂ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ಹೊಸ ಆರೋಪಗಳಲ್ಲಿ ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು ಸೇರಿದೆ. ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳಿಗಾಗಿ ಆತನ ಮೇಲೆ ಆರೋಪ ಹೊರಿಸಲಾಗಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ನರಸಿಂಹಾನಂದ ಅವರು ಕಳೆದ ತಿಂಗಳು ಹರಿದ್ವಾರ "ಧರ್ಮ ಸಂಸದ್" ಅಥವಾ ಧಾರ್ಮಿಕ ಸಭೆಯಲ್ಲಿ ದ್ವೇಷ ಭಾಷಣಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಎರಡನೇ ವ್ಯಕ್ತಿಯಾಗಿದ್ದಾರೆ. ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿ ಅವರು ಪ್ರಕರಣದಲ್ಲಿ ಬಂಧಿಸಲಾದ ಮೊದಲನೇ ವ್ಯಕ್ತಿಯಾಗಿದ್ದಾರೆ. ಅವರು ಮತಾಂತರಗೊಳ್ಳುವ ಮೊದಲು ವಸೀಮ್ ರಿಜ್ವಿ ಆಗಿದ್ದರು. ಘಟನೆ ನಡೆದು ಸುಮಾರು ಒಂದು ತಿಂಗಳ ನಂತರ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯ ಬಳಿಕ ಇವರಿಬ್ಬರನ್ನು ಬಂಧಿಸಲಾಗಿದೆ.
ಡಿಸೆಂಬರ್ 17 ರಿಂದ 20 ರವರೆಗೆ ನಡೆದ ಹರಿದ್ವಾರದ ಈವೆಂಟ್ನ ಕ್ಲಿಪ್ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದವು. ಈ ದ್ವೇಷದ ಭಾಷಣ ಮಾಜಿ ಮಿಲಿಟರಿ ಮುಖ್ಯಸ್ಥರು, ನಿವೃತ್ತ ನ್ಯಾಯಾಧೀಶರು, ಕಾರ್ಯಕರ್ತರು ಮತ್ತು ಅಂತರರಾಷ್ಟ್ರೀಯ ಟೆನಿಸ್ ಸ್ಪರ್ಧಿ ಮಾರ್ಟಿನಾ ನವ್ರಾಟಿಲೋವಾ ಅವರಿಂದಲೂ ತೀವ್ರ ಟೀಕೆಗೆ ಗುರಿಯಾಗಿತ್ತು. ಅವರ ವಿರುದ್ಧ ಕ್ರಮಕ್ಕೆ ಒತ್ತಾಯಗಳು ಕೇಳಿ ಬಂದಿದ್ದವು. ಆದರೆ ಕಾರ್ಯಕ್ರಮವನ್ನು ಆಯೋಜಿಸಿದವರು ಮತ್ತು ದ್ವೇಷದ ಭಾಷಣಗಳನ್ನು ನೀಡಿದವರು ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
"ನಾನು ಹೇಳಿದ್ದಕ್ಕೆ ನಾನು ನಾಚಿಕೆಪಡುವುದಿಲ್ಲ, ನಾನು ಪೊಲೀಸರಿಗೆ ಹೆದರುವುದಿಲ್ಲ, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ" ಎಂದು ಪ್ರಬೋಧಾನಂದ ಗಿರಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಮತ್ತಷ್ಟು ಆಕ್ರೋಶಕ್ಕೆ ಗುರಿಯಾಗಿತ್ತು. ಪ್ರಬೋಧಾನಂದ ಗಿರಿ ಡಿಸೆಂಬರ್ 23 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉತ್ತರಾಖಂಡದ ಅವರ ಸಹವರ್ತಿ ಪುಷ್ಕರ್ ಧಾಮಿ ಸೇರಿದಂತೆ ಬಿಜೆಪಿ ನಾಯಕರೊಂದಿಗೆ ಆಗಾಗ್ಗೆ ಫೋಟೋಗಳಲ್ಲಿ ಕಾಣಿಸಿಕೊಂಡಿರುವುದನ್ನು ಎನ್ಡಿಟಿವಿ ವರದಿ ಮಾಡಿದೆ.
Recommended Video
ಇನ್ನೂ ಮುಸ್ಲಿಂ ಸಮುದಾಯ ವಿರುದ್ಧ ದ್ವೇಷದ ಭಾಷಣ ಮಾಡಿ ಮಾರಣಹೋಮಕ್ಕೆ ಪ್ರಚೋದನೆ ನೀಡುವ ಧರ್ಮ ಸಂಸದ್ನಂತ ಕಾರ್ಯಕ್ರಮಗಳನ್ನು ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ವಿದ್ವಾಂಸರ ಒಕ್ಕೂಟ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಜಮೀಯತ್- ಉಲ್- ಉಲಾಮಾ - ಹಿಂದ್ ಎನ್ನುವ ಮುಸ್ಲಿಂ ನಾಯಕರ ಸಂಘಟನೆ ಈ ಬಗ್ಗೆ ಸೋಮವಾರ ಸರ್ವೋಚ್ಚ ನ್ಯಾಯಾಯಲಕ್ಕೆ ಅರ್ಜಿ ಸಲ್ಲಿಸಿದ್ದು, ಇಂಥ ಕಾರ್ಯಕ್ರಮಗಳನ್ನು ನಿಷೇಧಿಸಬೇಕು. ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಕಾನೂನು ರಿತ್ಯಾ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದೆ.