ಕೊಡಗಿನ ವಿವಿಧ ಪ್ರದೇಶದಲ್ಲಿ ಕೇಂದ್ರ ತಂಡದ ಪರಿಶೀಲನೆ
ಮಡಿಕೇರಿ, ಸೆಪ್ಟೆಂಬರ್ 13 : ಮಳೆ, ಭೂ ಕುಸಿತದಿಂದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಗೆ ಕೇಂದ್ರ ತಂಡ ಆಗಮಿಸಿದೆ. ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ತಂಡ, ಹಾನಿಯ ಪರಿಶೀಲನೆಯನ್ನು ನಡೆಸುತ್ತಿದೆ.
ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್ ನೇತೃತ್ವದ ತಂಡದಲ್ಲಿ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಅಧೀಕ್ಷಕ ಅಭಿಯಂತರ ಜಿತೇಂದ್ರ ಪಾನ್ವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪೊನ್ನುಸ್ವಾಮಿ ಅವರು ತಂಡದಲ್ಲಿದ್ದಾರೆ.

ಅತಿವೃಷ್ಟಿಯಿಂದ ಹಾನಿಗೀಡಾದ ಹಟ್ಟಿಹೊಳೆ, ಕಾಂಡನಕೊಲ್ಲಿ, ಹಾಲೇರಿ, ಮುಕ್ಕೋಡ್ಲು, ಜಂಬೂರು ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿದ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಸಂಸದ ಪ್ರತಾಪ್ ಸಿಂಹ ಅವರು ಮಾಹಿತಿ ನೀಡಿದರು.
ವಿವಿಧ ಪ್ರದೇಶಗಳ ಭೇಟಿ ಬಳಿಕ ತಂಡದ ಅಧಿಕಾರಿಗಳು ಕುಶಾಲನಗರದ ಹಾರಂಗಿ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದರು. ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಜಿಲ್ಲಾಡಳಿತ ಮಾಹಿತಿ ನೀಡಿತು.
ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ ತಂಡದ ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ವಿವರವಾದ ವರದಿಯನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಕೊಡಗು ಮತ್ತು ಅತಿವೃಷ್ಟಿಯಿಂದ ಹಾನಿಯಾಗ ಜಿಲ್ಲೆಗಳಿಗೆ 2 ಸಾವಿರ ಕೋಟಿ ಪರಿಹಾರ ನೀಡುವಂತೆ ಮನವಿ ಮಾಡಿದರು.












Click it and Unblock the Notifications