ಯುಪಿ: ಜನ್ ಅಧಿಕ್ ಪಾರ್ಟಿ ಮತ್ತು ಭಾರತ್ ಮುಕ್ತಿ ಮೋರ್ಚಾ ಜೊತೆ ಎಐಎಂಐಎಂ ಮೈತ್ರಿ
ಲಕ್ನೋ, ಜನವರಿ 22: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಎದುರಿಸುವುದಕ್ಕೆ ರಾಜಕೀಯ ಪಕ್ಷಗಳ ನಡುವೆ ಮೈತ್ರಿ ಮಂತ್ರಿ ಜೋರಾಗಿ ನಡೆಯುತ್ತಿದೆ. ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಎರಡು ಪಕ್ಷಗಳೊಂದಿಗೆ ಮೈತ್ರಿ ಘೋಷಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿ ನಡೆಸಿದ ಅಸಾದುದ್ದೀನ್ ಓವೈಸಿ, ಬಾಬು ಸಿಂಗ್ ಕುಶ್ವಾಹಾ ನೇತೃತ್ವದ ಜನ್ ಅಧಿಕ್ ಪಾರ್ಟಿ ಮತ್ತು ಭಾರತ್ ಮುಕ್ತಿ ಮೋರ್ಚಾ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದರು.
ಪ್ರಶಾಂತ್ ಕಿಶೋರ್ ಯಾಕೆ ಕಾಂಗ್ರೆಸ್ ಸೇರಲಿಲ್ಲ? ಪ್ರಿಯಾಂಕಾ ಗಾಂಧಿ ಬಹಿರಂಗ
ತಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಇಬ್ಬರಿಗೆ ಮುಖ್ಯಮಂತ್ರಿ ಸ್ಥಾನಗಳನ್ನು ನೀಡಲಾಗುತ್ತದೆ. ಈ ಪೈಕಿ ಒಬ್ಬರು ಒಬಿಸಿ ಸಮುದಾಯದವರು ಆಗಿದ್ದರೆ ಇನ್ನೊಬ್ಬರು ದಲಿತ ಸಮುದಾಯದವರು ಆಗುತ್ತಾರೆ. ಮುಸ್ಲಿಂ ಸಮುದಾಯ ಸೇರಿದಂತೆ 3 ಉಪಮುಖ್ಯಮಂತ್ರಿಗಳಿಗೆ ಸ್ಥಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಎಐಎಂಐಎಂ ಜೊತೆಗಿನ ಮೈತ್ರಿ ಬಲವಂತವಲ್ಲ:
ಉತ್ತರ ಪ್ರದೇಶದಲ್ಲಿ ಎಐಎಂಐಎಂ ಜೊತೆ ಬಲವಂತದಿಂದ ಮೈತ್ರಿ ಮಾಡಿಕೊಳ್ಳಲಾಗುತ್ತಿದೆಯೇ ಎಂಬ ಬಗ್ಗೆ ಪ್ರಶ್ನೆ ಮಾಡಿದ ವೇಳೆ ಬಾಬು ಸಿಂಗ್ ಕುಶ್ವಾಹಾ ಉತ್ತರಿಸಿದ್ದಾರೆ. ಇದು ಬಲವಂತದಿಂದ ರಚನೆಯಾದ ಮೈತ್ರಿಯಲ್ಲ. ನಾವು ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕಾಗಿ ದೀರ್ಘಕಾಲ ಕೆಲಸ ಮಾಡಿದ್ದೇವೆ ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ಚುನಾವಣೆ:
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ಯುಪಿಯಲ್ಲಿ ವಿಧಾನಸಭೆ ಫಲಿತಾಂಶ:
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.