ಹತ್ರಾಸ್ ಅತ್ಯಾಚಾರ ಪ್ರಕರಣದ ನ್ಯಾಯಾಂಗ ತನಿಖೆ ಬಗ್ಗೆ ತೀರ್ಪು
ಲಕ್ನೋ, ಅಕ್ಟೋಬರ್.27: ಉತ್ತರ ಪ್ರದೇಶ ಹತ್ರಾಸ್ ನಲ್ಲಿ 19 ವರ್ಷದ ಯುವತಿ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಮಂಗಳವಾರ ಹೊರಡಿಸಲಿದೆ.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ನೇತೃತ್ವದಲ್ಲಿ ವಿಶೇಷ ತನಿಖೆ ತಂಡವನ್ನು ರಚಿಸಬೇಕು. ಈ ವಿಶೇಷ ತಂಡವೇ ಹತ್ರಾಸ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ನಡೆಸಬೇಕು ಎನ್ನುವುದು ಕುಟುಂಬ ಸದಸ್ಯರ ಮನವಿಯಾಗಿತ್ತು. ಈ ಸಂಬಂಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.
ದೇಶಾದ್ಯಂತ ಸದ್ದು ಮಾಡಿದ ಹತ್ರಾಸ್ ಅತ್ಯಾಚಾರ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸೂಚಿಸಿದ್ದರು. ತದನಂತರದ ಬೆಳವಣಿಗೆಯಲ್ಲಿ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ಒಪ್ಪಿಸಲಾಗಿತ್ತು. ಪ್ರಸ್ತುತ ಸಿಬಿಐ ಅಧಿಕಾರಿಗಳ ತಂಡವು ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ.

ಎಲ್ಲ ದಾಖಲೆಗಳನ್ನು ಸಂಗ್ರಹಿಸಿದ ಸಿಬಿಐ ಅಧಿಕಾರಿಗಳು:
ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಕೈಗೆತ್ತಿಕೊಂಡ ನಾಲ್ಕು ದಿನಗಳಲ್ಲೇ ಸಿಬಿಐ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿತ್ತು. ಬೂಲಘರ್ಹಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಿಬಿಐ ಪೊಲೀಸರು ಮತ್ತು ಉತ್ತರ ಪ್ರದೇಶ ಸರ್ಕಾರವು ರಚಿಸಿದ್ದ ವಿಶೇಷ ತನಿಖಾ ತಂಡದ ಅಧಿಕಾರಿಗಳಿಂದ ಹತ್ರಾಸ್ ಪ್ರಕರಣದ ತನಿಖಾ ವರದಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಿತ್ತು. ಸಂತ್ರಸ್ತೆ ಗ್ರಾಮದಲ್ಲಿ ಆರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದ ಸಿಬಿಐ ತಂಡವು, ಘಟನಾ ಸ್ಥಳ, ಮತ್ತು ಪೊಲೀಸರು ಸಂತ್ರಸ್ತೆಯ ಅಂತ್ಯಸಂಸ್ಕಾರ ನೆರವೇರಿಸಿದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು.
ಸಿಬಿಐ ತನಿಖೆ ಶುರುವಾಗುವುದಕ್ಕೂ ಮೊದಲು ಆಗಿದ್ದೇನು?:
ಕಳೆದ ಸಪ್ಟೆಂಬರ್.14ರಂದು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಹುಲ್ಲು ಕತ್ತರಿಸುತ್ತಿದ್ದ ಯುವತಿಯನ್ನು ಠಾಕೂರ್ ಸಮುದಾಯದ ನಾಲ್ವರು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೇ, ಯುವತಿ ಕತ್ತು ಹಿಸುಕಿ, ನಾಲಗೆ ಕತ್ತರಿಸುವ ಮೂಲಕ ಕ್ರೌರ್ಯ ಮೆರೆದಿದ್ದರು. ಎರಡು ವಾರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಯುವತಿ ಸಪ್ಟೆಂಬರ್.29ರಂದು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆದಲ್ಲಿ ಕೊನೆಯುಸಿರೆಳೆದಿದ್ದಳು. ಸಪ್ಟೆಂಬರ್.30ರ ಮಧ್ಯರಾತ್ರಿ 2.30ರ ಸಂದರ್ಭದಲ್ಲಿ ಪೊಲೀಸರೇ ಯುವತಿಯ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದರು.
ಹತ್ರಾಸ್ ಅತ್ಯಾಚಾರ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಾಂಗ ತನಿಖೆ ನಡೆಸುವ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರು. ಉತ್ತರ ಪ್ರದೇಶ ಸರ್ಕಾರದ ಮನವಿ ಬಗ್ಗೆ ಅಧಿಸೂಚನೆ ನೀಡುತ್ತಿದ್ದಂತೆ ಸಿಬಿಐ ಅಧಿಕಾರಿಗಳು ಐಪಿಸಿ ಸೆಕ್ಷನ್ 307 ಅಡಿ ಅತ್ಯಾಚಾರ, 307 ಅಡಿ ಕೊಲೆ ಯತ್ನ, 302 ಅಡಿ ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದರು.












Click it and Unblock the Notifications