"ಚೀನಾ, ಪಾಕಿಸ್ತಾನಕ್ಕೆ ಹೋಗುವ ಮೋದಿ ರೈತರನ್ನು ಏಕೆ ಭೇಟಿ ಆಗಲ್ಲ"
ಲಕ್ನೋ, ಫೆಬ್ರವರಿ.10: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯದಂತೆ ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕರೆ ಕೊಟ್ಟಿದ್ದಾರೆ.
ಉತ್ತರ ಪ್ರದೇಶದ ಸಹರಾಂಪುರ್ ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರವು ಕೃಷಿ ಸಂಬಂಧಿತ ಕಾಯ್ದೆಗಳನ್ನು ರೈತರ ಬದಲು ಕೋಟ್ಯಾಧಿಪತಿ ಆಗಿರುವ ಉದ್ಯಮಿಗಳಿಗಾಗಿ ಜಾರಿಗೊಳಿಸಿದೆ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದರೆ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು. ರೈತರ ಹೋರಾಟವು ಅಸ್ತಿತ್ವದ ಸಂಕೇತವಾಗಿದ್ದು, ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂದೆ ಸರಿಯಬೇಕಿಲ್ಲ. ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ನಿಮ್ಮೊಂದಿಗೆ ಹೋರಾಟಕ್ಕೆ ನಾವೂ ಕೈಜೋಡಿಸುತ್ತೇವೆ. ವಿವಾದಿತ ಕಾಯ್ದೆಗಳನ್ನೆಲ್ಲ ರದ್ದುಗೊಳಿಸಬೇಕು ಹಾಗೂ ರೈತರು ಬೆಳೆದ ಬೆಳೆಗೆ ಮೌಲ್ಯಯುತ ಬೆಂಬಲ ಬೆಲೆಯನ್ನು ನೀಡಬೇಕು ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆಗ್ರಹಿಸಿದ್ದಾರೆ.

ಸಂಗ್ರಹಣೆ ಕಾಯ್ದೆ ಬಗ್ಗೆ ಪ್ರಿಯಾಂಕಾ ಗಾಂಧಿ ಉಲ್ಲೇಖ:
ಭಾರತದಲ್ಲಿ 1955ರಲ್ಲಿ ಅಂದಿನ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರು ಸಂಗ್ರಹಣೆ ಕಾಯ್ದೆಯನ್ನು ಜಾರಿಗೊಳಿಸಿದ್ದರು. ಆದರೆ ಬಿಜೆಪಿ ಸರ್ಕಾರವು ಅದನ್ನು ರದ್ದುಗೊಳಿಸಿ ಇದೀಗ ಕೋಟ್ಯಾಧಿಪತಿಗಳಿಗಾಗಿ ಹೊಸ ಕಾಯ್ದೆಗಳನ್ನು ಜಾರಿಗೊಳಿಸಲು ಹೊರಟಿದೆ ಎಂದು ದೂಷಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೃದಯವು ಬಂಡವಾಳಶಾಹಿಗಳಿಗಾಗಿ ಮಿಡಿಯುತ್ತದೆ. ರೈತರನ್ನು ಭಯೋತ್ಪಾದಕರು ಎಂದು ಕರೆಯುತ್ತಾರೆ. ಮೋದಿಯವರು ಚೀನಾಗೆ ಹೋಗುತ್ತಾರೆ, ಪಾಕಿಸ್ತಾನಕ್ಕೆ ಹೋಗುತ್ತಾರೆ. ಆದರೆ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಮಾತ್ರ ಏಕೆ ಭೇಟಿ ನೀಡುವುದಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಕೃಷಿ ಕಾಯ್ದೆ ವಿರುದ್ಧ ಅಕ್ಟೋಬರ್ ವರೆಗೂ ಹೋರಾಟ
ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಕಳೆದ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಮೂರು ಗಡಿಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಈಗಾಗಲೇ 77 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ.












Click it and Unblock the Notifications