ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹಾಗೂ ಅಖಿಲೇಶ್ ಯಾದವ್ಗೆ ಕೊರೊನಾ
ಲಖ್ನೋ, ಏಪ್ರಿಲ್ 14: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಬುಧವಾರ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಸಿಎಂ ಯೋಗಿ ಆದಿತ್ಯಾನಾಥ್ ಟ್ವೀಟ್ ಮಾಡಿದ್ದು, ಪರೀಕ್ಷೆಯಲ್ಲಿ ಕೊರೊನಾ ಇರುವುದು ಪತ್ತೆಯಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಸೋಂಕು ಲಕ್ಷಣಗಳು ಕಂಡುಬರುತ್ತಿದ್ದಂತೆ ನಾನು ಕೋವಿಡ್ ಪರೀಕ್ಷೆಗೆ ಒಳಗಾದೆ. ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ನಾನು ಐಸೊಲೇಷನ್ನಲ್ಲಿದ್ದು, ವೈದ್ಯರ ಸಲಹೆ ಪಡೆದುಕೊಂಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕೋವಿಡ್ ಸಾವುಗಳನ್ನು ಮರೆಮಾಚುತ್ತಿದೆಯೇ ಸರ್ಕಾರ?: ಹೆಣದ ರಾಶಿ ಹೇಳುವ ಕಥೆಯೇ ಬೇರೆ
ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಅಭಿಷೇಕ್ ಕೌಶಿಕ್ ಸೇರಿದಂತೆ ಸಿಎಂ ಕಚೇರಿಯ ಕೆಲವು ಅಧಿಕಾರಿಗಳಲ್ಲಿ ಕೊರೊನಾ ದೃಢಪಟ್ಟಿತ್ತು. ಆನಂತರ ಯೋಗಿ ಅವರು ಐಸೊಲೇಷನ್ನಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಅವರಲ್ಲಿ ಕೊರೊನಾ ದೃಢಪಟ್ಟಿದೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. "ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಾನು ಮನೆಯಲ್ಲೇ ಪ್ರತ್ಯೇಕ ವಾಸವಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಟ್ವೀಟ್ ಮಾಡಿದ್ದಾರೆ. ಸೋಮವಾರವಷ್ಟೆ ಅವರು ಹರಿದ್ವಾರದ ಕುಂಭಮೇಳದಲ್ಲಿ ಭಾಗವಹಿಸಿದ್ದರು. ಲಕ್ಷಾಂತರ ಭಕ್ತರು ಕುಂಭಮೇಳದಲ್ಲಿ ಪಾಲ್ಗೊಂಡಿದ್ದರು.