ಸೆ.29ರಿಂದ ಮಡಿಕೇರಿಯಲ್ಲಿ ಸೇನಾ ನೇಮಕಾತಿ
ಮಡಿಕೇರಿ, ಆಗಸ್ಟ್ 16: ಸೇನೆಗೆ ಸೇರಿ ದೇಶ ಸೇವೆ ಮಾಡಲು ಬಯಸುವ ಅರ್ಹ ಯುವಕರು ಮಡಿಕೇರಿಯಲ್ಲಿ ನಡೆಯಲಿರುವ ಸೇನಾ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
ಸೆಪ್ಟೆಂಬರ್ 29ರಿಂದ ಅಕ್ಟೋಬರ್ 4ರವರೆಗೆ ಮಡಿಕೇರಿಯ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ನಡೆಯಲಿದೆ. ಈಗಾಗಲೇ ಇದಕ್ಕೆ ಅಗತ್ಯ ಸಿದ್ಧತೆ ನಡೆಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ.
ಈ ಸಂಬಂಧ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು, "ಸೇನಾ ನೇಮಕಾತಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಸೇನಾ ನೇಮಕಾತಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ಸಮಿತಿ ಸಂಪೂರ್ಣ ಕಾರ್ಯ ಪ್ರವೃತ್ತರಾಗಿ ಸೇನಾ rally ಯಶಸ್ವಿಗೊಳಿಸಬೇಕು" ಎಂದು ಸಮಿತಿ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.

ಸೇನಾ ನೇಮಕಾತಿ ನಡೆಯುವ ವೇಳೆ ವೈದ್ಯಕೀಯ ತಂಡ, ಆಂಬುಲೆನ್ಸ್ ಸೇವೆ, ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಕುಡಿಯುವ ನೀರು, ಸ್ವಚ್ಛತೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ನೇಮಕಾತಿ ಸಂದರ್ಭದಲ್ಲಿ ಬರುವ ಸಿಬ್ಬಂದಿಗೆ ವಸತಿ ಕಲ್ಪಿಸಬೇಕು ಎಂದು ತಿಳಿಸಿದರು.
ಸೇನಾ ನೇಮಕಾತಿ ಮುಖ್ಯಸ್ಥರಾದ ಕರ್ನಲ್ ಎಂ.ಎಸ್.ಸೆಬಿಯಾ ಅವರು ಮಾತನಾಡಿ, "ನೇಮಕಾತಿ 6 ದಿನಗಳ ಕಾಲ ನಡೆಯಲಿದ್ದು, ದೇಹದಾರ್ಢ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲಾತಿ ಪರಿಶೀಲನೆ ನಡೆಯಲಿದೆ" ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲೆ.ಕರ್ನಲ್ ಗೀತಾ, ನೋಡಲ್ ಅಧಿಕಾರಿ ಸಿ.ಜಗನ್ನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ನಗರಸಭೆ ಪೌರಾಯುಕ್ತರಾದ ಎಂ.ಎಲ್.ರಮೇಶ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಬಾಯಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಧನಂಜಯ ಮೊದಲಾದವರು ಇದ್ದರು.












Click it and Unblock the Notifications