ಯುಪಿ ಚುನಾವಣೆ: ಕರ್ಹಾಲ್ ಅಖಾಡಕ್ಕೆ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್
ಲಕ್ನೋ, ಜನವರಿ 20: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಕಣ ರಣರೋಚಕ ತಿರುವು ಪಡೆದುಕೊಳ್ಳುತ್ತಿದೆ. ರಾಜ್ಯದ ಮೈನ್ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಪರ್ಧಿಸಲಿದ್ದಾರೆ ಎಂದು ಪಕ್ಷ ಘೋಷಿಸಿದೆ. ಫೆಬ್ರವರಿ 20 ರಂದು ಕರ್ಹಾಲ್ನಲ್ಲಿ ಮತದಾನ ನಡೆಯಲಿದೆ.
ಉತ್ತರ ಪ್ರದೇಶದ ಅಜಂಗಢ ಕ್ಷೇತ್ರದ ಲೋಕಸಭಾ ಸಂಸದರಾಗಿರುವ ಅಖಿಲೇಶ್ ಯಾದವ್ ಈವರೆಗೂ ರಾಜ್ಯ ಚುನಾವಣೆಗಳಲ್ಲಿ ಸ್ಪರ್ಧಿಸಿಯೇ ಇಲ್ಲ. ಈ ಹಿಂದೆ 2012ರಲ್ಲಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ವೇಳೆ ವಿಧಾನ ಪರಿಷತ್ ಮೂಲಕ ಆಯ್ಕೆ ಆಗಿದ್ದರು. ಇದೀಗ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಅಖಾಡಕ್ಕೆ ಇಳಿಯುತ್ತಿದ್ದು, ಕದನ ಕೌತುಕವನ್ನು ಕೆರಳಿಸಿದೆ.
ಈ ಹಿಂದೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಮೈನ್ಪುರಿ ಸದರ್, ಕನೌಜ್ನ ಛಿಬ್ರಮೌ, ಅಜಂಗಢದ ಗೋಪಾಲ್ಪುರ ಅಥವಾ ಸಂಭಾಲ್ನ ಗುನ್ನೌರ್ನಿಂದ ಸ್ಪರ್ಧಿಸಬಹುದು ಎಂಬ ಬಗ್ಗೆ ಊಹಾಪೋಹಗಳು ಹರದಾಡುತ್ತಿದ್ದವು. ಈಗ ಎಲ್ಲ ಊಹಾಪೋಹಗಳಿಗೆ ಉತ್ತರ ಸಿಕ್ಕಿದೆ. ಅವರು ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವೇ ಘೋಷಿಸಿದೆ.

ಕರ್ಹಾಲ್ ಕ್ಷೇತ್ರದ ಹಿನ್ನೆಲೆ:
ಉತ್ತರ ಪ್ರದೇಶ ಮೈನ್ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಲ್ಲಿ ಪ್ರಸ್ತುತ ಸಮಾಜವಾದಿ ಪಕ್ಷದವರೇ ಶಾಸಕರಾಗಿದ್ದಾರೆ. ಸೊಬರನ್ ಸಿಂಗ್ ಯಾದವ್ ಕರ್ಹಾಲ್ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. 1993 ರಿಂದ ಈವರೆಗೆ ಕರ್ಹಾಲ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷವು ಏಳು ಬಾರಿ ಗೆಲುವು ಸಾಧಿಸಿದ ಇತಿಹಾಸವನ್ನು ಹೊಂದಿದೆ. 2002ರ ಚುನಾವಣೆಯಲ್ಲಿ ಮಾತ್ರ ಬಿಜೆಪಿ ಕರ್ಹಾಲ್ ಕ್ಷೇತ್ರದಲ್ಲಿ ಗೆಲುವಿನ ರುಚಿ ನೋಡಿತ್ತು.
ಗೋರಖ್ಪುರ ಕ್ಷೇತ್ರದಲ್ಲಿ ಯೋಗಿ ಸ್ಪರ್ಧೆ:
ಗೋರಖ್ಪುರ ವಿಧಾನಸಭೆ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಪರ್ಧಿಸುವುದು ಪಕ್ಕಾ ಆಗಿದೆ. ಅದೇ ಕ್ಷೇತ್ರದಲ್ಲಿ ಸಿಎಂ ವಿರುದ್ಧ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಈಗ ಸದ್ದು ಮಾಡುತ್ತಿದೆ. ಹಾಲಿ ಸಿಎಂ ವಿರುದ್ಧ ತಾವು ಸ್ಪರ್ಧಿಸುವುದಾಗಿ ಆಜಾದ್ ಟ್ವೀಟ್ ಮೂಲಕ ಗುರುವಾರ ಘೋಷಿಸಿದ್ದಾರೆ. "ಆಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಕಾಶಿರಾಮ್, ಚಂದ್ರಶೇಖರ್ ಆಜಾದ್ ಜಿ ಅವರು ಗೋರಖ್ಪುರ ಸದಾರ್ (322) ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ," ಎಂದು ಪಕ್ಷವು ಟ್ವೀಟ್ ಮಾಡಿದೆ ಮತ್ತು ಪತ್ರವೊಂದನ್ನು ಶೇರ್ ಮಾಡಿದೆ.
ಉತ್ತರ ಪ್ರದೇಶದಲ್ಲಿ ಚುನಾವಣೆ ಲೆಕ್ಕಾಚಾರ ಹೀಗಿದೆ:
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.












Click it and Unblock the Notifications