ಯುಪಿ ಗೆಲುವಿನ ನಂತರ ಮೊದಲ ಬಾರಿ ಯೋಗಿ-ಮೋದಿ ಭೇಟಿ
ಲಕ್ನೋ, ಮಾರ್ಚ್ 13: ಉತ್ತರ ಪ್ರದೇಶದಲ್ಲಿ ವಿಜಯ ಪತಾಕೆ ಹಾರಿಸಿದ ನಂತರ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ಆಗಿದ್ದಾರೆ.
ಉತ್ತರ ಪ್ರದೇಶದಲ್ಲಿ ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆದುಕೊಂಡಿರುವ ಬಿಜೆಪಿ ಇದೀಗ ಸರ್ಕಾರ ರಚನೆ ಮೇಲೆ ಲಕ್ಷ್ಯ ವಹಿಸಿದೆ. ಇದರ ಮಧ್ಯೆ ಭಾನುವಾರ ನವದೆಹಲಿಯ 7-ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿ ನರೇದ್ರ ಮೋದಿ ನಿವಾಸಕ್ಕೆ ತೆರಳಿದ ಯೋಗಿ ಆದಿತ್ಯನಾಥ್, ರಾಜ್ಯದಲ್ಲಿನ ಮುಂದಿನ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯ ನೂತನ ಸರ್ಕಾರ ರಚನೆ ಹೇಗಿರಬೇಕು. ಹೊಸ ಸರ್ಕಾರದ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಯಾವ ಯಾವ ಶಾಸಕರಿಗೆ ಅವಕಾಶ ನೀಡಬೇಕು ಎಂಬೆಲ್ಲ ವಿಷಯಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜೊತೆ ಯೋಗಿ ಆದಿತ್ಯನಾಥ್ ಚರ್ಚಿಸಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ:
2022ರಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಎರಡನೇ ಬಾರಿ ಗೆಲುವಿನ ಬಾವುಟ ಹಾರಿಸಿದೆ. ರಾಜ್ಯದ 75 ಜಿಲ್ಲೆಗಳ 403 ಕ್ಷೇತ್ರಗಳಲ್ಲಿ ಸರ್ಕಾರ ರಚಿಸುವುದಕ್ಕೆ ಕನಿಷ್ಠ 202 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಕೇಂದ್ರ ಚುನಾವಣಾ ಆಯೋಗದ ಪ್ರಕಾರ, ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 255 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿಗೆ ಸೆಡ್ಡು ಹೊಡೆದ ಸಮಾಜವಾದಿ ಪಕ್ಷವು 111 ಕ್ಷೇತ್ರಗಳಲ್ಲಿ ಗೆಲುವಿನ ಸೈಕಲ್ ಏರಿದೆ. ಅಪ್ನಾ ದಳ 12, ಬಹುಜನ ಸಮಾಜವಾದಿ ಪಕ್ಷ 1, ಜೆಡಿಎಲ್ 2, ನಿರ್ಬಲ್ ಇಂಡಿಯನ್ ಶೋಷಿತ ಹಮಾರಾ ಆಮ್ ದಳ 6, ರಾಷ್ಟ್ರೀಯ ಲೋಕ ದಳ 8, ಸುಹೇಲ್ದೇವ್ ಭಾರತೀಯ ಸಮಾಜ ಪಾರ್ಟಿ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಮಾತ್ರ ಕೇವಲ 2 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳುವಂತೆ ಆಗಿದೆ.












Click it and Unblock the Notifications