ಲಖಿಂಪುರ ಖೇರಿ ಗಲಭೆ; ಕೇಂದ್ರ ಗೃಹ ಸಚಿವರ ಪುತ್ರನ ಬಂಧನ
ಲಕ್ನೋ, ಅಕ್ಟೋಬರ್ 10; ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಿ ಅಶಿಶ್ ಮಿಶ್ರಾ ಬಂಧಿಸಿದ್ದಾರೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ ಅಶಿಶ್ ಮಿಶ್ರಾ ತಲೆಮರೆಸಿಕೊಂಡಿದ್ದರು.
ಪೊಲೀಸರ ಮುಂದೆ ಹಾಜರಾಗುವಂತೆ ಅಶಿಶ್ ಮಿಶ್ರಾಗೆ ಉತ್ತರ ಪ್ರದೇಶದ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಸಹಕಾರ ನೀಡಿದ, ಸರಿಯಾಗಿ ಸ್ಪಂದಿಸದ ಆರೋಪದಡಿಯಲ್ಲಿ ಅಶಿಶ್ ಮಿಶ್ರಾ ಬಂಧಿಸಲಾಗಿದೆ ಎಂದು ಡಿಜಿಪಿ ಉಪೇಂದ್ರ ಅಗರ್ವಾಲ್ ಹೇಳಿದ್ದಾರೆ.
ಅಶಿಶ್ ಮಿಶ್ರಾರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಧೀಶರು ಸೋಮವಾರದ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೋಮವಾರ ಪುನಃ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ.
ಕಳೆದ ಭಾನುವಾರ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಚಾರದಲ್ಲಿ 4 ರೈತರು ಸೇರಿ 8 ಜನರು ಮೃತಪಟ್ಟಿದ್ದಾರೆ. ಈ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಸುಪ್ರೀಂಕೋರ್ಟ್ ಸಹ ಅತೃಪ್ತಿ ವ್ಯಕ್ತಪಡಿಸಿದೆ. ಗಲಭೆ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ಗೆ ಮನವಿ ಮಾಡಲಾಗಿದೆ.

ಅಕ್ಟೋಬರ್ 11ರ ತನಕ ನ್ಯಾಯಾಂಗ ಬಂಧನ
"ಅಶಿಶ್ ಮಿಶ್ರಾರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಯಿತು. ಅಕ್ಟೋಬರ್ 11ರ ಸೋಮವಾರ ಅರ್ಜಿಯ ವಿಚಾರಣೆ ನಡೆಯಲಿದೆ. ಅಲ್ಲಿಯ ತನಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರು ಮೂರು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ನಾವು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರ ವಶಕ್ಕೆ ನೀಡುವ ಕುರಿತು ನ್ಯಾಯಾಲಯ ಸೋಮವಾರ ತೀರ್ಮಾನ ಕೈಗೊಳ್ಳಲಿದೆ" ಎಂದು ಅಶಿಶ್ ಮಿಶ್ರಾ ಪರ ವಕೀಲ ಅವದೇಶ್ ಕುಮಾರ್ ಹೇಳಿದ್ದಾರೆ.

ವಿಚಾರಣೆ ಬಳಿಕ ಬಂಧನ
ಶನಿವಾರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಅಶಿಶ್ ಮಿಶ್ರಾಗೆ ನೋಟಿಸ್ ನೀಡಲಾಗಿತ್ತು. ಡಿಜಿಪಿ ಉಪೇಂದ್ರ ಅಗರ್ವಾಲ್ ನೇತೃತ್ವದ 9 ಸದಸ್ಯರ ಎಸ್ಐಟಿ 11 ಗಂಟೆಗಳ ಕಾಲ ಅಶಿಶ್ ಮಿಶ್ರಾ ವಿಚಾರಣೆ ನಡೆಸಿತು. ಬಳಿಕ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂಬ ಕಾರಣದಿಂದಾಗಿ ಶನಿವಾರ ರಾತ್ರಿ ಬಂಧಿಸಲಾಗಿದೆ.
ಲಖಿಂಪುರ ಹಿಂಸಾಚಾರದ ಕುರಿತು ದಾಖಲಾಗಿರುವ ಎಫ್ಐಆರ್ನಲ್ಲಿ 7 ಜನರ ಹೆಸರನ್ನು ಉಲ್ಲೇಖಿಸಲಾಗಿದೆ. ಗುರುವಾರ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಉತ್ತರ ಪ್ರದೇಶ ಸರ್ಕಾರ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಿದೆ.

ರಾಷ್ಟ್ರಮಟ್ಟದಲ್ಲಿ ಚರ್ಚೆ
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಇಂತಹ ಸಂದರ್ಭದಲ್ಲಿ ಕಾರ್ಯಕ್ರಮ ಮುಗಿಸಿಕೊಂಡಿ ಹೋಗುತ್ತಿದ್ದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ ಆಶಿಶ್ ಇದ್ದ ಕಾರು ಪ್ರತಿಭಟನಾನಿತರ ರೈತರಿಗೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದರು. ಬಳಿಕ ಆಕ್ರೋಶಗೊಂಡ ರೈತರು ಸಚಿವರ ಬೆಂಗಾವಲು ಪಡೆ ಕಾರನ್ನು ಅಡ್ಡಗಟ್ಟಿ ಬೆಂಕಿ ಹಚ್ಚಿದ್ದು, ಈ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಟ್ಟು 8 ಜನರು ಮೃತಪಟ್ಟಿದ್ದಾರೆ.

ಸುಪ್ರೀಂಕೋರ್ಟ್ನಲ್ಲಿ ಸುಮೋಟೋ ಕೇಸ್
ಲಖಿಂಪುರ ಖೇರಿ ಘಟನೆ ಖಂಡಿಸಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಉತ್ತರ ಪ್ರದೇಶದ ಇಬ್ಬರು ವಕೀಲರು ಸುಪ್ರೀಂಕೋರ್ಟ್ ಉಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರವನ್ನು ಬರೆದಿದ್ದರು. ಈ ಪತ್ರದ ಆಧಾರದ ಮೇಲೆ ಕೋರ್ಟ್ ಸುಮೋಟೋ ಕೇಸ್ ದಾಖಲಿಸಿಕೊಂಡು ಅರ್ಜಿ ವಿಚಾರಣೆ ನಡೆಸುತ್ತಿದೆ.
ಶುಕ್ರವಾರ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ಪೀಠ ಲಖಿಂಪುರ ಖೇರಿ ಗಲಭೆ ಪ್ರಕರಣದ ತನಿಖೆ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿತ್ತು.












Click it and Unblock the Notifications