ಮಡಿಕೇರಿ: ಪೊಲೀಸ್ ವಶಕ್ಕೆ 22 ಹುಲಿ ಉಗುರು, ಇಬ್ಬರ ಸೆರೆ
ಮಡಿಕೇರಿ, ಮೇ13: ಹುಲಿಯ 22 ಉಗುರುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಜಡೆಸ್ವಾಮಿ ಮತ್ತು ರಾಮಚಂದ್ರ ಎಂಬವರೇ ಬಂಧಿತ ಆರೋಪಿಗಳಾಗಿದ್ದು, ತನಿಖೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಪ್ರಕರಣದ ಹೆಚ್ಚಿನ ವಿವರಗಳನ್ನು ನೀಡಲು ಪೊಲೀಸರು ನಿರಾಕರಿಸಿದ್ದಾರೆ.
ಹುಲಿಯ 22 ಉಗುರು ವಶ
ಮೇ12ರಂದು ನಗರದ ಸುದರ್ಶನ ವೃತ್ತದ ಬಳಿ ಸಿದ್ದಾಪುರ ಕಡೆಗೆ ಹೋಗುವ ರಸ್ತೆ ಬದಿಯಲ್ಲಿರುವ ಬಸ್ ನಿಲ್ದಾಣದ ಬಳಿ ಇಬ್ಬರು ವ್ಯಕ್ತಿಗಳು ಹುಲಿಯ 22 ಉಗುರುಗಳನ್ನು ಅಕ್ರಮವಾಗಿ ಇಟ್ಟುಕೊಂಡು ಅದನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಡಿಕೇರಿ ತಾಲೂಕು ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳಕ್ಕೆ ಖಚಿತ ಮಾಹಿತಿ ಲಭಿಸಿತ್ತು. ಈ ಸಂದರ್ಭ ಸಿಬ್ಬಂದಿಗಳು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಬಂಧಿಸಿದ್ದಾರೆ. ಆರೋಪಿಗಳ ವಶದಲ್ಲಿದ್ದ ಹುಲಿಯ 22 ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆ:
ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್.ಟಿ.ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಮತ್ತು ಮಂಜುನಾಥ್ ಅವರುಗಳು ಕಾರ್ಯಾಚರಣೆ ನಡೆಸಿದರು.
Recommended Video