ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ನೆರವೇರಿಸಲು ಪ್ರಧಾನಿಗೆ ಆಹ್ವಾನ
ಲಕ್ನೋ, ಜುಲೈ.19: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಶಿಲಾನ್ಯಾಸಕ್ಕೆ ದಿನಾಂಕ ನಿಗದಿಗೊಳಿಸಲಾಗಿದೆ. ಆಗಸ್ಟ್ ಮೊದಲ ವಾರದಲ್ಲೇ ದೇಗುಲ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.
ಕಳೆದ ಶನಿವಾರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯರು ಈ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮಯವನ್ನು ನೋಡಿಕೊಂಡು ಆಗಸ್ಟ್.03 ಅಥವಾ ಆಗಸ್ಟ್.05ರಂದು ರಾಮಮಂದಿರ ನಿರ್ಮಾಣ ಕಾರ್ಯ ಶಿಲಾನ್ಯಾಸಗೊಳಿಸಲು ತೀರ್ಮಾನಿಸಲಾಗಿದೆ.
ಕಳೆದ ಫೆಬ್ರವರಿ.5ರಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚನೆ ಎಂದು ಪ್ರಧಾನಮಂತ್ರಿ ಮೋದಿ ಘೋಷಿಸಿದ್ದರು. ಇದೀಗ ಮೊದಲ ಬಾರಿಗೆ ರಾಮ ಮಂದಿರ ನಿರ್ಮಾಣ ಕಾರ್ಯದ ನಡೆಯುವ ಸ್ಥಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಧಾನಿಯವರಿಗೆ ಎರಡು ದಿನಾಂಕ ಕಳಿಸಿದ್ದೇವೆ:
ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಾರಂಭಕ್ಕೆ ಶಿಲಾನ್ಯಾಸಗೊಳಿಸುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಬೇಕು ಎಂದು ಎರಡು ದಿನಾಂಕವನ್ನು ಕಳುಹಿಸಿದ್ದೇವೆ. ಪ್ರಧಾನಿಯವರ ಸಮಯವನ್ನು ನೋಡಿಕೊಂಡು ಮುಂದಿನ ಕಾರ್ಯವನ್ನು ಆರಂಭಿಸಲಾಗುತ್ತದೆ ಎಂದು ರಾಮಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯ ಕಾಮೇಶ್ವರ ಚೌಪಾಲ್ ತಿಳಿಸಿದ್ದಾರೆ.
ಸುಮಾರು 200 ಅಡಿ ಆಳದಲ್ಲಿ ಭೂಮಿಯ ಸಾಮರ್ಥ್ಯ ಅಧ್ಯಯನ ಆಗುತ್ತಿದ್ದು, 200 ಅಡಿ ಆಳದಲ್ಲಿ ತಾಮ್ರ ಪತ್ರ ಇರಿಸಲು ತೀರ್ಮಾನ ಮಾಡಲಾಗಿದೆ. ತಾಮ್ರ ಪತ್ರದಲ್ಲಿ ಬರೆಯಬೇಕಾದ ವಿವರದ ಕುರಿತು ಇಂದು ಚರ್ಚೆ ನಡೆದಿದೆ. ಸುಮಾರು ಮುನ್ನೂರು ಕೋಟಿ ರೂ. ವೆಚ್ಚದಲ್ಲಿ ಮಂದಿರ ನಿರ್ಮಾಣವಾಗಲಿದೆ.












Click it and Unblock the Notifications