ಯುಪಿಯಲ್ಲಿ ಅಖಿಲೇಶ್ ಯಾದವ್ ಪರ ಮಮತಾ ಬ್ಯಾನರ್ಜಿ ಪ್ರಚಾರ
ಲಕ್ನೋ, ಜನವರಿ 18: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಬೆಂಬಲವಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಉಪಾಧ್ಯಕ್ಷ ಕಿರಣ್ಮೋಯ್ ನಂದಾ ತಿಳಿಸಿದ್ದಾರೆ.
ಲಕ್ನೋದಲ್ಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನಡೆಯಲಿರುವ ಪ್ರಚಾರ ಮೆರವಣಿಗೆಗಳಲ್ಲಿ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಜೊತೆ ಮಮತಾ ಬ್ಯಾನರ್ಜಿ ಕೈಜೋಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕೋಲ್ಕತ್ತಾದಲ್ಲಿ ಮಂಗಳವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ ಕಿರಣ್ಮೋಯ್ ನಂದಾ, ಫೆಬ್ರವರಿ 8ರಂದು ಲಕ್ನೋದಲ್ಲಿ ಅಖಿಲೇಶ್ ಯಾದವ್ ಅವರೊಂದಿಗೆ ಟಿಎಂಸಿ ಮುಖ್ಯಸ್ಥರು ಜಂಟಿ ವರ್ಚುವಲ್ ರ್ಯಾಲಿ ನಡೆಸಲಿದ್ದಾರೆ ಎಂದು ಹೇಳಿದರು. ತದನಂತರ ವಾರಣಾಸಿಯಲ್ಲಿ ವರ್ಚುವಲ್ ರ್ಯಾಲಿಯನ್ನು ಮಾಡಲು ಉಭಯ ನಾಯಕರು ಯೋಜಿಸಿದ್ದಾರೆ ಎಂದು ಕಿರಣ್ಮೋಯ್ ನಂದಾ ಹೇಳಿದ್ದಾರೆ.

ಸಮಾಜವಾದಿ ಪಕ್ಷಕ್ಕೆ ಟಿಎಂಸಿ ಬಾಹ್ಯ ಬೆಂಬಲ:
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಬಾಹ್ಯ ಬೆಂಬಲ ನೀಡುವುದಕ್ಕೆ ನಿರ್ಧರಿಸಲಾಗಿದೆ. "ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಫೆಬ್ರವರಿ 8ರಂದು ಲಕ್ನೋದಲ್ಲಿ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಾರಣಾಸಿಯಲ್ಲಿ ಮತ್ತೊಂದು ಕಾರ್ಯಕ್ರಮವಿರುತ್ತದೆ. ಟಿಎಂಸಿ ಯುಪಿಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ. ಸಮಾಜವಾದಿ ಪಕ್ಷಕ್ಕೆ ಬಾಹ್ಯ ಬೆಂಬಲವನ್ನು ನೀಡುತ್ತದೆ," ಎಂದು ಎಸ್ಪಿ ನಾಯಕ ಕಿರಣ್ಮೋಯ್ ನಂದಾ ಹೇಳಿದ್ದಾರೆ.
ಬಿಜೆಪಿ ವಿರುದ್ಧದ ಟಿಎಂಸಿ ಹೋರಾಟದ ಉಲ್ಲೇಖ:
"ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರು ಬಿಜೆಪಿ ವಿರುದ್ಧ ಹೋರಾಡಿದ ರೀತಿ ಅಭೂತಪೂರ್ವವಾಗಿತ್ತು. ಬಿಜೆಪಿಯ ಜಗನ್ನಾಥ್ ಸ್ವರೂಪದ ವಿರುದ್ಧ ಅವರು ಮಾಡಿದ ಹೋರಾಟವನ್ನು ಇಡೀ ರಾಷ್ಟ್ರವು ನೋಡಿದೆ. ಅಂಥವರುಯುಪಿ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ನಮ್ಮ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪರ ಪ್ರಚಾರ ಮಾಡಬೇಕೆಂದು ಬಯಸುತ್ತೇವೆ. ಅಗತ್ಯವಿದ್ದರೆ ಪಕ್ಷದ ಪರವಾಗಿ ಪ್ರಚಾರ ಮಾಡುವುದಾಗಿ ಬ್ಯಾನರ್ಜಿ ಅವರು ಅಖಿಲೇಶ್ ಯಾದವ್ ಅವರಿಗೆ ಮೊದಲೇ ತಿಳಿಸಿದ್ದರು," ಎಂದು ನಂದಾ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಚುನಾವಣೆ ಪೈಪೋಟಿ:
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
2017 ಉತ್ತರ ಪ್ರದೇಶ ಚುನಾವಣೆ ಫಲಿತಾಂಶ
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.












Click it and Unblock the Notifications