ಸುಟ್ಟ ಗಾಯಗಳಿಂದ ಅತ್ಯಾಚಾರ ಸಂತ್ರಸ್ತ ಬಾಲಕಿ ಸಾವು: ಮೂವರ ಬಂಧನ
ಲಕ್ನೋ, ನವೆಂಬರ್ 18: ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿದ್ದ 15 ವರ್ಷದ ಬಾಲಕಿ ಸುಟ್ಟ ಗಾಯಗಳಿಂದ ಮಂಗಳವಾರ ಮೃತಪಟ್ಟಿದ್ದಾಳೆ. ಬಾಲಕಿಯ ಮುಖಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಆಕೆಯ ತಂದೆ ನೀಡಿದ ದೂರಿನ ಅನ್ವಯ ಜೈಲಿನಲ್ಲಿರುವ ಆರೋಪಿಯ ಒಬ್ಬ ಸಂಬಂಧಿ ಮತ್ತು ಇಬ್ಬರು ಸ್ನೇಹಿತರನ್ನು ಬಂಧಿಸಲಾಗಿದೆ.
ಈ ಪ್ರಕರಣವನ್ನು ಹಿಂದಕ್ಕೆ ಪಡೆದುಕೊಳ್ಳುವಂತೆ ಆರೋಪಿಯ ಚಿಕ್ಕಪ್ಪ ಮತ್ತು ಸ್ನೇಹಿತರು ತೀವ್ರ ಒತ್ತಡ ಹೇರುತ್ತಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಆಗಸ್ಟ್ 15ರಂದು ಅತ್ಯಾಚಾರ ಘಟನೆ ನಡೆದಿತ್ತು. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿತ್ತು. ಆತ ಇನ್ನೂ ಜೈಲಿನಲ್ಲಿದ್ದಾನೆ. ಇಂದು ಬೆಳಿಗ್ಗೆ (ಮಂಗಳವಾರ) ಎಂಟು ಗಂಟೆಗೆ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಕಳುಹಿಸಲಾಗಿತ್ತು. ಆದರೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ಅವರು ಹೇಳಿದ್ದಾರೆ.

'ಬೆಳಿಗ್ಗೆ 11 ಗಂಟೆಯವರೆಗೂ ಬಾಲಕಿ ಸ್ವತಃ ಬೆಂಕಿ ಹಂಚಿಕೊಂಡಿದ್ದಾಳೆ ಎಂದೇ ನಂಬಲಾಗಿತ್ತು. ಆದರೆ ಬೇರೆಯವರು ಆಕೆಗೆ ಬೆಂಕಿ ಹಚ್ಚಿದ್ದಾರೆ ಎಂದು ಕುಟುಂಬದವರು ಆರೋಪಿದರು. ಈ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಇದುವರೆಗೂ ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ' ಎಂದು ತಿಳಿಸಿದ್ದಾರೆ.
ಬುಲಂದ್ಶಹರ್ನ ಸರ್ಕಾರಿ ಆಸ್ಪತ್ರೆಗೆ ಬಾಲಕಿಯನ್ನು ಮೊದಲು ಕರೆತಂದ ಸಂದರ್ಭದ ವಿಡಿಯೋದಲ್ಲಿ ಮಹಿಳೆಯೊಬ್ಬರು, ಆಕೆಯ ಕುಟುಂಬದ ಮೇಲೆ ತೀವ್ರ ಒತ್ತಡ ಹೇರಿದ್ದರಿಂದ ಮತ್ತು ಬೆದರಿಕೆಗಳನ್ನು ಹಾಕಿದ್ದರಿಂದ ನೊಂದು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಹೇಳಿರುವುದು ದಾಖಲಾಗಿತ್ತು.
ಆದರೆ, ಬಾಲಕಿಯ ತಂದೆ ದಾಖಲಿಸಿರುವ ಎಫ್ಐಆರ್ನಲ್ಲಿ ಆರೋಪಿಯ ಕುಟುಂಬದವರು ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಎರಡೂ ಆಯಾಮಗಳಿಂದ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.
ಈ ಪ್ರಕರಣದ ತನಿಖೆ ನಡೆಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದ ಇಬ್ಬರು ಪೊಲೀಸರನ್ನು ಅಮಾನತುಮಾಡಲಾಗಿದ್ದರೆ, ಇನ್ನಿಬ್ಬರು ಹಿರಿಯ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಮಾವಿನ ತೋಪಿನ ಕಾವಲಿಗೆಂದು ಗ್ರಾಮಕ್ಕೆ ಬಂದಿದ್ದ ವ್ಯಕ್ತಿಯು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆಗಸ್ಟ್ 15ರಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಳು.












Click it and Unblock the Notifications