ಹತ್ರಾಸ್ ಅತ್ಯಾಚಾರ ಪ್ರಕರಣ ನಾಲ್ವರು ಆರೋಪಿಗಳ ಮೆದುಳು ಪರೀಕ್ಷೆ
ಲಕ್ನೋ, ಅಕ್ಟೋಬರ್.22: ಉತ್ತರ ಪ್ರದೇಶ ಹತ್ರಾಸ್ ನಲ್ಲಿ 19 ವರ್ಷದ ಯುವತಿ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದ ನಾಲ್ವರು ಆರೋಪಿಗಳನ್ನು ಅಲಿಘರ್ ಕಾರಾಗೃಹದಿಂದ ಗುಜರಾತಿನ ಗಾಂಧಿನಗರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ನಾಲ್ವರು ಆರೋಪಿಗಳನ್ನು ಪಾಲಿಗ್ರಾಫ್ ಮತ್ತು ಬ್ರೈನ್ ಮ್ಯಾಪಿಂಗ್ ತಪಾಸಣೆಗೆ ಒಳಪಡಿಸುವುದಕ್ಕೆ ಕೇಂದ್ರ ತನಿಖಾ ತಂಡದ ಅಧಿಕಾರಿಗಳು ಮುಂದಾಗಿದ್ದಾರೆ. ಕಳೆದ ತಿಂಗಳಷ್ಟೇ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.
ಹತ್ರಾಸ್ ಅತ್ಯಾಚಾರ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರು. ಉತ್ತರ ಪ್ರದೇಶ ಸರ್ಕಾರದ ಮನವಿ ಬಗ್ಗೆ ಅಧಿಸೂಚನೆ ನೀಡುತ್ತಿದ್ದಂತೆ ಸಿಬಿಐ ಅಧಿಕಾರಿಗಳು ಐಪಿಸಿ ಸೆಕ್ಷನ್ 307 ಅಡಿ ಅತ್ಯಾಚಾರ, 307 ಅಡಿ ಕೊಲೆ ಯತ್ನ, 302 ಅಡಿ ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದರು.

ಸಿಬಿಐ ತನಿಖೆ ಶುರುವಾಗುವುದಕ್ಕೂ ಮೊದಲು ಆಗಿದ್ದೇನು?
ಕಳೆದ ಸಪ್ಟೆಂಬರ್.14ರಂದು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಹುಲ್ಲು ಕತ್ತರಿಸುತ್ತಿದ್ದ ಯುವತಿಯನ್ನು ಠಾಕೂರ್ ಸಮುದಾಯದ ನಾಲ್ವರು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ನಡೆಸಿದ್ದರು. ಅಲ್ಲದೇ, ಯುವತಿ ಕತ್ತು ಹಿಸುಕಿ, ನಾಲಗೆ ಕತ್ತರಿಸುವ ಮೂಲಕ ಕ್ರೌರ್ಯ ಮೆರೆದಿದ್ದರು ಎಂದು ಆರೋಪಿಸಲಾಗಿದೆ. ಎರಡು ವಾರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಯುವತಿ ಸಪ್ಟೆಂಬರ್.29ರಂದು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆದಲ್ಲಿ ಕೊನೆಯುಸಿರೆಳೆದಿದ್ದಳು. ಸಪ್ಟೆಂಬರ್.30ರ ಮಧ್ಯರಾತ್ರಿ 2.30ರ ಸಂದರ್ಭದಲ್ಲಿ ಪೊಲೀಸರೇ ಯುವತಿಯ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದರು.












Click it and Unblock the Notifications