ಹತ್ರಾಸ್ ಅತ್ಯಾಚಾರದ ವರದಿ ಸಲ್ಲಿಸಲು ಎಸ್ಐಟಿಗೆ 10 ದಿನ ಅವಕಾಶ
ಲಕ್ನೋ, ಅಕ್ಟೋಬರ್.07: ಉತ್ತರ ಪ್ರದೇಶ ಹತ್ರಾಸ್ ನಲ್ಲಿ 19 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ ಅಂತಿಮ ವರದಿ ಸಲ್ಲಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಚ್ಚುವರಿ 10 ದಿನಗಳ ಅವಧಿ ವಿಸ್ತರಿಸಿದ್ದಾರೆ.
ಅತ್ಯಾಚಾರ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದ ಉತ್ತರ ಪ್ರದೇಶ ಸರ್ಕಾರವು ಮೊದಲು ಏಳು ದಿನಗಳಲ್ಲೇ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಇದೀಗ ಹೆಚ್ಚುವರಿಯಾಗಿ 10 ದಿನಗಳ ಕಾಲಾವಧಿಯನ್ನು ನೀಡಿದೆ.
ಹತ್ರಾಸ್ ಸಂತ್ರಸ್ತೆ ಕುಟುಂಬಕ್ಕೆ ಸುಳ್ಳು ಹೇಳಲು 50 ಲಕ್ಷ ರೂ.!
"ಈ ಮೊದಲು ವಿಶೇಷ ತನಿಖೆ ತಂಡಕ್ಕೆ ನೀಡಿದ ಗಡುವಿನ ಪ್ರಕಾರ, ಬುಧವಾರ ಎಸ್ಐಟಿ ತಂಡವು ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಿತ್ತು. ಆದರೆ ಇತ್ತೀಚಿಗೆ ನಡೆದ ಘಟನೆಗಳು ಸೇರಿದಂತೆ ಭದ್ರತೆ ಹಾಗೂ ಎಲ್ಲ ಅಂಶಗಳನ್ನೊಳಗೊಂಡ ಅಂತಿಮ ವರದಿ ಸಲ್ಲಿಸಲು ಹೆಚ್ಚುವರಿ ಅವಧಿಯನ್ನು ನೀಡಿ ಸಿಎಂ ಆದೇಶಿಸಿದ್ದಾರೆ" ಎಂದು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕೆ ಅವಸ್ಥಿ ತಿಳಿಸಿದ್ದಾರೆ.
ಎಸ್ ಪಿ, ಸೇರಿದಂತೆ ಹಲವು ಅಧಿಕಾರಿಗಳ ಅಮಾನತು
ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಸಲ್ಲಿಸಿದ ಪ್ರಾಥಮಿಕ ವರದಿಯನ್ನು ಆಧರಿಸಿ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಹತ್ರಾಸ್ ಸೂಪರಿಟೆಂಡೆಂಟ್ ಆಫ್ ಪೊಲೀಸ್, ಡೆಪ್ಯುಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್, ಠಾಣೆಯ ಇನ್ಸ್ ಪೆಕ್ಟರ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದರು.
ಹತ್ರಾಸ್ ಸಂತ್ರಸ್ತೆ ಮನೆಗೆ ಮೆಟಲ್ ಡಿಟೆಕ್ಟರ್ ಅಳವಡಿಕೆ
ಇನ್ನೊಂದು ಬೆಳವಣಿಗೆಯಲ್ಲಿ ಹತ್ರಾಸ್ ಸಂತ್ರಸ್ತೆಯ ಕುಟುಂಬಕ್ಕೆ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಮನೆಯ ಸುತ್ತಲೂ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಇನ್ನೊಂದೆಡೆ ಹತ್ರಾಸ್ ಗ್ರಾಮದ ಗಡಿಯಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದು, ಗ್ರಾಮಕ್ಕೆ ಪ್ರವೇಶಿಸುವ ಪ್ರತಿಯೊಬ್ಬರ ಹೆಸರು ಮತ್ತು ಮಾಹಿತಿಯನ್ನು ದಾಖಲಿಸಿಕೊಳ್ಳಲಾಗುತ್ತಿದೆ.
ಮೇಲ್ವರ್ಗದ ಜನರಿಂದ ಜೀವ ಬೆದರಿಕೆ ಆರೋಪ
ಉತ್ತರ ಪ್ರದೇಶ ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ರಾಜ್ಯದಲ್ಲಿ ಮೇಲ್ವರ್ಗದ ಸಮುದಾಯ ಎಂದು ಗುರುತಿಸಿಕೊಂಡಿರುವ "ಠಾಕೂರ್"ಗಳಿಂದ ಜೀವ ಬೆದರಿಕೆಯಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಕುಟುಂಬ ಸದಸ್ಯರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಸರ್ಕಾರದ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದರು. ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಕುಟುಂಬ ಸದಸ್ಯರ ಭದ್ರತೆಗಾಗಿ ಅವರ ನಿವಾಸದ ಸುತ್ತ 12 ರಿಂದ 15 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ದಿನದ 24 ಗಂಟೆ ಪೊಲೀಸ್ ಕಣ್ಗಾವಲು ಹಾಕಲಾಗಿದೆ ಎಂದು ಹತ್ರಾಸ್ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಮೂವರು ಎಸ್ಎಚ್ಓ, ಒಬ್ಬ ಡೆಪ್ಯುಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಶ್ರೇಣಿಯ ಅಧಿಕಾರಿ ಮತ್ತು ಪೊಲೀಸ್ ಕಾನ್ಸ್ ಟೇಬಲ್ ರನ್ನು ನಿಯೋಜಿಸಲಾಗಿದೆ.
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ
ಕಳೆದ ಸಪ್ಟೆಂಬರ್.14ರಂದು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಹುಲ್ಲು ಕತ್ತರಿಸುತ್ತಿದ್ದ ಯುವತಿಯನ್ನು ಠಾಕೂರ್ ಸಮುದಾಯದ ನಾಲ್ವರು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ನಡೆಸಿದ್ದರು. ಇಷ್ಟಕ್ಕೆ ಸುಮ್ಮನಾಗದೇ ಯುವತಿ ಕತ್ತು ಹಿಸುಕಿ, ನಾಲಗೆ ಕತ್ತರಿಸುವ ಮೂಲಕ ಕ್ರೌರ್ಯ ಮೆರೆದಿದ್ದರು. ಎರಡು ವಾರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ದಲಿತ ಯುವತಿ ಸಪ್ಟೆಂಬರ್.29ರಂದು ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆದಲ್ಲಿ ಕೊನೆಯುಸಿರೆಳೆದಿದ್ದಳು. ಸಪ್ಟೆಂಬರ್.30ರ ಮಧ್ಯರಾತ್ರಿ 2.30ರ ಸಂದರ್ಭದಲ್ಲಿ ಪೊಲೀಸರೇ ಯುವತಿಯ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದರು.