ಸ್ವಾಮಿ ಪ್ರಸಾದ್, ಸೈನಿ ಹಾಗೂ ನಾಲ್ವರು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಲಕ್ನೋ, ಜನವರಿ 14: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಹಾಗೂ ಧರಂ ಸಿಂಗ್ ಸೈನಿ ಸೇರಿದಂತೆ ಹಲವು ಬಿಜೆಪಿ ಶಾಸಕರು ಶುಕ್ರವಾರ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಮ್ಮುಖದಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಲಕ್ನೋದಲ್ಲಿ ನಡೆದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಹಾಗೂ ಧರಂ ಸಿಂಗ್ ಸೈನಿಯವರಿಗೆ ಕೆಂಪು ಪೇಟೆ ತೊಡಿಸುವ ಮೂಲಕ ಅಖಿಲೇಶ್ ಯಾದವ್, ತಮ್ಮ ಪಕ್ಷಕ್ಕೆ ಸ್ವಾಗತಿಸಿದರು. ಇದೇ ವೇಳೆ ಭಗವತಿ ಸಾಗರ್, ವಿನಯ್ ಶಾಕ್ಯ, ಮುಕೇಶ್ ವರ್ಮಾ ಮತ್ತು ರೋಶನ್ ಲಾಲ್ ವರ್ಮಾ ಸಮಾಜವಾದಿ ಪಕ್ಷಕ್ಕೆ ಸೇರಿಕೊಂಡರು.

ಸಾಗರ್ ಕಾನ್ಪುರದ ಬಿಲ್ಹೌರ್ ಕ್ಷೇತ್ರವನ್ನು ಪ್ರತಿನಿಧಿಸಿದರೆ, ವಿಯನ್ ಶಾಕ್ಯಾ ಬಿಧುನಾದ ಶಾಸಕರಾಗಿದ್ದಾರೆ. ರೋಷನ್ ಲಾಲ್ ವರ್ಮಾ ತಿಲ್ಹಾರ್ ಮತ್ತು ಮುಕೇಶ್ ವರ್ಮಾ ಶಿಕೋಹಾಬಾದ್ ಬಿಜೆಪಿ ಶಾಸಕರಾಗಿದ್ದಾರೆ. ಇವರ ಜೊತೆಗೆ ಬಿಜೆಪಿ ಮಿತ್ರಪಕ್ಷವಾಗಿರುವ ಅಪ್ನಾ ದಳ (ಎಸ್)ದ ಶೋರತ್‌ಗಂಜ್‌ನ ಶಾಸಕ ಚೌಧರಿ ಅಮರ್ ಸಿಂಗ್ ಅವರನ್ನು ಅಖಿಲೇಶ್ ಯಾದವ್ ಸ್ವಾಗತಿಸಿದರು.

UP Election: Swami Prasad Maurya, Dharam Singh Saini, other BJP MLAs join Samajwadi Party


ದಲಿತರ ಹಿತಾಸಕ್ತಿ ಉಳಿಸಲು ಎಸ್‌ಪಿಗೆ ಸೇರ್ಪಡೆ:

ಸಮಾರಂಭದಲ್ಲಿ ಮಾತನಾಡಿದ ಧರಂ ಸಿಂಗ್ ಸೈನಿ, "ಸಂವಿಧಾನ, ಪ್ರಜಾಪ್ರಭುತ್ವ ಮತ್ತು ದಲಿತರ ಹಿತಾಸಕ್ತಿ ಉಳಿಸಲು ನಾವೆಲ್ಲರೂ ಇಂದು ಸಮಾಜವಾದಿ ಪಕ್ಷಕ್ಕೆ ಸೇರುತ್ತಿದ್ದೇವೆ. ನಿಮ್ಮನ್ನು ಮುಂದಿನ ಸಿಎಂ ಮಾಡುತ್ತೇವೆ," ಎಂದರು. "ನಾವು ನಿಮ್ಮನ್ನು ಮಾರ್ಚ್ 10 ರಂದು ಯುಪಿ ಸಿಎಂ ಮತ್ತು 2024ರಲ್ಲಿ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವಂತೆ ಮಾಡುತ್ತೇವೆ," ಎಂದು ಹೇಳಿದರು.

ಮೂರು ದಿನಗಳಲ್ಲಿ 10 ಶಾಸಕರ ರಾಜೀನಾಮೆ:

ಉತ್ತರ ಪ್ರದೇಶದಲ್ಲಿ ಕಳೆದ ಮಂಗಳವಾರದಿಂದ ಮೂವರು ಸಚಿವರು ಸೇರಿದಂತೆ 10 ಮಂದಿ ಬಿಜೆಪಿ ಶಾಸಕರು ಪಕ್ಷದಿಂದ ಹೊರ ನಡೆದಿದ್ದಾರೆ. ಸರ್ಕಾರದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ನಂತರದಲ್ಲಿ ಎಲ್ಲ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ.

- ಮಂಗಳವಾರ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ಸಲ್ಲಿಸಿದ ದಿನವೇ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಭಗವತಿ ಸಾಗರ್, ರೌಷನ್ ಲಾಲ್ ವರ್ಮಾ ಮತ್ತು ಬ್ರಿಜೇಶ್ ಪ್ರಜಾಪತಿ ಬಿಜೆಪಿಗೆ ಬಾಯ್ ಬಾಯ್ ಹೇಳಿದರು.

- ಬುಧವಾರ ಸರ್ಕಾರದ ಮತ್ತೊಬ್ಬ ಸಚಿವ ದಾರಾ ಸಿಂಗ್ ಚೌಹಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದೇ ದಿನ ಶಾಸಕ ಅವತಾರ್ ಸಿಂಗ್ ಬಂಧನ ಬಿಜೆಪಿಯಿಂದ ಹೊರ ಬಂದರು.

- ಗುರುವಾರವೂ ಶಾಸಕರ ರಾಜೀನಾಮೆ ಸರಣಿ ಮುಂದುವರಿಯಿತು. ಸಚಿವ ಧರಂ ಸಿಂಗ್ ಸೈನಿ ಹಾಗೂ ಇತರೆ ಮೂವರು ಬಿಜೆಪಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ವಿನಯ್ ಸಾಕ್ಯಾ, ಮುಕೇಶ್ ವರ್ಮಾ ಮತ್ತು ಬಾಲಾ ಅವಸ್ತಿ ಪಕ್ಷದಿಂದ ಹೊರ ನಡೆದರು. ಇದೇ ದಿನ ಬಿಜೆಪಿ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಅಪ್ನಾ ದಳ ಶಾಸಕ ಚೌಧರಿ ಅಮರ್ ಸಿಂಗ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು.

ಉತ್ತರ ಪ್ರದೇಶದಲ್ಲಿ ಚುನಾವಣೆ ಪೈಪೋಟಿ:

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.

2017 ಉತ್ತರ ಪ್ರದೇಶ ಚುನಾವಣೆ ಫಲಿತಾಂಶ

ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

Recommended Video

      ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ ಪಡೆದು ನೀವೂ ಪುನೀತರಾಗಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+