ಯುಪಿಯಲ್ಲಿ ಕಾಂಗ್ರೆಸ್ ಕೈ ಬಿಟ್ಟು ಸೈಕಲ್ ಏರಿದ ಇಮ್ರಾನ್ ಮಸೂದ್!
ಲಕ್ನೋ, ಜನವರಿ 20: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲೇ ಪಕ್ಷಾಂತರ ಪರ್ವ ಮುಂದುವರಿದಿದೆ. ಕಾಂಗ್ರೆಸ್ ಪಕ್ಷಕ್ಕೆ ಬಾಯ್ ಬಾಯ್ ಎಂದ ಇಮ್ರಾನ್ ಮಸೂದ್ ಸಮಾಜವಾದಿ ಪಕ್ಷದ ಜೊತೆ ಕೈಜೋಡಿಸಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ತಮ್ಮೊಂದಿಗೆ ತಮ್ಮ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಎಸ್ಪಿ ಕಡೆಗೆ ಹೊರಳುವಂತೆ ಮಾಡಿದ್ದಾರೆ.
ಇಮ್ರಾನ್ ಮಸೂದ್ ಮತ್ತು ಅಖಿಲೇಶ್ ಯಾದವ್ ನಡುವಿನ ಸಭೆ ಮುಗಿದ ನಂತರ ಸಮಾಜವಾದಿ ಪಕ್ಷವು ಇಬ್ಬರೂ ನಾಯಕರು ಒಟ್ಟಿಗೆ ನಿಂತುಕೊಂಡಿರುವ ಫೋಟೋವನ್ನು ತನ್ನ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದೆ.
ಕಳೆದ ಜನವರಿ 11ರಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಇಮ್ರಾನ್ ಮಸೂದ್, ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಎಸ್ಪಿ ನಡುವೆ ನೇರ ಹಣಾಹಣಿ ಇದೆ. ತಾವು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವನ್ನು ಬೆಂಬಲಿಸುವ ನಿರ್ಧಾರವನ್ನು ಪ್ರಕಟಿಸಿದ್ದರು.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸಮರ್ಥವಾಗಿಲ್ಲ:
"ರಾಜ್ಯದಲ್ಲಿ ಯುವಕರು, ರೈತರು ಮತ್ತು ಮಹಿಳೆಯರ ಪರವಾಗಿ ಕೆಲಸ ಮಾಡುವ ಸರ್ಕಾರ ನನಗೆ ಬೇಕು," ಎಂದು ಇಮ್ರಾನ್ ಮಸೂದ್ ಹೇಳಿದ್ದಾರೆ. ಈ ಹಿಂದೆ 2021ರ ಅಕ್ಟೋಬರ್ ತಿಂಗಳಿನಲ್ಲಿ ಇಮ್ರಾನ್ ಮಸೂದ್, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಏಕಾಂಗಿಯಾಗಿ ಹೋರಾಡಲು ಕಾಂಗ್ರೆಸ್ ಸಮರ್ಥವಾಗಿಲ್ಲ. ಮುಂಬರುವ ಚುನಾವಣೆಗಳಿಗೆ ಸಮಾಜವಾದಿ ಪಕ್ಷ (ಎಸ್ಪಿ) ಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದರು.
ಕ್ರಿಮಿನಲ್ಗಳಿಗೆ ಟಿಕೆಟ್ ನೀಡಿದ್ದಕ್ಕಾಗಿ ಕೇಸರಿ ಪಕ್ಷವು ಸಮಾಜವಾದಿ ಪಕ್ಷವನ್ನು ದೂಷಿಸುತ್ತಿದೆ. ಆದರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಹರಾನ್ಪುರ, ಮುಜಾಫರ್ನಗರದ ಗಲಭೆಕೋರರಿಗೆ ಮತ್ತು ಕೈರಾನಾದಲ್ಲಿ ಹಿಂದೂಗಳ ವಲಸೆಗೆ ಕಾರಣರಾದವರಿಗೆ ಟಿಕೆಟ್ ನೀಡಿದ್ದಾರೆ ಎಂದು ತಿರುಗೇಟು ನೀಡಲಾಗಿದೆ.
ಉತ್ತರ ಪ್ರದೇಶದಲ್ಲಿ ಚುನಾವಣೆ ಲೆಕ್ಕಾಚಾರ ಹೀಗಿದೆ:
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.












Click it and Unblock the Notifications