ಉತ್ತರ ಪ್ರದೇಶದ ಮೂರು ಕಿಸಾನ್ ಪಂಚಾಯತ್ ನಲ್ಲಿ ಪ್ರಿಯಾಂಕಾ ಗಾಂಧಿ
ಲಕ್ನೋ, ಫೆಬ್ರವರಿ.14: ಉತ್ತರ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಯಲಿರುವ ಕಿಸಾನ್ ಮಹಾ ಪಂಚಾಯತ್ ಸಭೆಗಳಲ್ಲಿ ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸಲಿದ್ದಾರೆ.
ಸೋಮವಾರ ಬಿಜ್ನೋರ್ ಗೆ ಭೇಟಿ ನೀಡಲಿರುವ ಪ್ರಿಯಾಂಕಾ ಗಾಂಧಿ, ಚಂದಪುರ್ ನಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಕಿಸಾನ್ ಮಹಾ ಪಂಚಾಯತ್ ನಲ್ಲಿ ರೈತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ.19 ಮಥುರಾ ಮತ್ತು ಫೆಬ್ರವರಿ.20ರಂದು ಮುಜಾಫರ್ ನಗರ್ ನಲ್ಲಿ ನಡೆಯಲಿರುವ ಕಿಸಾನ್ ಮಹಾಪಂಚಾಯತ್ ನಲ್ಲಿ ಭಾಗವಹಿಸಲಿದ್ದಾರೆ.
ಕೇಂದ್ರದ ವಿರುದ್ಧ ಕೂಗು: ಪಂಜಾಬ್ ಮಹಾಪಂಚಾಯತ್ ನಲ್ಲಿ ಲಕ್ಷಲಕ್ಷ ರೈತರು!
ಕಳೆದ ಫೆಬ್ರವರಿ.10ರಂದು ಉತ್ತರ ಪ್ರದೇಶದ ಸಹರಾಂಪುರ್ ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರವು ಕೃಷಿ ಸಂಬಂಧಿತ ಕಾಯ್ದೆಗಳನ್ನು ರೈತರ ಬದಲು ಕೋಟ್ಯಾಧಿಪತಿ ಆಗಿರುವ ಉದ್ಯಮಿಗಳಿಗಾಗಿ ಜಾರಿಗೊಳಿಸಿದೆ ಎಂದು ಆರೋಪಿಸಿದ್ದರು.
ಪ್ರಧಾನಿ ವಿರುದ್ಧ ಪ್ರಿಯಾಂಕಾ ಗಾಂಧಿ ಸಿಡಿಮಿಡಿ:
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೃದಯವು ಬಂಡವಾಳಶಾಹಿಗಳಿಗಾಗಿ ಮಿಡಿಯುತ್ತದೆ. ರೈತರನ್ನು ಭಯೋತ್ಪಾದಕರು ಎಂದು ಕರೆಯುತ್ತಾರೆ. ಮೋದಿಯವರು ಚೀನಾಗೆ ಹೋಗುತ್ತಾರೆ, ಪಾಕಿಸ್ತಾನಕ್ಕೆ ಹೋಗುತ್ತಾರೆ. ಆದರೆ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಮಾತ್ರ ಏಕೆ ಭೇಟಿ ನೀಡುವುದಿಲ್ಲ ಎಂದು ಪ್ರಶ್ನೆ ಮಾಡಿದ್ದರು. ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಕಳೆದ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಮೂರು ಗಡಿಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಈಗಾಗಲೇ 81 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ.