ಉ.ಪ್ರದೇಶ: ಪೊಲೀಸರ ವಶಕ್ಕೆ ಮಾಜಿ ಸಿಎಂ ಅಖಿಲೇಶ್ ಯಾದವ್
ಲಕ್ನೋ, ಫೆಬ್ರವರಿ 12: ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಲಕ್ನೋದ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಸ್ವತಃ ಅಖಿಲೇಶ್ ಯಾದವ್ ಅವರು ಟ್ವೀಟ್ ಮಾಡಿದ್ದು, ಲಕ್ನೋದ ವಿಮಾನ ನಿಲ್ದಾಣದಲ್ಲಿ ನಾನು ವಿಮಾನ ಏರುವುದನ್ನು ಪೊಲೀಸರು ಬಲವಂತವಾಗಿ ತಡೆದಿದ್ದಾರೆ, ಹಾಗೂ ನನ್ನನ್ನು ವಶಕ್ಕೆ ಪಡೆದಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಒಬ್ಬ ವಿದ್ಯಾರ್ಥಿ ನಾಯಕನ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸರ್ಕಾರವು ಹೆದರಿದೆ, ದೇಶದ ಯುಕವರು ಅನ್ಯಾಯವನ್ನು ಸಹಿಸುವುದಿಲ್ಲ ಎಂದು ಸರ್ಕಾರಕ್ಕೆ ಮನದಟ್ಟಾಗಿದೆ ಹಾಗಾಗಿ ಅದು ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಯತ್ನಿಸುತ್ತಿದೆ ಎಂದು ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.

ಯಾವುದೇ ಲಿಖಿತ ಆದೇಶ ಇಲ್ಲದೆ ನನ್ನನ್ನು ವಿಮಾನ ಹತ್ತುವುದರಿಂದ ತಡೆಯಲಾಯಿತು, ಪ್ರಶ್ನಿಸಿದಾಗ ಅಧಿಕಾರಿಗಳು ಸೂಕ್ತ ಉತ್ತರ ನೀಡಲಿಲ್ಲ, ನಾನು ವಿದ್ಯಾರ್ಥಿ ಸಂಘಟನೆಯ ಕಾರ್ಯಕ್ರಮಕ್ಕೆ ಹೋಗುವುದನ್ನು ತಡೆಯುವ ಏಕೈಕ ಉದ್ದೇಶವಷ್ಟೆ ಇದರ ಹಿಂದೆ ಇದೆ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಈ ಕ್ರಮವನ್ನು ಬಿಎಸ್ಪಿ ನಾಯಕಿ ಮಾಯಾವತಿ ಸಹ ಖಂಡಿಸಿದ್ದು, ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಎಸ್-ಬಿಎಸ್ಪಿ ಮೈತ್ರಿಯಿಂದ ಹೆದರಿದ್ದು, ಸರ್ಕಾರದ ಸಂಸ್ಥೆಗಳನ್ನು ಬಳಸಿ ನಮ್ಮ ವಿರುದ್ಧ ಪಿತೂರಿ ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications