ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚನೆ: ಕುಮಾರಸ್ವಾಮಿ
ಕೊಡಗು, ಅಕ್ಟೋಬರ್ 17: ಪ್ರವಾಹದಿಂದ ನಲುಗಿರುವ ಕೊಡಗು ಜಿಲ್ಲೆಯನ್ನು ಪುನರ್ ನಿರ್ಮಾಣ ಮಾಡಲು ಪ್ರಾಧಿಕಾರ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಕೊಡಗಿನ ಪುನರ್ ನಿರ್ಮಾಣಕ್ಕೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸ್ಪಂದಿಸಿ, ಪ್ರಾಧಿಕಾರ ರಚಿಸಲಾಗುವುದು. ಇದರಿಂದ ಪುನರ್ ನಿರ್ಮಾಣ ಕಾರ್ಯಕ್ರಮಗಳಿಗೆ ಇನ್ನಷ್ಟು ವೇಗ ಸಿಗಲಿದೆ ಎಂದರು.
ಇದುವರೆಗೆ ಕೊಡಗು ಜಿಲ್ಲೆಗೆ 127 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಕೊಡಗು ಪರಿಹಾರ ನಿಧಿಗೆ ಬಂದ ಹಣವನ್ನು ಸಂಪೂರ್ಣವಾಗಿ ಸಂತ್ರಸ್ತರ ಬದುಕು ಬದಲಾಯಿಸಲು ಹಾಗೂ ಅವರ ಪುನರ್ವಸತಿಗೆ ಬಳಕೆ ಮಾಡಲಾಗುವುದು. ಯಾವುದೇ ಕಾರಣಕ್ಕೂ ಇದರ ದುರ್ಬಳಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಮನೆ ಕಳೆದುಕೊಂಡ ಸುಮಾರು 800 ಕುಟುಂಬಗಳಿಗೆ ತಾತ್ಕಾಲಿಕವಾಗಿ ಮಾಸಿಕ 10000 ರೂ ವರೆಗೆ ಮನೆ ಬಾಡಿಗೆ ನೀಡಲಾಗುವುದು. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ನಿಯಮವನ್ನು ಬದಿಗಿಟ್ಟು ದೇಶದಲ್ಲಿಯೇ ಪ್ರಥಮ ಬಾರಿಗೆ ಮನೆ ಕಳೆದುಕೊಂಡವರಿಗೆ ಅತ್ಯಧಿಕ ಪರಿಹಾರ ನೀಡಲಾಗುತ್ತಿದೆ.
ಪ್ರತಿ ಮನೆ ಪುನರ್ ನಿರ್ಮಾಣಕ್ಕೆ ಸಂತ್ರಸ್ತರಿಗೆ ಒಟ್ಟಾರೆಯಾಗಿ ರೂ. 8.53 ಲಕ್ಷ ಮೊತ್ತವನ್ನು ನೀಡಲಾಗುವುದು. ಮನೆಗಳ ಪುನರ್ ನಿರ್ಮಾಣ ಕಾರ್ಯವನ್ನು ವೇಗದಲ್ಲಿ ನಡೆಸಲಾಗುವುದು.
ಗದ್ದೆ, ಕೃಷಿ ಜಮೀನು ಮತ್ತು ತೋಟಗಳಲ್ಲಿ ಕೃಷಿ ಕಾರ್ಯಗಳ ಪುನರ್ ಚಾಲನೆಗೆ ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ ವಿವಿಧ ಜಿಲ್ಲೆಗಳ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.
ಸಂತ್ರಸ್ತರ ಮಕ್ಕಳ ಒಂದು ವರ್ಷದ ಸಂಪೂರ್ಣ ಶೈಕ್ಷಣಿಕ ಖರ್ಚುವೆಚ್ಚಗಳನ್ನು ರಾಜ್ಯ ಸರಕಾರ ನೋಡಿಕೊಳ್ಳಲಿದೆ. ಇದಲ್ಲದೇ, ಹಾನಿಗೊಂಡಿರುವ ಶಾಲಾ ಕಾಲೇಜುಗಳನ್ನು ಪುನರ್ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಪ್ರಕಟಿಸಿದರು. ಕೊಡಗಿಗೆ ಮತ್ತೊಮ್ಮೆ ಭೇಟಿ ನೀಡಿ ಪುನರ್ ವಸತಿ ಹಾಗೂ ಪರಿಹಾರ ಕಾರ್ಯಗಳನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.
ಅತಿವೃಷ್ಠಿಯಿಂದ ಸಂಕಷ್ಟದಲ್ಲಿರುವ ಸಂತ್ರಸ್ತರಲ್ಲಿ ಆತ್ಮವಿಶ್ವಾಸ ತುಂಬಲು ಸಂವಾದ ನಡೆಸಲಾಗುತ್ತಿದೆ. ಸಂತ್ರಸ್ತರು ಸರಕಾರದಿಂದ ಏನು ಬಯಸಿದ್ದಾರೆ ಎಂಬುದು ತಿಳಿಯುವುದು ಇದರ ಉದ್ದೇಶ. ಯಾವುದೇ ರಾಜಕೀಯ ಉದ್ದೇಶ ಇದರಲ್ಲಿ ಇಲ್ಲ. ಅಧಿಕಾರ ತನಗೆ ಮುಖ್ಯ ಅಲ್ಲ. ಕೊಡಗು ಸಂಕಷ್ಟದಲ್ಲಿದ್ದಾಗ ಇಲ್ಲಿನ ಸಂಘಸಂಸ್ಥೆಗಳು, ಜನಪ್ರತಿನಿಧಿಗಳು ಸ್ಪಂದಿಸಿದ್ದಾರೆ. ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಒದಗಿಸುವ ಜವಾಬ್ದಾರಿ ರಾಜ್ಯ ಸರಕಾರದ ಮೇಲಿದೆ ಎಂದರು.












Click it and Unblock the Notifications