ಉ.ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ: ಲಾಲೂ ಪುತ್ರ ತೇಜಸ್ವಿ ಯಾದವ್ ನುಡಿದ ಭವಿಷ್ಯ
ಲಕ್ನೋ, ಜ 14: ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ, ಉತ್ತರಪ್ರದೇಶದಲ್ಲಿ ಚುನಾವಣಾ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ, ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್, ಮಾಯಾವತಿಯವರನ್ನು ಭೇಟಿಯಾಗಿ, ಶುಭ ಕೋರಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ತೇಜಸ್ವಿ ಯಾದವ್, ಉತ್ತರಪ್ರದೇಶದಲ್ಲಿ ಬಿಜೆಪಿಯ ಪತನ ಸನ್ನಿಹಿತವಾಗುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ-ಎಸ್ಪಿ ಮೈತ್ರಿಯ ಬಿಸಿ ಮೋದಿ ನೇತೃತ್ವದ ಬಿಜೆಪಿಗೆ ತಟ್ಟಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಉತ್ತರ ಪ್ರದೇಶದಲ್ಲಿ ಗೆಲ್ಲುವುದು ಕಾಂಗ್ರೆಸ್ ಗೆ ಪ್ರತಿಷ್ಠೆಯ ಪ್ರಶ್ನೆ
ಉತ್ತರಪ್ರದೇಶದ ಜೊತೆಗೆ ಬಿಹಾರದಲ್ಲೂ ಬಿಜೆಪಿಗೆ ಸಂಕಷ್ಟದ ಕಾಲ ಆರಂಭವಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ರಚಿಸಿದ ಸಂವಿಧಾನವನ್ನು ತೆಗೆದು, ನಾಗಪುರದ ಕಾನೂನನ್ನು ತರಲು, ಮೋದಿ ಸರಕಾರ ಮುಂದಾಗಿದೆ ಎಂದು ತೇಜಸ್ವಿ ಆರೋಪಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ, ಉತ್ತರಪ್ರದೇಶದಲ್ಲಿ ಬಿಜೆಪಿ ಮೈತ್ರಿಕೂಟ ಒಂದೇ ಒಂದು ಸೀಟನ್ನು ಗೆಲ್ಲದೇ ವೈಟ್ ವಾಶ್ ಆಗಲಿದೆ ಎಂದು ಹೇಳಿರುವ ತೇಜಸ್ವಿ, ಎಲ್ಲಾ 78 (ಎರಡು ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ಬಿಟ್ಟುಕೊಟ್ಟಿದೆ) ಕ್ಷೇತ್ರಗಳಲ್ಲಿ ಬಿಎಸ್ಪಿ-ಎಸ್ಪಿ ಮೈತ್ರಿಕೂಟದ ಅಭ್ಯರ್ಥಿ ಜಯಸಾಧಿಸಲಿದ್ದಾರೆಂದು ತೇಜಸ್ವಿ ಯಾದವ್ ಹೇಳಿದ್ದಾರೆ.
ಬಿಎಸ್ಪಿ-ಎಸ್ಪಿ ಮೈತ್ರಿ : ಪ್ರಧಾನಿ ಮೋದಿ ವಿರುದ್ಧ ಪ್ರಬಲ ಸ್ಪರ್ಧಿ ಬಹುತೇಕ ಫೈನಲ್?
ಜನವರಿ ಹನ್ನೆರಡರಂದು ಬಿಎಸ್ಪಿ ಮತ್ತು ಎಸ್ಪಿ ಮೈತ್ರಿ ಮಾಡಿಕೊಳ್ಳುವುದಾಗಿ ಅಧಿಕೃತವಾಗಿ ಪ್ರಕಟಿಸಿತ್ತು. ಮೈತ್ರಿಯಿಂದ ಕಾಂಗ್ರೆಸ್ ಅನ್ನು ಹೊರಗಿಟ್ಟಿರುವ ಮಾಯಾ-ಅಖಿಲೇಶ್, ರಾಹುಲ್ ಮತ್ತು ಸೋನಿಯಾ ಗಾಂಧಿ ಸ್ಪರ್ಧಿಸುವ ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಇರುವ ತೀರ್ಮಾನಕ್ಕೆ ಬಂದಿದೆ.
ಬಹುಜನ ಸಮಾಜಪಕ್ಷ ಮತ್ತು ಸಮಾಜವಾದಿ ಪಕ್ಷದ ನಡೆಯಿಂದ ಸಿಟ್ಟಾಗಿರುವ ಕಾಂಗ್ರೆಸ್, ನಮ್ಮನ್ನು ಕಡೆಗಣಿಸಬೇಡಿ ಎಂದು ಉತ್ತರಪ್ರದೇಶದ ಎಲ್ಲಾ ಎಂಬತ್ತು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ವಕ್ತಾರರು ಹೇಳಿದ್ದಾರೆ.