ಉತ್ತರ ಪ್ರದೇಶದಲ್ಲಿ ಒಂದೇ ದಿನ 700 ಬಿಜೆಪಿ ನಾಯಕರಿಗೆ ಅಮಿತ್ ಶಾ ಚುನಾವಣಾ ಪಾಠ
ಲಕ್ನೋ, ನವೆಂಬರ್ 10: ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ ನಾಯಕರನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರ್ಜರಿ ಯೋಜನೆ ಹಾಕಿಕೊಂಡಿದ್ದಾರೆ. ನವೆಂಬರ್ 12ರಂದು ರಾಜ್ಯದ ಸುಮಾರು 700ಕ್ಕೂ ಹೆಚ್ಚು ಬಿಜೆಪಿ ನಾಯಕರಿಗೆ ಮಾಸ್ಟರ್ ಕ್ಲಾಸ್ ನಡೆಸಲಿದ್ದಾರೆ.
"ವಾರಣಾಸಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಯಲಿರುವ ಮಾಸ್ಟರ್ ಕ್ಲಾಸ್ ನಲ್ಲಿ ವಿಧಾನಸಭೆ ಚುನಾವಣೆ ಬಗ್ಗೆ ತಿಳಿಸುವುದಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ 98 ಜಿಲ್ಲೆಗಳ ಅಧ್ಯಕ್ಷರು, ಪಕ್ಷದ ಜಿಲ್ಲಾ ಉಸ್ತುವಾರಿಗಳು, 403 ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿಗಳು, ಉತ್ತರ ಪ್ರದೇಶದಲ್ಲಿರುವ 6 ಪ್ರದೇಶವಾರು ಅಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಹಿರಿಯ ನಾಯಕರು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪಕ್ಷದ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳು ನವೆಂಬರ್ 12ರಂದು ನಡೆಯಲಿರುವ ಮಾಸ್ಟರ್ ಕ್ಲಾಸ್ ಸಭೆಯಲ್ಲಿ ಭಾಗವಹಿಸಲಿದ್ದಾರೆ," ಎಂದು ಉತ್ತರ ಪ್ರದೇಶದ ಬಿಜೆಪಿ ಉಪಾಧ್ಯಕ್ಷ ವಿಜಯ್ ಬಹದ್ದೂರ್ ಪಟ್ನಾಯಕ್ ಹೇಳಿದ್ದಾರೆ.
ಯೋಗಿ ಸರ್ಕಾರಕ್ಕೆ ಆಘಾತ: ಕೆಟ್ಟ ಆಡಳಿತ ಹೊಂದಿರುವ ರಾಜ್ಯಗಳಲ್ಲಿ ಯುಪಿ ನಂ.1
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್, ಉಪ ಮುಖ್ಯಮಂತ್ರಿಗಳು ಮತ್ತು ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಬಿಜೆಪಿಯ ಇಡೀ ತಂಡವು ವಾರಣಾಸಿ ಸಭೆಯಲ್ಲಿ ಹಾಜರ್ ಇರಲಿದೆ.
ನವೆಂಬರ್ 12ರಂದು ಇಡೀ ದಿನ ಸಭೆ:
ಉತ್ತರ ಪ್ರದೇಶದ ವಾರಣಾಸಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಿದ ನಂತರದಲ್ಲಿ ನವೆಂಬರ್ 12ರಂದು ಇಡೀ ದಿನ ಸಭೆ ನಡೆಯಲಿದೆ ಎಂಬ ನಿರೀಕ್ಷೆಗಳಿವೆ. ರಾಜ್ಯದಲ್ಲಿ ಮುಂಬರುವ ಚುನಾವಣೆಗಳು ಮತ್ತು ಬಿಜೆಪಿಯ ಮೆಗಾ ಸದಸ್ಯತ್ವ ಅಭಿಯಾನದ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿದೆ. ವಿಸ್ತೃತ ಸಭೆಯಲ್ಲಿ ಪ್ರಚಾರವನ್ನು ಹೇಗೆ ನಡೆಸಬೇಕು, ಸಿದ್ಧತೆಗಳೇನು ಎಂಬುದರ ಕುರಿತು ಚರ್ಚಿಸಬಹುದು, ಇದರ ಜೊತೆಗೆ ನಾಯಕರು ಯುಪಿಯಲ್ಲಿ ಚುನಾವಣೆಯನ್ನು ನಿಭಾಯಿಸಿದ ಸುದೀರ್ಘ ಅನುಭವವನ್ನು ಹೊಂದಿರುವ ಅಮಿತ್ ಶಾ ಅವರಿಂದ ಮಾರ್ಗದರ್ಶನ ಪಡೆಯಲಿದ್ದಾರೆ" ಎಂದು ಪಕ್ಷದ ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶದಲ್ಲಿ ಪರಿವರ್ತನಾ ಯಾತ್ರೆ:
ರಾಜ್ಯದಲ್ಲಿ ಮುಂದಿನ ತಿಂಗಳು ಭಾರತೀಯ ಜನತಾ ಪಕ್ಷದ ನಾಯಕರು ಪರಿವರ್ತನಾ ಯಾತ್ರೆಯನ್ನು ಆರಂಭಿಸಲು ಮುಂದಾಗಿದೆ. ನವೆಂಬರ್ 12ರಂದು ರಾಜ್ಯದಲ್ಲಿ ಸುದೀರ್ಘ ಸಭೆ ನಡೆಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮರುದಿನ ಅಂದರೆ ನವೆಂಬರ್ 13ರಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕ್ಷೇತ್ರ ಅಜಂಗಢದಲ್ಲಿ ರ್ಯಾಲಿ ನಡೆಸಲಿದ್ದಾರೆ.
ಉತ್ತರ ಪ್ರದೇಶದ ಚುನಾವಣಾ ಫಲಿತಾಂಶದ ಹಿನ್ನೆಲೆ:
ಕಳೆದ 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಮತ್ತು ಕಾಂಗ್ರೆಸ್ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದ್ದವು. ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಸಮಾಜವಾದಿ ಪಕ್ಷವು 311 ಕ್ಷೇತ್ರಗಳಲ್ಲಿ ಕಣಕ್ಕೆ ಇಳಿದಿತ್ತು. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿತ್ತು. ಇನ್ನೊಂದು ಕಡೆ 277 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ ಆರ್ಎಲ್ಡಿ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲವು ಸಾಧಿಸಿತ್ತು.
ರಾಜ್ಯದ ಒಟ್ಟು 403 ಸ್ಥಾನಗಳ ಪೈಕಿ ಬಿಜೆಪಿ 312 ರಲ್ಲಿ ಗೆಲುವು ದಾಖಲಿಸಿತ್ತು. ಈ ಪಕ್ಷ ಶೇ. 39.67ರಷ್ಟು ಮತವನ್ನು ಪಡೆದುಕೊಂಡಿತ್ತು. ಅಂದು ಸಮಾಜವಾದಿ ಪಕ್ಷವು 47 ಸ್ಥಾನಗಳನ್ನು, ಬಹುಜನ ಸಮಾಜ ಪಕ್ಷ (BSP) 19 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.