100 ದಿನ ಅಲ್ಲ, 100 ತಿಂಗಳಾದರೂ ರೈತರಿಗೆ ಕಾಂಗ್ರೆಸ್ ಬೆಂಬಲ
ಲಕ್ನೋ, ಮಾರ್ಚ್.07: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ 100 ದಿನ ಅಲ್ಲ 100 ತಿಂಗಳು ಕಳೆದರೂ ಕಾಂಗ್ರೆಸ್ ರೈತರೊಂದಿಗೆ ನಿಲ್ಲಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ.
ಉತ್ತರ ಪ್ರದೇಶ ಮೀರತ್ ಜಿಲ್ಲೆಯಲ್ಲಿ ನಡೆದ ಕಿಸಾನ್ ಮಹಾ ಪಂಚಾಯತ್ ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೃಷಿ ಕಾಯ್ದೆಗಳು ದೇಶದ ರೈತರಿಗಾಗಿ ಇರುವುದಾ ಇಲ್ಲವೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋಟ್ಯಂಧಿಪತಿ ಗೆಳಯರಿಗಾಗಿ ಇರುವುದಾ ಎಂದು ಪ್ರಶ್ನಿಸಿದ್ದಾರೆ.
ಕೃಷಿ ಕಾಯ್ದೆ: ವಿರೋಧ ಪಕ್ಷಗಳ ವಿರೋಧಕ್ಕೆ ಸಚಿವರ ಹೊಸ ಅರ್ಥ!
ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ 100 ದಿನಗಳೇ ಪೂರ್ಣಗೊಂಡಿವೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಲಕ್ಷಾಂತರ ರೈತರು ಹೋರಾಟ ನಡೆಸುತ್ತಿದ್ದಾರೆ. ಕೃಷಿ ಕಾಯ್ದೆಗಳು ರೈತರಿಗಾಗಿಯೇ ರೂಪಿಸಿದ್ದರೆ, ಅವರು ದೆಹಲಿ ಗಡಿ ಪ್ರದೇಶಗಳಲ್ಲೇ ಏಕೆ ಇಂದಿಗೂ ಪ್ರತಿಭಟನೆ ನಡೆಸುತ್ತಿದ್ದರು" ಎಂದು ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ.
ರೈತರ ಪ್ರತಿಭಟನೆಗೆ ಬರೋಬ್ಬರಿ 101 ದಿನ:
ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ 101 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ. ಈ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ.