ಕೊಡಗಿನಲ್ಲಿ ಆದ ನಷ್ಟದ ಅಂದಾಜು ಅಂಕಿ-ಅಂಶಗಳು
ಕೊಡಗು, ಆಗಸ್ಟ್ 26 : ಭಾರಿ ಮಳೆ ಮತ್ತು ಗುಡ್ಡ ಕುಸಿತದಿಂದಾಗಿ ಕೊಡಗು ಜಿಲ್ಲೆಯಲ್ಲಿ 4 ಸಾವಿರ ಎಕರೆ ಕಾಫಿ ತೋಟಕ್ಕೆ ಹಾನಿಯಾಗಿದೆ. ಪ್ರಾಥಮಿಕ ಸಮೀಕ್ಷೆಯಲ್ಲಿ ಸುಮಾರು ಎರಡು ಸಾವಿರ ಕೋಟಿ ನಷ್ಟವಾಗಿದೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ.
ಮಳೆಯಿಂದ ಜಿಲ್ಲೆಯಲ್ಲಿ ಆದ ನಷ್ಟದ ಕುರಿತು ಕೊಡಗು ಜಿಲ್ಲಾಡಳಿತ ಪ್ರಾಥಮಿಕ ಸಮೀಕ್ಷೆ ನಡೆಸಿದೆ. ಕೊಡಗಿನ ಪ್ರಮುಖ ಬೆಳೆಯಾದ ಕಾಫಿಗೆ ಭಾರಿ ಹಾನಿಯಾಗಿದೆ. ಮಡಿಕೇರಿ, ಸೋಮವಾರಪೇಟೆ ತಾಲೂಕಿನಲ್ಲಿ ಕಾಫಿ ತೋಟಕ್ಕೆ ಹೆಚ್ಚು ಹಾನಿಯಾಗಿದೆ.
4 ಸಾವಿರ ಎಕರೆ ಕಾಫಿ ತೋಟಕ್ಕೆ ಹಾನಿಯಾಗಿದೆ. 716 ಮನೆಗಳು ಸಂಪೂರ್ಣವಾಗಿ ಕುಸಿದಿವೆ. 404 ಮನೆಗಳಿಗೆ ಭಾಗಶಃ ಜಖಂ ಆಗಿವೆ. 32 ಗ್ರಾಮಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದು, 10 ಗ್ರಾಮಗಳಲ್ಲಿ ಭೂ ಕುಸಿತ ಉಂಟಾಗಿದೆ ಎಂದು ಅಂದಾಜು ಮಾಡಲಾಗಿದೆ.

1,500 ಕಿ.ಮೀ. ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದೆ. 150 ಕಿ.ಮೀ. ರಸ್ತೆಯನ್ನು ಪರ್ಯಾಯ ಮಾರ್ಗದಲ್ಲಿ ಹೊಸದಾನಿ ನಿರ್ಮಿಸಬೇಕಿದೆ. 58 ಸೇತುವೆ, 258 ಕಟ್ಟಡಗಳಿಗೆ ಹಾನಿಯಾಗಿದೆ.
ವಿಶೇಷ ಅನ್ನಭಾಗ್ಯ ಯೋಜನೆ : ಕರ್ನಾಟಕ ಸರ್ಕಾರದ ಮಹತ್ವದ ಅನ್ನಭಾಗ್ಯ ಯೋಜನೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಈ ಬದಲಾವಣೆ ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುತ್ತದೆ.
ಪ್ರತಿ ಕುಟುಂಬಕ್ಕೆ 10 ಕೆ.ಜಿ.ಅಕ್ಕಿ, ಅಡುಗೆ ಎಣ್ಣೆ, ಸಕ್ಕರೆ, ಬೇಳೆ, ಸೀಮೆಎಣ್ಣೆ ವಿತರಣೆ ಮಾಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ 17,160 ಲೀಟರ್ ಸೀಮೆಎಣ್ಣೆ ವಿತರಣೆ ಮಾಡಲಾಗಿದೆ. 153 ಕುಟುಂಬಗಳಿಗೆ ಗ್ಯಾಸ್ ಸ್ಟೌವ್ ವಿತರಣೆ ಮಾಡಲಾಗಿದೆ.
ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಕಳೆದುಕೊಂಡ ಕುಟುಂಬದವರಿಗೆ ನಕಲಿ ಕಾರ್ಡ್ಗಳನ್ನು ವಿತರಣೆ ಮಾಡಲಾಗುತ್ತಿದೆ. ಸಂತ್ರಸ್ತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ.












Click it and Unblock the Notifications