ಯುಪಿಯಲ್ಲಿ ಒಂದೇ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಪತಿ-ಪತ್ನಿ ಪೈಪೋಟಿ
ಲಕ್ನೋ, ಜನವರಿ 21: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯು ಹಲವು ಕೌತಕಗಳಿಗೆ ವೇದಿಕೆ ಆಗುತ್ತಿದೆ. ಸಮಾಜವಾದಿ ಜೊತೆಗಿನ ಪೈಪೋಟಿ ನಡುವೆ ಭಾರತೀಯ ಜನತಾ ಪಕ್ಷಕ್ಕೆ ಲಕ್ನೋದಲ್ಲಿ ಹೊಸ ಸವಾಲು ಎದುರಾಗಿದೆ.
ಲಕ್ನೋದ ಸರೋಜಿನಿ ನಗರ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯುವುದಕ್ಕಾಗಿ ಹಾಲಿ ಸಚಿವೆ ಮತ್ತು ಅವರ ಪತಿ ನಡುವೆ ಪೈಪೋಟಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿಯಿಂದ ಉಚ್ಛಾಟಿತಗೊಂಡಿದ್ದ ದಯಾಶಂಕರ್ ಸಿಂಗ್, ಮತ್ತೆ ಬಿಜೆಪಿಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದಾರೆ.
2017ರಲ್ಲಿ ಸರೋಜಿನಿ ನಗರ ಕ್ಷೇತ್ರದಿಂದ ಇದೇ ದಯಾಶಂಕರ್ ಸಿಂಗ್ ಪತ್ನಿ ಸ್ವಾತಿ ಸಿಂಗ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅಷ್ಟಲ್ಲದೇ ಯೋಗಿ ಸರ್ಕಾರದಲ್ಲಿ ಸಚಿವೆ ಸ್ಥಾನವನ್ನು ಪಡೆದುಕೊಂಡಿದ್ದರು. ಈಗ ಇದೇ ದಂಪತಿ ನಡುವೆ ಒಂದೇ ಕ್ಷೇತ್ರದ ಬಿಜೆಪಿ ಟಿಕೆಟ್ ಪಡೆಯುವುದಕ್ಕೆ ಪೈಪೋಟಿ ನಡೆಯುತ್ತಿದೆ.
ಬಿಜೆಪಿ
ಪ್ರಬಲ
ನಾಯಕ
ದಯಾಶಂಕರ್
ಸಿಂಗ್:
ಉತ್ತರ ಪ್ರದೇಶ ಬಲ್ಲಿಯದಲ್ಲಿ ಇದೇ ದಯಾಶಂಕರ್ ಸಿಂಗ್ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದರು. 2016ರಲ್ಲಿ ಬಿಜೆಪಿಯಿಂದ ಉಚ್ಛಾಟನೆಯಾಗುವ ಮೊದಲು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದರು. ಸಚಿವೆ ಸ್ವಾತಿ ಸಿಂಗ್ ಪತಿ ದಯಾಶಂಕರ್ ಸಿಂಗ್ ಈಗ ಬಿಜೆಪಿಗೆ ವಾಪಸ್ ಆಗಿದ್ದಾರೆ. ಇದರ ಮಧ್ಯೆ ಸರೋಜಿನಿ ನಗರ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ತಿಳಿದು ಬಂದಿದೆ.
"ಕಳೆದ ಬಾರಿ ಸ್ವಾತಿ ಸಿಂಗ್ ಬಿಜೆಪಿಯಿಂದ ಸ್ಪರ್ಧಿಸಿದ್ದು, ಈ ಬಾರಿ ಅದೇ ಸ್ಥಾನದಲ್ಲಿ ನಾನು ಸ್ಪರ್ಧಿಸಲು ಬಯಸುತ್ತಿದ್ದೇೆನೆ. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ವರಿಷ್ಠರ ಸೂಚನೆ ಪಾಲಿಸುತ್ತೇನೆ," ಎಂದು ದಯಾಶಂಕರ್ ಸಿಂಗ್ ಹೇಳಿದ್ದಾರೆ.
ಹೆಸರು ಉಳ್ಳವರಿಗೆ ಬಿಜೆಪಿ ಟಿಕೆಟ್:
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದೆ. ಇದರ ಮಧ್ಯೆ ಗೆಲ್ಲುವ ಕುದುರೆಗೆ ಮಣೆ ಹಾಕಲು ಬಿಜೆಪಿ ನಿರ್ಧರಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ, 'ಬಹಳ ಸಮಾಲೋಚನೆಯ ನಂತರ ಟಿಕೆಟ್ ನೀಡಲಾಗುತ್ತದೆ, ಸಮೀಕ್ಷೆಯು ಯಾರ ಹೆಸರಿದೆಯೋ ಅವರಿಗೆ ಟಿಕೆಟ್ ನೀಡಲಾಗುವುದು,' ಎಂದಿದ್ದಾರೆ.
2016ರಲ್ಲಿ ದಯಾಶಂಕರ್ ಸಿಂಗ್ ಉಚ್ಛಾಟನೆ:
ಕಳೆದ 2016ರಲ್ಲಿ ದಯಾಶಂಕರ್ ಸಿಂಗ್ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಹಣಕ್ಕಾಗಿ ಪಕ್ಷದ ಟಿಕೆಟ್ ಮಾರಾಟ ಮಾಡುತ್ತಿರುವ ಅವರು ವೇಶ್ಯೆಯಂತೆ ಎಂಬ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ರಾಜ್ಯಾದ್ಯಂತ ದಯಾಶಂಕರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಭಾರತೀಯ ಜನತಾ ಪಕ್ಷವೇ ಅವರನ್ನು ಉಚ್ಚಾಟನೆ ಮಾಡಿತ್ತು.
ಉತ್ತರ ಪ್ರದೇಶದಲ್ಲಿ ಚುನಾವಣೆ:
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.
Recommended Video