ಬಿಜೆಪಿ ನಾಯಕಿ ಹೇಳಿಕೆ ವಿರುದ್ಧ ಪ್ರತಿಭಟನೆ, ಕಲ್ಲು ತೂರಾಟ
ಲಕ್ನೋ, ಜೂನ್ 3: ಬಿಜೆಪಿ ನಾಯಕಿಯ ಹೇಳಿಕೆ ಖಂಡಿಸಿ ಕಾನ್ಪುರದಲ್ಲಿ ಮುಸ್ಲಿಂ ಸಂಘಟನೆಗಳು ಕರೆಕೊಟ್ಟಿದ್ದ ಬಂದ್ ವೇಳೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಟಿವಿ ವಾಹಿನಿಯೊಂದರಲ್ಲಿ ಚರ್ಚೆ ವೇಳೆ ಪ್ರವಾದಿ ಮೊಹಮ್ಮದ್ ಬಗ್ಗೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ ನಗರದ ಅತಿದೊಡ್ಡ ಸಗಟು ಮಾರುಕಟ್ಟೆಗಳಲ್ಲಿ ಒಂದಾದ ಪರೇಡ್ ಮಾರ್ಕೆಟ್ನಲ್ಲಿ ಮುಸ್ಲಿಂ ಸಂಘಟನೆಯೊಂದ್ ಅಂಗಡಿ ಮುಂಗಟ್ಟು ಬಂದ್ ಮಾಡಲು ಕರೆ ನೀಡಿತ್ತು.
ಬಂದ್ ವೇಳೆ ನೂರಾರು ಜನರು ನಗರದಲ್ಲಿ ಘರ್ಷಣೆ ನಡೆಸಿದರು. ಎರಡು ಗುಂಪುಗಳ ನಡುವೆ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಪ್ರಾರ್ಥನೆ ಮುಗಿಸಿದ ನಂತರ ಮುಸ್ಲಿಂ ಸಮುದಾಯದ ಜನರು ಮಾರುಕಟ್ಟಯಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಲು ಹೋದಾಗ ಜಗಳ ಉಂಟಾಗಿದ್ದು, ಕಲ್ಲು ತೂರಾಟ ನಡೆದಿದೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವವರೆಗೆ ಪೊಲೀಸರನ್ನು ಹೆಚ್ಚಿನ ಭದ್ರತೆಗಾಗಿ ನಿಯೋಜಿಸಲಾಗಿದೆ. ಜ್ಞಾನವಾಪಿ ಮಸೀದಿ ವಿವಾದ ಕುರಿತ ಟಿವಿ ಚರ್ಚೆಯ ಸಂದರ್ಭದಲ್ಲಿ, "ಮುಸ್ಲಿಮರ ಧಾರ್ಮಿಕ ಪುಸ್ತಕಗಳಲ್ಲಿನ ಕೆಲವು ವಿಷಯಗಳನ್ನು ಜನರು ಅಪಹಾಸ್ಯ ಮಾಡಬಹುದು, ಅವರು ಹಿಂದೂಗಳ ನಂಬಿಕೆಯನ್ನು ಅಪಹಾಸ್ಯ ಮಾಡುತ್ತಿದ್ದಾರೆ" ಎಂದು ಶರ್ಮಾ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.
ನೂಪುರ್ ಶರ್ಮಾ ವಿರುದ್ಧ ಪ್ರಕರಣ ದಾಖಲು; ಟಿವಿ ಕಾರ್ಯಕ್ರಮದಲ್ಲಿ ಚರ್ಚೆ ವೇಳೆ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ವಿರುದ್ಧ ಮಹಾರಾಷ್ಟ್ರದ ಥಾಣೆ ಮತ್ತು ದಕ್ಷಿಣ ಮುಂಬೈನ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 'ಹಗೆತನವನ್ನು ಉತ್ತೇಜಿಸುವುದು, ಧಾರ್ಮಿಕ ಭಾವನೆಗಳ ಮೇಲೆ ಆಕ್ರೋಶ ವ್ಯಕ್ತಪಡಿಸುವುದು', 'ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಉದ್ದೇಶಪೂರ್ವಕವಾಗಿ ಮಾತನಾಡುವುದು' ಕೃತ್ಯಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ನೂಪುರ್ ಶರ್ಮಾ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ನೂಪುರ್ ಶರ್ಮಾ ತನಗೆ ಅತ್ಯಾಚಾರ ಬೆದರಿಕೆಗಳು ಬರುತ್ತಿವೆ, ಕುಟುಂಬದ ಸದಸ್ಯರಿಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಸ್ಕ್ರೀನ್ಶಾಟ್ಗಳನ್ನು ಟ್ವೀಟ್ ಮಾಡಿ, ದೆಹಲಿ ಪೊಲೀಸರನ್ನು ಟ್ಯಾಗ್ ಮಾಡಿದ್ದರು.












Click it and Unblock the Notifications