Cauvery Theerthodbhava: ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ಮುಹೂರ್ತ ಘೋಷಣೆ
ಮಡಿಕೇರಿ, ಸೆಪ್ಟೆಂಬರ್ 15: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿನ ಪವಿತ್ರ ತೀರ್ಥೋದ್ಭವದ ದಿನಾಂಕ ಘೋಷಣೆಯಾಗಿದೆ. ಪ್ರತಿ ವರ್ಷ ನಡೆಯುವ ಈ ತೀರ್ಥೋದ್ಭವ ಮತ್ತು ಜಾತ್ರೆಯಲ್ಲಿ ವಿವಿಧ ರಾಜ್ಯಗಳ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಕಾವೇರಿ ಮಾತೆಗೆ ನಮಿಸಿ, ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ. ಈ ಬಾರಿ ಅಕ್ಟೋಬರ್ 17 ರಂದು ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವವಾಗಲಿದೆ.
ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ತೀರ್ಥೋದ್ಭವ ಪೂರ್ವಭಾವಿ ಸಭೆಯು ನಡೆಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಅಧಿಕಾರಿಗಳಿಗೆ ಸೂಚನೆ: ಸಭೆಯಲ್ಲಿ ಮಾತನಾಡಿದ ಸಚಿವರು, ಇದೇ ಅಕ್ಟೋಬರ್ 17ರಂದು ತಲಕಾವೇರಿಯಲ್ಲಿ ನಡೆಯುವ ಪವಿತ್ರ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಪವಿತ್ರ ತೀರ್ಥೋದ್ಭವ ಸಂಬಂಧ ತಲಕಾವೇರಿಯಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ಕೊಟ್ಟರು.
"ಈ ಬಾರಿ ಅಕ್ಟೋಬರ್ 17ರಂದು ಬೆಳಗ್ಗೆ 7.40 ಗಂಟೆಗೆ ಪವಿತ್ರ ತೀರ್ಥೋದ್ಭವ ನಡೆಯಲಿದೆ. ರಾತ್ರಿ ವೇಳೆಯಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ಆದ್ದರಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆ ಕಡಿಮೆಯಾಗಿದ್ದು, ಕೂಡಲೇ ರಸ್ತೆ ನಿರ್ವಹಣೆ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಅಧಿಕಾರಿಗಳು ತೀರ್ಥೋದ್ಭವ ಸಂಬಂಧ ಅಗತ್ಯ ಬಂದೋಬಸ್ತ್ ಮಾಡಬೇಕು" ಎಂದು ಸಚಿವರು ಸೂಚನೆ ನೀಡಿದರು.
"ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಬಸ್ ಸೌಲಭ್ಯ ಒದಗಿಸಬೇಕು. ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಹಂತದಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ" ಸಚಿವರು ನಿರ್ದೇಶನ ನೀಡಿದರು.
ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಮಾತನಾಡಿ, "ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ನಾಡಿನ ಜೀವನದಿ ತಲಕಾವೇರಿಯ ಪವಿತ್ರ ತೀರ್ಥೋದ್ಭವ ಒಂದು ವಿಶಿಷ್ಟವಾಗಿದ್ದು, ಪವಿತ್ರ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಭಕ್ತಾಧಿಗಳಿಗೆ ಅಗತ್ಯ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು. ಮಡಿಕೇರಿ-ಭಾಗಮಂಡಲ, ಕರಿಕೆ-ಭಾಗಮಂಡಲ, ವಿರಾಜಪೇಟೆ-ಭಾಗಮಂಡಲ ರಸ್ತೆಗುಂಡಿ ಮುಚ್ಚಬೇಕು. ಹಾಗೆಯೇ ಭಾಗಮಂಡಲ-ತಲಕಾವೇರಿ ರಸ್ತೆ ಸರಿಪಡಿಸಬೇಕು" ಎಂದು ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, "ಪ್ರತಿ ಬಾರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗುತ್ತದೆ. ಇದನ್ನು ನಿಯಂತ್ರಿಸಲು ಭಕ್ತಾಧಿಗಳು ಸಹಕರಿಸಬೇಕು. ಈ ಬಾರಿ ಬೆಳಗಿನ ವೇಳೆ ತೀರ್ಥೋದ್ಭವ ಸಂಭವಿಸುವುದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆ ಆಗಮಿಸಲಿದ್ದಾರೆ. ಆದ್ದರಿಂದ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗುವುದು" ಎಂದರು.
ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿಗಳು ತೀರ್ಥೋದ್ಭವಕ್ಕೆ ಅಗತ್ಯ ಬಸ್ ಸೌಲಭ್ಯವನ್ನು ಕಳೆದ ಬಾರಿಯಂತೆ ಕಲ್ಪಿಸಲಾಗುವುದು ಎಂದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಮಾತನಾಡಿ, "ತೀರ್ಥೋದ್ಭವ ಜಾತ್ರೆ ಮಹೋತ್ಸವ ಸಂಬಂಧ ಅರಣ್ಯ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು" ಎಂದು ಹೇಳಿದರು.
ಶಾಸಕ ಎ. ಎಸ್. ಪೊನ್ನಣ್ಣ ಮಾತನಾಡಿ, "ಧಾರ್ಮಿಕ ಆಚರಣೆ ಮತ್ತು ವಿಚಾರಗಳಿಗೆ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ದೇವಾಲಯ ಸಮಿತಿಯವರು ಕುಳಿತು ನಿರ್ಧಾರ ತೆಗೆದುಕೊಳ್ಳಬೇಕು. ಈ ಬಗ್ಗೆ ಹಿರಿಯರ ಜೊತೆ ಚರ್ಚಿಸಬೇಕು. ಯಾರಿಗೂ ನೋವು ಉಂಟಾಗದಂತೆ ಗಮನಹರಿಸುವುದು ಅತ್ಯವಶ್ಯಕ. ಆಡಳಿತ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ನಿರ್ಲಕ್ಷ್ಯ ಕಂಡುಬಂದಲ್ಲಿ ಕೂಡಲೇ ಗಮನಕ್ಕೆ ತರುವಂತಾಗಬೇಕು. ಭಕ್ತಾಧಿಗಳಿಗೆ ಸಮಸ್ಯೆ ಆಗದಂತೆ ಗಮನಹರಿಸುವುದು ಅತ್ಯಗತ್ಯ" ಎಂದರು.












Click it and Unblock the Notifications