ಕೊಡಗು ಪ್ರಾಕೃತಿಕ ವಿಕೋಪ: ಸಂತ್ರಸ್ತ 252 ಕುಟುಂಬಗಳಿಗೆ ಸಿಕ್ಕಿತು ಸೂರು
ಮಡಿಕೇರಿ, ಫೆಬ್ರವರಿ 20: ನೈಋತ್ಯ ಮುಂಗಾರು ಮಳೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ 2018-19ರಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿತ್ತು. ಗುಡ್ಡ ಕುಸಿತವಾಗಿ ನೂರಾರು ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಈ ದುರಂತದಲ್ಲಿ ಮನೆ ಕಳೆದುಕೊಂಡ 252 ಸಂತ್ರಸ್ತ ಕುಟುಂಬಗಳಿಗೆ ಈಗ ನೆಮ್ಮದಿಯ ಸೂರು ಸಿಕ್ಕಿದೆ. ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಟರಿ ಮೂಲಕ ಮನೆಗಳನ್ನು ಹಂಚಿಕೆ ಮಾಡಲಾಗಿದೆ.
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಇನ್ಫೋಸಿಸ್ ಸಂಸ್ಥೆಯ ಸುನಿಲ್ ಕುಮಾರ್, ಸಂತೋಷ್ ಹಾಗೂ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಉಪಸ್ಥಿತಿಯಲ್ಲಿ ಸಂತ್ರಸ್ತರಿಗೆ ಲಾಟರಿ ಮೂಲಕ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಪಾರದರ್ಶಕವಾಗಿ ಈ ಲಾಟರಿ ಪ್ರಕ್ರಿಯೆ ನಡೆಸಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಮನೆ ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ ಇನ್ಫೋಸಿಸ್ ಸಂಸ್ಥೆ ವತಿಯಿಂದ ನಿರ್ಮಾಣವಾಗಿರುವ 200 ಮನೆಗಳು, ಜಂಬೂರಿನಲ್ಲಿ ಇಂಡಿಯನ್ ಹ್ಯಾಬಿಟೇಟ್ ಸಂಸ್ಥೆಯಿಂದ ನಿರ್ಮಾಣವಾಗಿರುವ 4 ಮನೆಗಳು, ಜೊತೆಗೆ ಮದೆನಾಡು ಬಳಿ 4, ಕೆ. ನಿಡುಗಣೆ ಬಳಿ 2, ಗಾಳಿಬೀಡು ಬಳಿ 42 ಸೇರಿದಂತೆ ಒಟ್ಟು 252 ಮನೆಗಳನ್ನು ಹಂಚಿಕೆ ಮಾಡಲಾಗಿದೆ.
ಲಾಟರಿ ಮೂಲಕ ಮನೆಗಳ ಹಂಚಿಕೆ: ಜಿಲ್ಲಾಡಳಿತ, ಸಂತ್ರಸ್ತರ ಸಮ್ಮುಖದಲ್ಲಿ ಮನೆ ಹಂಚಿಕೆ ಕಾರ್ಯವು ನಡೆಯಿತು. ಲಾಟರಿ ತೆಗೆಯುವ ಮೂಲಕ ಸಂತ್ರಸ್ತರೇ ತಮ್ಮ ಮನೆ ಸಂಖ್ಯೆಯನ್ನು ಆಯ್ಕೆ ಮಾಡಿಕೊಂಡರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, "2018-19ರಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡಿದ್ದ ಬಾಕಿ ಕುಟುಂಬದವರಿಗೆ ಮನೆ ಹಂಚಿಕೆ ಮಾಡಲಾಗುತ್ತಿದೆ. ಇನ್ಫೋಸಿಸ್ ಸಂಸ್ಥೆಯಿಂದ 200 ಮನೆಗಳು ಸೇರಿದಂತೆ ಹ್ಯಾಬಿಟೇಟ್ ಸಂಸ್ಥೆಯಿಂದ ವಿವಿಧ ಕಡೆಗಳಲ್ಲಿ ನಿರ್ಮಿಸಿರುವ 52 ಮನೆಗಳನ್ನು ಲಾಟರಿ ಮೂಲಕ ಪಾರದರ್ಶಕವಾಗಿ ಮನೆ ಹಂಚಿಕೆ ಮಾಡಲಾಗುತ್ತಿದೆ" ಎಂದರು.
"ಮನೆ ಹಂಚಿಕೆ ಸಂಬಂಧ ಆಕ್ಷೇಪಣೆಗೂ ಸಹ ಅವಕಾಶ ಕಲ್ಪಿಸಲಾಗಿತ್ತು. ಆಕ್ಷೇಪಣೆ ಸಂಬಂಧ ಎಲ್ಲಾ ರೀತಿ ಪರಿಶೀಲಿಸಿ ಬಾಕಿ ಇರುವ ಸಂತ್ರಸ್ತ ಕುಟುಂಬಗಳಿಗೆ ಪಾರದರ್ಶಕವಾಗಿ ಲಾಟರಿ ಮೂಲಕ ಮನೆ ಹಂಚಿಕೆ ಮಾಡಲಾಗಿದೆ. ಈಗಾಗಲೇ ಲಾಟರಿ ಮೂಲಕ ಮನೆ ಹಂಚಿಕೆ ಮಾಡಲಾಗಿದ್ದು, ಮನೆ ಹಕ್ಕುಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರಿಂದ ಶೀಘ್ರವೇ ವಿತರಿಸಲಾಗುವುದು" ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಇನ್ಫೋಸಿಸ್ನ ಸುನಿಲ್ ಕುಮಾರ್ ಮಾತನಾಡಿ, "2018 ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಹಲವು ಕುಟುಂಬಗಳು ಮನೆ ಕಳೆದುಕೊಂಡರು. ಈ ಹಿನ್ನೆಲೆ ಇನ್ಫೋಸಿಸ್ ಸಂಸ್ಥೆಯು ಸಾಧ್ಯವಾದಷ್ಟು ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ಜಂಬೂರಿನಲ್ಲಿ 200 ಮನೆಗಳನ್ನು ನಿರ್ಮಿಸಲು ಮುಂದಾಯಿತು. ಆ ನಿಟ್ಟಿನಲ್ಲಿ 34 ಕೋಟಿ ರೂ. ವೆಚ್ಚದಲ್ಲಿ 200 ಮನೆಗಳನ್ನು ನಿರ್ಮಿಸಲಾಗಿದೆ" ಎಂದರು.
"2 ಬೆಡ್ರೂಂ ಒಳಗೊಂಡ ಮನೆಗಳು ವಿದ್ಯುತ್ ವ್ಯವಸ್ಥೆ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ಒಳಗೊಂಡಿದೆ. ಸರ್ಕಾರ ಹಾಗೂ ಜಿಲ್ಲಾಡಳಿತದ ನಿರಂತರ ಪರಿಶ್ರಮದಿಂದ ಈ ಕಾರ್ಯ ಆಗಿದೆ. ಪ್ರತಿಯೊಬ್ಬರ ಬದುಕಿನಲ್ಲಿ ವಸತಿ ಅವಶ್ಯಕ. ಆ ನಿಟ್ಟಿನಲ್ಲಿ ಸಂತ್ರಸ್ತರ ನೆಮ್ಮದಿಗೆ ಇನ್ಫೋಸಿಸ್ ಸಂಸ್ಥೆ ಸರ್ಕಾರದ ಜೊತೆ ಕೈಜೋಡಿಸಿದೆ. ಪ್ರತಿಯೊಬ್ಬರಿಗೂ ನೆಮ್ಮದಿಯ ಬದುಕು ಅತ್ಯಗತ್ಯ" ಎಂದು ತಿಳಿಸಿದರು.
ಸಂತ್ರಸ್ತರು ಮೊದಲ ಆದ್ಯತೆಯಲ್ಲಿ ಗಾಳಿಬೀಡು, 2ನೇ ಆದ್ಯತೆಯಲ್ಲಿ ಜಂಬೂರು ಆಯ್ಕೆ ಮಾಡಿದ್ದರು. ಇನ್ಫೋಸಿಸ್ ಸಂಸ್ಥೆಯ 200 ಮನೆಗಳು ಜೊತೆಗೆ ವಿವಿಧ ಪ್ರದೇಶದ 52 ಮನೆಗಳನ್ನು ಪಾರದರ್ಶಕವಾಗಿ ಹಂಚಿಕೆ ಮಾಡಲಾಗುತ್ತಿದೆ. ಈ ಹಿಂದೆ ಬಿಳಿಗೇರಿಯಲ್ಲಿ 22, ಕರ್ಣಂಗೇರಿಯಲ್ಲಿ 35, ಮದೆನಾಡು ಬಳಿ 76, ಕೆ. ನಿಡುಗಣೆ ಬಳಿ 74, ಜಂಬೂರಿನಲ್ಲಿ 379 ಮನೆಗಳು ಸೇರಿದಂತೆ ಒಟ್ಟು 586 ಮನೆಗಳು ಹಂಚಿಕೆಯಾಗಿತ್ತು. ಇದುವರೆಗೂ ಒಟ್ಟು 838 ಮನೆಗಳನ್ನು ಹಂಚಿಕೆ ಮಾಡಲಾಗಿದೆ.












Click it and Unblock the Notifications