2022 ರ ಯುಪಿ ಚುನಾವಣಾ ಕಾರ್ಯತಂತ್ರದ ಬಗ್ಗೆ ಬಿಜೆಪಿ, ಆರ್ಎಸ್ಎಸ್ ಸಭೆ - ಪಿಎಂ ಮೋದಿ ಭಾಗಿ
ಲಕ್ನೋ, ಮೇ 24: ಉತ್ತರ ಪ್ರದೇಶದಲ್ಲಿ ಬಿಜೆಪಿಯು ಮುಂದಿನ ಚುನಾವಣೆಯಲ್ಲಿನ ತನ್ನ ಕಾರ್ಯತಂತ್ರದ ಬಗ್ಗೆ ಈಗಾಗಲೇ ಸಭೆಗಳನ್ನು ಆರಂಭಿಸಿದೆ. ಉತ್ತರ ಪ್ರದೇಶದಲ್ಲಿ ಕೋವಿಡ್ -19 ಬಿಕ್ಕಟ್ಟನ್ನು ನಿಭಾಯಿಸಿದ ರೀತಿಯು ಪಕ್ಷದ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕದ ಮಧ್ಯೆ ಉತ್ತರಪ್ರದೇಶದಲ್ಲಿ2022 ರ ವಿಧಾನಸಭಾ ಚುನಾವಣೆಗೆ ಪಕ್ಷದ ಚುನಾವಣಾ ಕಾರ್ಯತಂತ್ರ ರೂಪಿಸುವ ಕಾರ್ಯವನ್ನು ಬಿಜೆಪಿಯು ಒಂದು ವರ್ಷಕ್ಕೂ ಮುನ್ನವೇ ಆರಂಭಿಸಿದೆ.
2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಂದಿನ ದಾರಿ ಕುರಿತು ಚರ್ಚಿಸಲು ಹಲವಾರು ಹಿರಿಯ ನಾಯಕರು ಕಳೆದ ಕೆಲವು ದಿನಗಳಿಂದ ಪ್ರಸ್ತಾಪ ಮಾಡುತ್ತಿದ್ದಾರೆ. ಈ ಹಿನ್ನೆಲೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಸಹ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.
ಮುಂದಿನ ವರ್ಷ ಯುಪಿಯಲ್ಲಿ ನಡೆಯುತ್ತಿರುವ ಚುನಾವಣೆಯ ಮೇಲೆ ಕೋವಿಡ್ ಬಿಕ್ಕಟ್ಟಿನ ಪರಿಣಾಮ ಬೀರಬಹುದು ಎಂಬ ಆತಂಕ ಬಿಜೆಪಿ ನಾಯಕರಲ್ಲಿ ಮನೆ ಮಾಡಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ತನ್ನ ಪಕ್ಷದ ಸ್ಥಾನವನ್ನು ಬಲಪಡಿಸಲು ಬಿಜೆಪಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಆರ್ಎಸ್ಎಸ್ ಮತ್ತು ಬಿಜೆಪಿಯ ಹಿರಿಯ ಮುಖಂಡರು ಚರ್ಚಿಸಿದ್ದಾರೆ.

ಮೂಲಗಳ ಪ್ರಕಾರ, ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಯುಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಜೊತೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಆರ್ಎಸ್ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಸೇರಿಕೊಂಡಿದ್ದರು ಎಂದು ವರದಿ ತಿಳಿಸಿದೆ.
ಪಂಚಾಯತ್ ಚುನಾವಣೆಯಲ್ಲಿ ಪ್ರಮುಖ ಸ್ಥಾನಗಳಲ್ಲಿ ಹಿನ್ನೆಡೆ ಸಾಧಿಸಿದ ಹಿನ್ನೆಲೆ ಬಿಜೆಪಿ 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ 2021 ರಲ್ಲೇ ತಯಾರಿ ಆರಂಭಿಸಿದೆ ಎಂದು ಹೇಳಲಾಗಿದೆ.

ಕೋವಿಡ್ -19 ಸಾಂಕ್ರಾಮಿಕದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಟೀಕೆಗೆ ಗುರಿಯಾದ ಸಂದರ್ಭ
ಪಿಎಂ ಮೋದಿ ಮತ್ತು ಅಮಿತ್ ಶಾ ಸೇರಿದಂತೆ ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರ ನಡುವೆ ದೆಹಲಿಯಲ್ಲಿ ಸಭೆ ನಡೆದಿತ್ತು. ಇತ್ತೀಚೆಗೆ ಕೋವಿಡ್ -19 ರೋಗಿಗಳದ್ದಾಗಿರಬಹುದು ಎಂದು ಶಂಕಿಸಲಾದ ನೂರಾರು ಶವಗಳು ಗಂಗಾ ನದಿಯಲ್ಲಿ ತೇಲಿ ಬಂದಿತ್ತು. ಇದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು.
ಇನ್ನು ಕೊರೊನಾ ಎರಡನೇ ಅಲೆಯನ್ನು ಯೋಗಿ ಆದಿತ್ಯನಾಥ್ ಸರ್ಕಾರ ನಿಭಾಯಿಸುತ್ತಿರುವ ರೀತಿಯನ್ನು ವಿರೋಧ ಪಕ್ಷಗಳು ಮಾತ್ರವಲ್ಲ, ಆಡಳಿತಾರೂಢ ಬಿಜೆಪಿಯ ಸದಸ್ಯರು ಕೂಡಾ ಪ್ರಶ್ನಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)












Click it and Unblock the Notifications