ಬಿಜೆಪಿಗೂ ಕಾಂಗ್ರೆಸ್ಗೂ ವ್ಯತ್ಯಾಸವೇನಿದೆ? ಮತ್ತೆ ಕಿಡಿಕಾರಿದ ಮಾಯಾವತಿ
ಲಕ್ನೋ, ಫೆಬ್ರವರಿ 14: ಲೋಕಸಭೆ ಚುನಾವಣೆಯಲ್ಲಿ ಒಂದು ಹೆಜ್ಜೆ ಹಿಂದೆ ಇರಿಸಿಕೊಂಡೇ ಮಹಾಮೈತ್ರಿಕೂಟಕ್ಕೆ ಬೆಂಬಲ ವ್ಯಕ್ತಪಡಿಸಲು ಮುಂದಾಗಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಕಾಂಗ್ರೆಸ್ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿರುವ ಅವರು, ರಾಜ್ಯದಲ್ಲಿ ಗೋಹತ್ಯೆ ಮಾಡಿದ ಆರೋಪದಲ್ಲಿ ವ್ಯಕ್ತಿ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದಲ್ಲಿರುವ ಬಿಜೆಪಿ ಸರ್ಕಾರದೊಂದಿಗೆ ಮಧ್ಯಪ್ರದೇಶ ಸರ್ಕಾರವನ್ನು ಹೋಲಿಕೆ ಮಾಡಿರುವ ಅವರು, ಈ ಎರಡೂ ಸರ್ಕಾರಗಳ ನಡುವೆ ಅಂತಹ ವ್ಯತ್ಯಾಸವೇನಿದೆ ಎಂದು ಪ್ರಶ್ನಿಸಿದ್ದಾರೆ.

'ಮಧ್ಯಪ್ರದೇಶದಲ್ಲಿರುವ ಕಾಂಗ್ರೆಸ್ ಸರ್ಕಾರ ಬಿಜೆಪಿಯಂತೆಯೇ ಕಸಾಯಿಖಾನೆ ಮಾಲೀಕ ಮುಸ್ಲಿಮರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಇಲ್ಲಿ ಉತ್ತರ ಪ್ರದೇಶ ಸರ್ಕಾರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ 14 ವಿದ್ಯಾರ್ಥಿಗಳ ಮೇಲೆ ದೇಶದ್ರೋಹಿ ಪ್ರಕರಣ ದಾಖಲು ಮಾಡಿದೆ. ಇವರೆಡೂ ರಾಜ್ಯ ಭಯೋತ್ಪಾದನೆಗೆ ಉದಾಹರಣೆಗಳು ಮತ್ತು ಖಂಡನಾರ್ಹ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಯಾವ ವ್ಯತ್ಯಾಸವಿದೆ ಎಂಬುದನ್ನು ಜನರು ತೀರ್ಮಾನಿಸಬೇಕು' ಎಂದು ಮಾಯಾವತಿ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಜತೆ ಕೈಜೋಡಿಸದೆ ಎಸ್ಪಿ ಜತೆಗೂಡಿ ಲೋಕಸಭೆ ಚುನಾವಣೆ ಎದುರಿಸಲು ಮಾಯಾವತಿ ಉದ್ದೇಶಿಸಿದ್ದಾರೆ. ಕಾಂಗ್ರೆಸ್ ಮತಗಳು ವರ್ಗಾವಣೆಯಾಗದೆ ಇರುವುದರಿಂದ ಅದರೊಂದಿಗಿನ ಮೈತ್ರಿಯಿಂದ ಯಾವುದೇ ಲಾಭವಾಗುವುದಿಲ್ಲ ಎಂದು ಅವರು ಹೇಳಿದ್ದರು.












Click it and Unblock the Notifications