ಉ.ಪ್ರ ಚುನಾವಣೆ: ಪಿಎಸ್ಪಿಎಲ್ ಜತೆ ಅಖಿಲೇಶ್ ಯಾದವ್ ಮೈತ್ರಿ
ಲಕ್ನೋ, ನವೆಂಬರ್ 03: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ತಮ್ಮ ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಪ್ರಗತಿಶೀಲ ಸಮಾಜವಾದಿ ಪಾರ್ಟಿ ಲೋಹಿಯಾ (ಪಿಎಸ್ಪಿಎಲ್) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಸಮಾಜವಾದಿ ಪಕ್ಷವು ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ. ನನ್ನ ಚಿಕ್ಕಪ್ಪನ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳಲಿದ್ದೇವೆ. ಸಮಾಜವಾದಿ ಪಕ್ಷವು ಅವರಿಗೆ ಸಂಪೂರ್ಣ ಗೌರವವನ್ನು ನೀಡುತ್ತದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಸ್ಪಿಯಿಂದ ಬೇರ್ಪಟ್ಟು ಪ್ರಗತಿಶೀಲ ಸಮಾಜವಾದಿ ಪಕ್ಷ -ಲೋಹಿಯಾ (ಪಿಎಸ್ಪಿ-ಎಲ್) ಸ್ಥಾಪಿಸಿದ ತಮ್ಮ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರಿಗೆ ಪಕ್ಷದಿಂದ 'ತಕ್ಕ ಗೌರವ' ಸಿಗಲಿದೆ ಎಂದು ಮಾಜಿ ಸಿಎಂ ಹೇಳಿದ್ದಾರೆ.

ಅಖಿಲೇಶ್ ಯಾದವ್ ಅವರ ನಿರ್ಧಾರವನ್ನು ಸ್ವಾಗತಿಸಿರುವ ಸಮಾಜವಾದಿ ಪಕ್ಷದ ವಕ್ತಾರರು, ಈಗ ರಚಿಸಲಾಗುತ್ತಿರುವ ಮೈತ್ರಿಕೂಟವು ಸಮಾಜವಾದಿ ಸಿದ್ಧಾಂತದ ಆಧಾರದ ಮೇಲೆ ಮುಂದಿನ ಚುನಾವಣೆಯಲ್ಲಿ ಗೆದ್ದು, ಪ್ರಬಲ ಸರ್ಕಾರವನ್ನು ರಚಿಸಲಿದೆ ಎಂದು ಹೇಳಿದ್ದಾರೆ.
ಮತಗಳಿಗಾಗಿ ಅಖಿಲೇಶ್ ಯಾದವ್ ಬೇಕಿದ್ದರೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗುತ್ತಾರೆ ಎಂದು ಉತ್ತರ ಪ್ರದೇಶ ಸಚಿವ ಆನಂದ್ ಸ್ವರೂಪ್ ಶುಕ್ಲಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ತೀವ್ರ ಆರೋಪ- ಪ್ರತ್ಯಾರೋಪಕ್ಕೆ ಕಾರಣವಾಗಿದೆ.
ಪಿಎಸ್ಪಿಎಲ್ ವಕ್ತಾರ ಅರವಿಂದ್ ಸಿಂಗ್, ಅಖಿಲೇಶ್ ಯಾದವ್ ಅವರು ಮೈತ್ರಿ ಬಗ್ಗೆ ಮಾತನಾಡಿರುವುದು ಸ್ವಾಗತಾರ್ಹ. ಪಿಎಸ್ಪಿ-ಎಲ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶಿವಪಾಲ್ ಸಿಂಗ್ ಯಾದವ್ ಅವರು ಸಮಾಜವಾದಿ ಸಿದ್ಧಾಂತ ಹೊಂದಿರುವ ಎಲ್ಲಾ ಪಕ್ಷಗಳು ಒಂದಾಗಬೇಕು ಎಂದು ಹೇಳುತ್ತಲೇ ಇದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ತೆಗೆದುಹಾಕಲು ಮತ್ತು ಸಮಾಜವಾದಿ ಸಿದ್ಧಾಂತದ ಸರ್ಕಾರವನ್ನು ರಚಿಸಲು ವೇದಿಕೆಯಾಗಿದೆ ಎಂದಿದ್ದಾರೆ.
ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧೆ ಇಲ್ಲ: ಮುಂಬರಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದರು.
ಅಜಂಗಢದಿಂದ ಸಮಾಜವಾದಿ ಪಕ್ಷದ ಸಂಸದರು ಹಾಗೂ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿರುವ ಅಖಿಲೇಶ್ ಯಾದವ್, ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.
ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಪ್ರಗತಿಶೀಲ ಸಮಾಜವಾದಿ ಪಕ್ಷ ಲೋಹಿಯಾ (ಪಿಎಸ್ಪಿಎಲ್) ದಿಂದ ನೆರವು ಕುರಿತಂತೆ ಪ್ರತಿತ್ರಿಯಿಸಿದ ಅಖಿಲೇಶ್ ಯಾದವ್, ಇದರಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ, ಅವರಿಗೆ ಹಾಗೂ ಅವರ ಕಡೆಯವರಿಗೆ ಸರಿಯಾದ ಗೌರವವನ್ನು ನೀಡಲಾಗುವುದು ಎಂದು ಹೇಳಿದರು.
ಚುನಾವಣೆಗಾಗಿ ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕ ದಳ ನಡುವಣ ಮೈತ್ರಿಯನ್ನು ಅಂತಿಮಗೊಳಿಸಲಾಗಿದೆ. ಸೀಟು ಹಂಚಿಕೆ ಬಗ್ಗೆ ತೀರ್ಮಾನವಾಗಬೇಕಿದೆ ಎಂದು ಪಿಟಿಐ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022ರಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರವನ್ನು ತೆಗೆದು ಹಾಕುವುದೇ ತಮ್ಮ ಮುಖ್ಯ ಉದ್ದೇಶವಾಗಿದೆ,'' ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅವರು, 2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು..
ಒಬಿಸಿ ಮತಗಳತ್ತ ಅಖಿಲೇಶ್ ಚಿತ್ತ, ಉತ್ತರಪ್ರದೇಶ ಚುನಾವಣೆ ಹೊಸ ರಣತಂತ್ರಒಬಿಸಿ ಮತಗಳತ್ತ ಅಖಿಲೇಶ್ ಚಿತ್ತ, ಉತ್ತರಪ್ರದೇಶ ಚುನಾವಣೆ ಹೊಸ ರಣತಂತ್ರ "ಬಿಜೆಪಿ ಸರ್ಕಾರದ ವಿರುದ್ಧದ ನಿರಾಶೆಯನ್ನು ನೋಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮತದಾರರು ನಮ್ಮ ಪಕ್ಷವನ್ನು 400 ಕ್ಷೇತ್ರಗಳಲ್ಲಿ ಗೆಲ್ಲುವಂತೆ ಮಾಡಬಹುದು. ಬಿಜೆಪಿ ಸರ್ಕಾರವನ್ನು ತೆಗೆದು ಹಾಕುವುದೇ ನಮ್ಮ ಗುರಿ," ಎಂದು ಅಖಿಲೇಶ್ ಯಾದವ್ ಹೇಳಿದ್ದರು. ಆದರೆ ಇದೀಗ ಸ್ಪರ್ಧೆಯಿಂದಲೇ ಹಿಂದೆ ಸರಿಯುವ ಮಾತನಾಡಿರುವುದು ಆಶ್ಚರ್ಯ ಮೂಡಿಸಿದೆ.












Click it and Unblock the Notifications