ಅಣ್ಣ ಎಂದು ಕರೆಯದ್ದಕ್ಕೆ ದಾರಿಹೋಕನ ಮೇಲೆ ಮಾರಣಾಂತಿಕ ಹಲ್ಲೆ
ಮಡಿಕೇರಿ, ಜನವರಿ 01: ಅಣ್ಣ ಎಂದು ತನ್ನನ್ನು ಕರೆಯಲಿಲ್ಲ ಎಂದು ವ್ಯಕ್ತಿಯೊಬ್ಬ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಸೋಮವಾರಪೇಟೆ ಸಮೀಪದ ವಾಲ್ನೂರು-ತ್ಯಾಗತ್ತೂರಿನಲ್ಲಿ ನಡೆದಿದೆ.
ವಾಲ್ನೂರು-ತ್ಯಾಗತ್ತೂರು ಗ್ರಾಮದ ನಿವಾಸಿ ಅದೇ ಗ್ರಾಮದ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಮಂಗಳವಾರ ಸಂಜೆ ಯುವಕ ರಸ್ತೆ ಮಧ್ಯೆ ನಡೆದುಕೊಂಡು ಹೋಗುತ್ತಿದ್ದ. ಆಗ ಹಿಂದಿನಿಂದ ಬೈಕ್ ನಲ್ಲಿ ಬಂದ ವ್ಯಕ್ತಿ, ಬದಿಗೆ ಸರಿಯುವಂತೆ ಹಾರ್ನ್ ಮಾಡಿದ್ದಾನೆ. ಆಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಕುಪಿತನಾದ ಆ ವ್ಯಕ್ತಿ, ಯುವಕನನ್ನು ನಿಂದಿಸಿ 'ಅಣ್ಣ' ಎಂದು ಕರೆಯುವಂತೆ ಹೇಳಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ಆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದಾಗಿ ಯುವಕನಿಗೆ ಗಂಭೀರ ಗಾಯಗಳಾಗಿವೆ.
ಹಲ್ಲೆಗೊಳಗಾದ ಯುವಕ ಸಿದ್ದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
Comments
English summary
An incident took place at Valnur-Thyagathoor near somvarpete where a person assault young boy for not calling him brother