ಕೊಡಗು ಜಿಲ್ಲೆಗೆ ಸಿದ್ದರಾಮಯ್ಯ ಸರ್ಕಾರದ ಕೊಡುಗೆಗಳು
ಮಡಿಕೇರಿ, ಜನವರಿ 09: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನವ ಕರ್ನಾಟಕ ನಿರ್ಮಾಣ ಯಾತ್ರೆ ಇಂದು ಕೊಡಗು ಜಿಲ್ಲೆ ತಲುಪಿದೆ. ಜಿಲ್ಲೆಯಲ್ಲಿ ಮೂರು ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ಜಿಲ್ಲೆಯ ಪ್ರಮುಖ ರಾಜಕೀಯ ಕ್ಷೇತ್ರವಾದ ಮಡಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಜೊತೆಗೆ ಸ್ಥಳೀಯ ಶಾಸಕರು, ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಫಲಾನುಭವಿಗಳಿಗೆ ಯೋಜನೆಗಳನ್ನು ವಿತರಿಸಲಿದ್ದಾರೆ.
ಉಡುಪಿ ಜಿಲ್ಲೆಗೆ ಸಿದ್ದರಾಮಯ್ಯ ಏನು ಕಾಣಿಕೆ ನೀಡಿದ್ದಾರೆ?
ತಮ್ಮ ಭಾಷಣದಲ್ಲಿ ಕೊಡಗು ಜಿಲ್ಲೆಗೆ ಸರ್ಕಾರ ನೀಡಿರುವ ಕೊಡುಗೆಗಳ ಪ್ರಸ್ತಾಪ ಮಾಡಲಿರುವ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ ಎಂದು ಊಹಿಸಲಾಗಿದೆ.
ಕೊಡಗು ಜಿಲ್ಲೆಗೆ ಸರ್ಕಾರ ನೀಡಿರುವ ಕೊಡುಗೆಗಳ ಪಟ್ಟಿ ಇಲ್ಲಿದೆ...
ಪ್ರತಿ ವರ್ಷ 150 ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ
ಮಾನ್ಯ ಮುಖ್ಯಮಂತ್ರಿಯವರು 2013 ರ ನವೆಂಬರ್ ತಿಂಗಳಲ್ಲಿ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ 13 ಕೋಟಿ ರೂ ವೆಚ್ಚದಲ್ಲಿ ನಿರ್ಮಿತವಾದ ಜಿಲ್ಲಾಡಳಿತ ಭವನವನ್ನು ಉದ್ಘಾಟಿಸಿದ್ದಾರೆ. ನಗರದ ಹೊರ ವಲಯದಲ್ಲಿ ಸುಮಾರು 150 ಕೋಟಿ ರೂ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಿದ್ದು, ಪ್ರಸ್ತುತ ಸರ್ಕಾರದಲ್ಲಿ ಕಾಲೇಜು ಶಿಕ್ಷಣ ಆರಂಭವಾಗಿದೆ. ಇಲ್ಲಿ ಪ್ರತಿ ವರ್ಷ 150 ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಪಡೆಯುತ್ತಿದ್ದಾರೆ.
ಪಂಚಾಯಿತಿ ವ್ಯಾಪ್ತಿಯಲ್ಲಿ ನೀರು, ರಸ್ತೆಗೆ 131 ಕೋಟಿ
ನಗರದ ಹೊರ ವಲಯದ 5 ಎಕರೆ ಪ್ರದೇಶದಲ್ಲಿ ಸುಮಾರು 21 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಪಂಚಾಯತ್ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ ದೊರೆತಿದೆ. ನಗರೋತ್ಥಾನ ಯೋಜನೆಯಡಿ ಕೊಡಗು ಜಿಲ್ಲೆಯ ಒಂದು ನಗರಸಭೆ ಮತ್ತು ಮೂರು ಪಟ್ಟಣ ಪಂಚಾಯತ್ಗಳಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸುಮಾರು 131 ಕೋಟಿ ರೂ ಬಿಡುಗಡೆಯಾಗಿದ್ದು, ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಸುಮಾರು 4.50 ಕೋಟಿ ರೂ ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ ದೊರೆತಿದೆ.
528 ಆದಿವಾಸಿ ಕುಟುಂಬಗಳಿಗೆ ನಿವೇಶನ
ಪ್ರಸ್ತುತ ಸರ್ಕಾರ ಜಿಲ್ಲಾ ಪಂಚಾಯತ್ ಹಾಗೂ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ ಕಳೆದ ನಾಲ್ಕು ಬಜೆಟ್ನಲ್ಲಿ ತಲಾ 50 ಕೋಟಿ ರೂ ಬಿಡುಗಡೆ ಮಾಡಿ ನೂರಾರು ಕಿ.ಮೀ ಡಾಂಬಾರು ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಹಲವು ವರ್ಷಗಳ ಬೇಡಿಕೆಯಾದ ಜಿಲ್ಲೆಯ ನಿರಾಶ್ರಿತ ಸುಮಾರು 528 ಆದಿವಾಸಿ ಕುಟುಂಬಗಳಿಗೆ ಜಿಲ್ಲೆಯ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿವೇಶನ ಹಂಚಿಕೆ ಜೊತೆಗೆ ಮನೆ ನಿರ್ಮಾಣ ಪ್ರಗತಿ ಕಾರ್ಯ ನಡೆದಿದೆ. ಇದಕ್ಕಾಗಿ ಪ್ರಸ್ತುತ ಸರ್ಕಾರ ಸುಮಾರು 26.86 ಕೋಟಿ ರೂ ವೆಚ್ಚದಲ್ಲಿ ವಸತಿ ಹಾಗೂ ಮನೆ ನಿರ್ಮಾಣ ಕಾರ್ಯ ಕೈಗೊಂಡಿದೆ. ಈಗಾಗಲೇ ಶೇ 50 ರಷ್ಟು ಹಣ ಬಿಡುಗಡೆಯಾಗಿದೆ.
ಗಿರಿಜನರ ಭವನ ನಿರ್ಮಾಣಕ್ಕೆ 3.50 ಕೋಟಿ
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ 3 ಕೋಟಿ ರೂ ಬಿಡುಗಡೆ ಮಾಡಿದ್ದು, ಜಿಲ್ಲಾಡಳಿತ ವತಿಯಿಂದ 80 ಸೆಂಟು ಜಾಗ ನಿಗದಿ ಮಾಡಲಾಗಿದೆ. ಸದ್ಯದಲ್ಲಿಯೇ ಕಾಮಗಾರಿಗೆ ಚಾಲನೆ ದೊರೆಯಲಿದೆ. ಆದಿವಾಸಿ ಗಿರಿಜನ ಭವನ ನಿರ್ಮಾಣಕ್ಕೆ 3.50 ಕೋಟಿ ರೂ ಬಿಡುಗಡೆಯಾಗಿದ್ದು, ಸದ್ಯದಲ್ಲಿಯೇ ಕಾಮಗಾರಿ ಆರಂಭವಾಗಲಿದೆ. ಹಾಗೆಯೇ ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಅಭಿವೃದ್ಧಿ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ನೂತನ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳು ಆರಂಭವಾಗಿದೆ.
ಅನ್ನಭಾಗ್ಯ ಯೋಜನೆಯಿಂದ ಲಕ್ಷ ಕುಟುಂಬಕ್ಕೆ ಲಾಭ
ರಾಜ್ಯ ಸರ್ಕಾರದ ಕೃಷಿ ಯಂತ್ರಧಾರೆ ಯೋಜನೆಯಡಿಯಲ್ಲಿ ಸಾವಿರಾರು ರೈತರಿಗೆ ಪ್ರಯೋಜವಾಗಿದ್ದು, ಕೃಷಿಯಲ್ಲಿ ಹೆಚ್ಚಿನ ತಂತ್ರಗಾರಿಕೆ ಅಳವಡಿಸಿಕೊಳ್ಳಲು ಸಾಧ್ಯವಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಬಡ ಕುಟುಂಬಗಳು ಪ್ರಯೋಜವನ್ನು ಪಡೆದಿವೆ.