ಉತ್ತರ ಪ್ರದೇಶದಲ್ಲಿ ಪಿಎಂ ಮೋದಿ, ಸಿಎಂ ಯೋಗಿ ಚಿತ್ರವಿರುವ ಸೀರೆಗಳದ್ದೇ ಸದ್ದು!
ಲಕ್ನೋ, ಜನವರಿ 19: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮತದಾರರ ಸೆಳೆಯುವುದಕ್ಕೆ ವಿನೂತನ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಭಾರತೀಯ ಜನತಾ ಪಕ್ಷ ಮಾಡುತ್ತಿರುವ ಅಂಥ ಪ್ರಯತ್ನಗಳ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಿದೆ. ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಭಾವಚಿತ್ರವಿರುವ ಸೀರೆಗಳು ಮಾರುಕಟ್ಟೆಯಲ್ಲಿ ಸಖತ್ ಸದ್ದು ಮಾಡುತ್ತಿವೆ.
ಗುಜರಾತ್ನ ಜವಳಿ ಕೇಂದ್ರವಾದ ಸೂರತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿತ್ರಗಳಿರುವ ಸೀರೆಗಳನ್ನು ತಯಾರಿಸಲಾಗುತ್ತಿದೆ. ಆ ಮೂಲಕ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಬಿಜೆಪಿ ಅಣಿಯಾಗುತ್ತಿದೆ.
ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಖಿಲೇಶ್ ಯಾದವ್!
ಸಾಮಾಜಿಕ ಜಾಲತಾಣಗಳಲ್ಲಿ ಈ ಸೀರೆಗಳಿಗೆ ಸಂಬಂಧಿಸಿದ ವಿಡಿಯೋಗಳು ಹರಿದಾಡುತ್ತಿದ್ದು, ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ ಹಂಚಲಾಗುವುದು ಎಂದು ಕೆಲವರು ಹೇಳುತ್ತಿದ್ದಾರೆ. ವಿಶೇಷವಾಗಿರುವ ಈ ಸೀರೆಗಳಲ್ಲಿ ಬಿಜೆಪಿಯ ಚುನಾವಣಾ ಚಿಹ್ನೆ ಕಮಲದ ಚಿತ್ರಗಳೇ ತುಂಬಿ ಹೋಗಿವೆ. ಇದರ ಜೊತೆಗೆ "ರಾಮನನ್ನು ತಂದವರನ್ನು ನಾವು ಕರೆ ತರುತ್ತೇವೆ" ಎಂಬ ಘೋಷಣೆಯನ್ನು ಬರೆಯಲಾಗಿದೆ.
ಮಹಿಳಾ ಮತದಾರರನ್ನು ಆಕರ್ಷಿಸಲು ವಿಶೇಷ ಸೀರೆ
"ಉತ್ತರ ಪ್ರದೇಶದಲ್ಲಿ ಮಹಿಳಾ ಮತದಾರರನ್ನು ಆಕರ್ಷಿಸುವ ಹಾಗೂ ಓಲೈಸುವ ಉದ್ದೇಶದಿಂದ ಇಂಥ ವಿನೂತನ ವಿನ್ಯಾಸವುಳ್ಳ ಸೀರೆಗಳನ್ನು ತಯಾರಿಸಲಾಗುತ್ತಿದೆ," ಎಂದು ಅಹಮದಾಬಾದ್ ಮೂಲದ ಪತ್ರಕರ್ತರೊಬ್ಬರು ಈ ವಿಡಿಯೋವನ್ನು ಶೇರ್ ಮಾಡಿ ಉಲ್ಲೇಖಿಸಿದ್ದಾರೆ. "ಅಯೋಧ್ಯೆಯ ವಿಷಯದ ಮೇಲೆ ಈ ಸೀರೆಗಳನ್ನು ತಯಾರಿಸಲಾಗಿದ್ದು, ಉತ್ತರ ಪ್ರದೇಶದ ಪೂರ್ವ ಮತ್ತು ಪಶ್ಚಿಮ ಭಾಗದಲ್ಲಿ 1,000 ಮಹಿಳೆಯರಿಗೆ ಈ ಸೀರೆಗಳನ್ನು ವಿತರಿಸಲು ಯೋಜಿಸಲಾಗಿದೆ ಎಂದಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲೂ ಇದೇ ತಂತ್ರ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಚಿತ್ರವಿರುವ ಸೀರೆಗಳು ಮಾರುಕಟ್ಟೆಯಲ್ಲಿ ಸದ್ದು ಮಾಡುವುದು ಹಾಗೂ ಸುದ್ದಿ ಆಗುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಇದೇ ರೀತಿಯ ಸೀರೆಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದವು. ಇದೀಗ ಮತ್ತದೇ ಇತಿಹಾಸ ಮರುಕಳಿಸಿದೆ. ಹೀಗೆ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಚಿತ್ರವಿರುವ ಸೀರೆಗಳನ್ನು ಬಿಜೆಪಿಯ ಮಹಿಳಾ ಕಾರ್ಯಕರ್ತರಿಗೆ ನೀಡುವುದಕ್ಕೂ ಉದ್ದೇಶಿಸಲಾಗುತ್ತಿದೆ. ಒಂದು ಸೀರೆಗೆ 1500 ರೂಪಾಯಿ ದರ ನಿಗದಿಯನ್ನು ಮಾಡಲಾಗಿದೆ.
ರಾಮ ಮಂದಿರ ನಿರ್ಮಾಣದ ಬಗ್ಗೆ ಉಲ್ಲೇಖ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬಿಜೆಪಿಗೆ ತುಂಬಾ ಹತ್ತಿರದ ಮತ್ತು ಪ್ರಮುಖ ವಿಷಯವಾಗಿದೆ. ಈ ಬಗ್ಗೆ ಬಿಜೆಪಿಯು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹಲವಾರು ಬಾರಿ ಉಲ್ಲೇಖಿಸಿದ್ದೂ ಆಗಿದೆ. ರಾಮ ಮಂದಿರದ ನಿರ್ಮಾಣವು ನಿಗದಿತ ಸಮಯದಲ್ಲಿ ಪ್ರಗತಿಯಲ್ಲಿದೆ. ಡಿಸೆಂಬರ್ 2023ರ ವೇಳೆಗೆ ಇದನ್ನು ಸಾರ್ವಜನಿಕರಿಗೆ ತೆರೆಯುವ ಸಾಧ್ಯತೆಯಿದೆ ಎಂಬ ಬಗ್ಗೆ ವರದಿಗಳು ಆಗಿದೆ. ಈ ಹಿಂದೆ ನವೆಂಬರ್ 9, 2019ರಂದು ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಶತಮಾನಗಳಷ್ಟು ಹಳೆಯದಾದ ರಾಜಕೀಯವಾಗಿ ಸೂಕ್ಷ್ಮ ವಿವಾದವನ್ನು ಇತ್ಯರ್ಥಪಡಿಸಿತು. ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸುವ ಪರವಾಗಿ ತೀರ್ಪು ನೀಡಿತು. ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ 5 ಎಕರೆ ಜಾಗ ನೀಡುವುದಾಗಿಯೂ ಹೇಳಿತ್ತು.
ಯುಪಿಯಲ್ಲಿ ಹೇಗಿದೆ ಚುನಾವಣೆ ಮತ್ತು ರಾಜಕೀಯ ಲೆಕ್ಕ?
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.