ಯುಪಿ ಸಿಎಂ ಪದಗ್ರಹಣ ಸಮಾರಂಭದ ಅತಿಥಿಗಳ ಪಟ್ಟಿ ಹೀಗಿದೆ
ಲಕ್ನೋ, ಮಾರ್ಚ್ 25: ಉತ್ತರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ.
ಬಿಜೆಪಿಯ ಶಾಸಕಾಂಗ ಪಕ್ಷವು ಪಕ್ಷದ ಸಭೆಯ ನಂತರ ಯೋಗಿ ಆದಿತ್ಯನಾಥ್ ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಇದರ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದ ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಲಾಯಿತು.
ಮಾರ್ಚ್ 25ರ ಶುಕ್ರವಾರ ಸಂಜೆ 4 ಗಂಟೆಗೆ ಲಕ್ನೋದಲ್ಲಿರುವ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೂತನ ಮುಖ್ಯಮಂತ್ರಿ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಇತರ ರಾಜ್ಯಗಳ ಸಚಿವರು ಮತ್ತು ಕೈಗಾರಿಕೋದ್ಯಮಿಗಳಿಗೆ ಆಹ್ವಾನ ಕಳುಹಿಸಲಾಗಿದೆ.
ಖುದ್ಧು ಕರೆ ಮಾಡಿ ಆಹ್ವಾನ ನೀಡಿದ ಯೋಗಿ:
ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಯುಪಿ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್ ಮತ್ತು ಮಾಯಾವತಿ ಅವರಿಗೆ ಖುದ್ದಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇವರ ಜೊತೆ ಕೇಂದ್ರ ಸಚಿವರಾದ ಅಮಿತ್ ಶಾ, ಅನುರಾಗ್ ಠಾಕೂರ್, ಮುಖ್ತಾರ್ ಅಬ್ಬಾಸ್ ನಖ್ವಿ, ನರೇಂದ್ರ ಸಿಂಗ್ ತೋಮರ್, ಧರ್ಮೇಂದ್ರ ಪ್ರಧಾನ್, ನಿತಿನ್ ಗಡ್ಕರಿ, ಪಿಯೂಷ್ ಗೋಯಲ್, ಭೂಪೇಂದ್ರ ಯಾದವ್, ಮಹೇಂದ್ರ ನಾಥ್ ಪಾಂಡೆ, ಸ್ಮೃತಿ ಇರಾನಿ, ಹರ್ದೀಪ್ ಸಿಂಗ್ ಪುರಿ, ಅನ್ನಪೂರ್ಣ ಯಾದವ್, ಶೋಭಾ ಕರಂಜಾಲೆ ಭಾಗವಹಿಸುವ ನಿರೀಕ್ಷೆಯಿದೆ.
ಕರ್ನಾಟಕದ ಮುಖ್ಯಮಂತ್ರಿಗೂ ಆಮಂತ್ರಣ:
ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ಪುಷ್ಕರ್ ಸಿಂಗ್ ಧಾಮಿ ಮತ್ತು ಬಸವರಾಜ ಬೊಮ್ಮಾಯಿಗೂ ಆಹ್ವಾನ ನೀಡಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಲಕ್ನೋದ ಏಕಾನಾ ಕ್ರೀಡಾಂಗಣದ ವಿಶೇಷತೆ:
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕರಿಸುವ ಅಂತಾರಾಷ್ಟ್ರೀಯ ಏಕನಾ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಐದು ನೂರು ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಭಾರತದ ಐದನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಒಟ್ಟಿಗೆ ಒಂದು ಸಾವಿರ ಕಾರ್ ಪಾರ್ಕಿಂಗ್ ಮಾಡಬಹುದು ಮತ್ತು ಐದು ಸಾವಿರ ದ್ವಿಚಕ್ರ ವಾಹನ ನಿಲುಗಡೆಗೆ ಅವಕಾಶವಿದೆ. ಈ ಕ್ರೀಡಾಂಗಣವು ಅಂತಾರಾಷ್ಟ್ರೀಯ ಮಟ್ಟದ ಫ್ಲಡ್ ಲೈಟ್ಗಳು, ಮಾಧ್ಯಮ ಕೇಂದ್ರ ಇತರ ಸೌಲಭ್ಯಗಳನ್ನು ಹೊಂದಿದೆ. ಬರೋಬ್ಬರಿ 70 ಎಕರೆ ಪ್ರದೇಶದ ವಿಸ್ತೀರ್ಣವನ್ನು ಹೊಂದಿದೆ. 50,000 ಆಸನಗಳ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣದಲ್ಲಿ 200 ವಿವಿಐಪಿ ಆಸನಗಳ ವ್ಯವಸ್ಥೆಯೂ ಇದೆ.
ಹೊಸ ಇತಿಹಾಸ ಬರೆದ ಬಿಜೆಪಿ:
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ರಾಜಧಾನಿಯನ್ನು ಕಿತ್ತಳೆ ಬಣ್ಣದಿಂದ ಅಲಂಕರಿಸಲಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಇತಿಹಾಸ ಬರೆದಿದ್ದು, ನಾಲ್ಕು ದಶಕಗಳಲ್ಲಿ ರಾಜ್ಯದಲ್ಲಿ ಸತತವಾಗಿ ಅಧಿಕಾರವನ್ನು ಗೆದ್ದ ಮೊದಲ ಪಕ್ಷವಾಗಿದೆ.
Recommended Video
2022ರಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಎರಡನೇ ಬಾರಿ ಗೆಲುವಿನ ಬಾವುಟ ಹಾರಿಸಿದೆ. ರಾಜ್ಯದ 75 ಜಿಲ್ಲೆಗಳ 403 ಕ್ಷೇತ್ರಗಳಲ್ಲಿ ಸರ್ಕಾರ ರಚಿಸುವುದಕ್ಕೆ ಕನಿಷ್ಠ 202 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಆದರೆ ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 255 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿಗೆ ಸೆಡ್ಡು ಹೊಡೆದ ಸಮಾಜವಾದಿ ಪಕ್ಷವು 111 ಕ್ಷೇತ್ರಗಳಲ್ಲಿ ಗೆಲುವಿನ ಸೈಕಲ್ ಏರಿದೆ. ಅಪ್ನಾ ದಳ 12, ಬಹುಜನ ಸಮಾಜವಾದಿ ಪಕ್ಷ 1, ಜೆಡಿಎಲ್ 2, ನಿರ್ಬಲ್ ಇಂಡಿಯನ್ ಶೋಷಿತ ಹಮಾರಾ ಆಮ್ ದಳ 6, ರಾಷ್ಟ್ರೀಯ ಲೋಕ ದಳ 8, ಸುಹೇಲ್ದೇವ್ ಭಾರತೀಯ ಸಮಾಜ ಪಾರ್ಟಿ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಮಾತ್ರ ಕೇವಲ 2 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳುವಂತೆ ಆಗಿದೆ.