ಅಯೋಧ್ಯೆಯಲ್ಲಿ ಡಿಸೆಂಬರ್ 10ರ ತನಕ ನಿಷೇಧಾಜ್ಞೆ
ಲಕ್ನೋ, ಅಕ್ಟೋಬರ್ 14 : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಡಿಸೆಂಬರ್ 10ರ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಸುಪ್ರೀಂಕೋರ್ಟ್ನಲ್ಲಿ ಸೋಮವಾರದಿಂದ ಅಯೋಧ್ಯೆ ಭೂ ವಿವಾದದ ಕುರಿತು ವಿಚಾರಣೆ ನಡೆಯಲಿದೆ.
ಅಯೋಧ್ಯೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಜು ಕುಮಾರ್ ಝಾ ಡಿಸೆಂಬರ್ 10ರ ತನಕ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಅಯೋಧ್ಯೆ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ಪ್ರಕರಣದ ತೀರ್ಪಿನ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಅಯೋಧ್ಯೆ ಭೂ ವಿವಾದದ ಕುರಿತು ಸುಪ್ರೀಂಕೋರ್ಟ್ನಲ್ಲಿ ಸೋಮವಾರದಿಂದ ವಿಚಾರಣೆ ನಡೆಯಲಿದ್ದು, ಅಕ್ಟೋಬರ್ 17ರಂದು ವಿಚಾರಣೆ ಪೂರ್ಣಗೊಳ್ಳಿದೆ. ನವೆಂಬರ್ನಲ್ಲಿ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ. ಈಗ ಹಬ್ಬಗಳು ಎದುರಾಗಿರುವುದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಯೋಧ್ಯೆ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ವಾದಗಳನ್ನು ಅಕ್ಟೋಬರ್ 16ರಂದು ಪೂರ್ಣಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಎರಡೂ ಕಡೆಯವರಿಗೆ ಸೂಚನೆ ನೀಡಿದೆ.
27 ವರ್ಷಗಳ ಭೂ ವಿವಾದದ ಕುರಿತು ನವೆಂಬರ್ನಲ್ಲಿ ತೀರ್ಪು ಪ್ರಕಟವಾಗುವ ನಿರೀಕ್ಷೆ ಇದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ನವೆಂಬರ್ 17ರಂದು ನಿವೃತ್ತರಾಗಲಿದ್ದು, ಅದಕ್ಕೂ ಮೊದಲು ತೀರ್ಪು ಹೊರಬಲಿದೆ.
ಅಯೋಧ್ಯೆ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ರವಿಶಂಕರ್ ಗುರೂಜಿ ಸೇರಿದಂತೆ ತ್ರಿ ಸದಸ್ಯ ಸಮಿತಿಯನ್ನು ನೇಮಿಸಿತ್ತು. ಆದರೆ, ಸಂಧಾನದ ಮೂಲಕ ವಿವಾದ ಬಗೆಹರಿದಿಲ್ಲ.












Click it and Unblock the Notifications