ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊವಿಡ್-19
ಲಕ್ನೋ, ಅಕ್ಟೋಬರ್.14: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರ ತಂಡವು ತಪಾಸಣೆ ನಡೆಸುತ್ತಿದೆ. ಅವರಲ್ಲಿ ಕೊರೊನಾವೈರಸ್ ಸೋಂಕಿಗೆ ಸಂಬಂಧಿಸಿದ ಯಾವುದೇ ರೀತಿಯ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ ಎಂದು ಸಮಾಜವಾದಿ ಪಕ್ಷದ ಟ್ವಿಟರ್ ಖಾತೆ ಮೂಲಕ ಮಾಹಿತಿ ನೀಡಿದ್ದಾರೆ.
ಕೊರೊನಾವೈರಸ್ ಸೋಂಕು ತಗುಲಿರುವ ಬಗ್ಗೆ ವರದಿ ಬರುತ್ತಿದ್ದಂತೆ ಗುರುಗಾವ್ ನಲ್ಲಿರುವ ಮೇದಾಂತ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ತಂದೆಯವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆಸ್ಪತ್ರೆಯ ಹಿರಿಯ ವೈದ್ಯರ ಜೊತೆಗೆ ಸಂಪರ್ಕದಲ್ಲಿದ್ದು, ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆಯುತ್ತಿರುವ ಬಗ್ಗೆ ಪುತ್ರ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೊವಿಡ್-19 ಪ್ರಕರಣ:
ಉತ್ತರ ಪ್ರದೇಶದಲ್ಲೂ ಪ್ರತಿನಿತ್ಯ ಸಾವಿರಾರು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 2593 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 444711ಕ್ಕೆ ಏರಿಕೆಯಾಗಿದೆ. ಒಂದೇ ದಿನ 3736 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆಯು 401306ಕ್ಕೆ ಏರಿಕೆಯಾಗಿದೆ. ಉತ್ತರ ಪ್ರದೇಶದಲ್ಲಿ ಇದುವರೆಗೂ 6507 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.












Click it and Unblock the Notifications