ತಲಕಾವೇರಿಯಲ್ಲಿ ಬುಧವಾರ ಸಂಜೆ ಕಾವೇರಿ ತೀರ್ಥೋದ್ಭವ
Recommended Video

ಮಡಿಕೇರಿ, ಅಕ್ಟೋಬರ್ 16 : ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ ನಡೆದಿದೆ. ತಲಕಾವೇರಿಯಲ್ಲಿ ಬುಧವಾರ ಸಂಜೆ 6 ಗಂಟೆ 43 ನಿಮಿಷದ ಮೇಷ ಲಗ್ನದಲ್ಲಿ ಬ್ರಹ್ಮ ಕುಂಡಿಕೆಯಿಂದ ತೀರ್ಥೋದ್ಭವವಾಗಲಿದೆ.
ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತುಲಾ ಸಂಕ್ರಮಣ ಜಾತ್ರೆ ಹಿನ್ನೆಲೆಯಲ್ಲಿ ಭಾಗಮಂಡಲದ ತ್ರಿವೇಣಿ ಸಂಗಮ ಹಾಗೂ ತಲಕಾವೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ ಪನ್ನೇಕರ್ ಮುಂತಾದವರು ಈ ಸಂದರ್ಭದಲ್ಲಿ ಜೊತೆಗಿದ್ದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಮಡಿಕೇರಿಗೆ ಭೇಟಿ ನೀಡಲಿದ್ದಾರೆ. ಪ್ರಕೃತಿ ವಿಕೋಪದ ಸಂತ್ರಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ತಲಕಾವೇರಿಗೆ ಭೇಟಿ ನೀಡಿ ತುಲಾ ಸಂಕ್ರಮಣ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ನಡೆಯುವ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸಲಿದ್ದಾರೆ. ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಬಸ್ ಸೌಲಭ್ಯ, ಬ್ಯಾರಿಕೇಡ್ ನಿರ್ಮಾಣ, ವಾಹನ ನಿಲುಗಡೆ ವ್ಯವಸ್ಥೆ ಮುಂತಾದ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಪೂಜೆ ಸಲ್ಲಿಕೆ
ಅರ್ಚಕ ನಾರಾಯಣಾಚರ್ ಅವರು ತೀರ್ಥೋದ್ಭವದ ಕುರಿತು ಮಾಹಿತಿ ನೀಡಿದ್ದಾರೆ. ಅಕ್ಟೋಬರ್, 17 ರಂದು ಸಂಜೆ 6.43 ಗಂಟೆಗೆ ತೀರ್ಥೋದ್ಭವ ನಡೆಯಲಿದೆ. ಕಾವೇರಿ ತೀರ್ಥ ರೂಪಿಣಿಯಾಗಿ ತುಲಾ ಸಂಕ್ರಮಣದಂದು ಕಾಣಿಸಿಕೊಳ್ಳುತ್ತಾಳೆ. ತೀರ್ಥೋದ್ಭವ ನಂತರ ಕಾವೇರಿ ತೀರ್ಥ ಪಡೆದು ಪೂಜೆ ಸಲ್ಲಿಸಿ, ಬಳಿಕ ಪ್ರಸಾದವನ್ನು ಭಕ್ತಿಪೂರ್ವಕವಾಗಿ ತೆಗೆದುಕೊಳ್ಳಲಾಗುತ್ತದೆ ಎಂದರು.

ಭಕ್ತಾದಿಗಳಿಗೆ ಅಗತ್ಯ ವ್ಯವಸ್ಥೆ
ಮಡಿಕೇರಿ-ಭಾಗಮಂಡಲ-ತಲಕಾವೇರಿಗೆ ಹೋಗಿ ಬರಲು ಅಗತ್ಯ ಬಸ್ ಸೌಲಭ್ಯ, ತಲಕಾವೇರಿಯಲ್ಲಿ ತೀರ್ಥ ಪಡೆದುಕೊಳ್ಳಲು ಏಕಮುಖವಾಗಿ ಭಕ್ತಾಧಿಗಳು ಹೋಗಲು ಅಗತ್ಯ ಬ್ಯಾರಿಕೇಡ್ಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ಹಾಗೂ ಕುಡಿಯುವ ನೀರು ವ್ಯವಸ್ಥೆ ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.

ವಿದ್ಯುತ್ ದೀಪದ ವ್ಯವಸ್ಥೆ
ತಲಕಾವೇರಿ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಊಟೋಪಚಾರ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಜಾತ್ರೆ ಸಂಬಂಧ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವತಿಯಿಂದ ಗೀತಾ ಗಾಯನ ಹಾಗೂ ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ. ತಲಕಾವೇರಿ ದೇವಾಲಯದ ಸುತ್ತ ಹೆಚ್ಚಿನ ಬೆಳಕಿಗಾಗಿ ಪೋಕಸ್ ಲೈಟ್ ವ್ಯವಸ್ಥೆ ಹಾಗೂ ಧ್ವನಿವರ್ಧಕಗಳನ್ನು ಅಳವಡಿಸಲಾಗಿದೆ.

ಸಿಸಿಟಿವಿ ಅಳವಡಿಕೆ
ಸ್ವಚ್ಛತೆ ಕಾಪಾಡಲು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಭದ್ರತೆ ದೃಷ್ಟಿಯಿಂದ ಸಿಸಿಟಿವಿ ಅಳವಡಿಸಲಾಗಿದೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. 600 ಕ್ಕೂ ಹೆಚ್ಚು ಪೊಲೀಸರು, 150 ಮಂದಿ ಎನ್.ಸಿ.ಸಿ. ಕೆಡೆಟ್ಗಳು, ಮೂವರು ಡಿವೈಎಸ್ಪಿ, 10 ಇನ್ಸ್ಪೆಕ್ಟರ್, 22 ಮಂದಿ ಸಬ್ ಇನ್ಸ್ಪೆಕ್ಟರ್ ಮತ್ತು ಸಹಾಯಕ ಸಬ್ ಇನ್ಸ್ಪೆಕ್ಟರ್ ಹಾಗೂ 8 ಪೊಲೀಸ್ ತುಕಡಿ ನಿಯೋಜಿಸಲಾಗಿದೆ.












Click it and Unblock the Notifications