ಕೊಡಗು ಪ್ರವಾಹ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಡಿ.7ರಂದು ಶಂಕು ಸ್ಥಾಪನೆ
ಮಡಿಕೇರಿ, ಡಿಸೆಂಬರ್ 06 : ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆಯನ್ನು ಕಳೆದುಕೊಂಡ ಜನರಿಗೆ ರಾಜ್ಯ ಸರ್ಕಾರ ಮನೆ ನಿರ್ಮಿಸಿ ಕೊಡಲಿದೆ. 840 ಮನೆಗಳ ನಿರ್ಮಾಣಕ್ಕೆ ಶುಕ್ರವಾರ ಶಂಕುಸ್ಥಾಪನೆ ಮಾಡಲಾಗುತ್ತದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರಪೇಟೆ ತಾಲೂಕಿನ ಮಾದಾಪುರದಲ್ಲಿ ಅವರು ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಆಧುನಿಕ ತಂತ್ರಜ್ಞಾನವನ್ನು ಬಳಸಿ 840 ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುತ್ತಿದೆ. ಕೆ.ನಿಡುಗುಣಿ ಗ್ರಾಮದಲ್ಲಿ ಸಂತ್ರಸ್ತರ ಪುನರ್ವಸತಿಗಾಗಿ ಸ್ಥಳ ಗುರುತಿಸಲಾಗಿದೆ. ವಿವಿಧ ಏಜೆನ್ಸಿಗಳು ಇಲ್ಲಿ 6 ಮಾದರಿ ಮನೆ ನಿರ್ಮಾಣ ಮಾಡಿವೆ.

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಕಟ್ಟಿರುವ ಮಾದರಿ ಮನೆಯನ್ನು ಸರ್ಕಾರ ಅಂತಿಮಗೊಳಿಸಿದೆ. ಈಗ ಒಂದು ಬೆಡ್ ರೂಂ ನಿರ್ಮಿಸಲಾಗಿದೆ. ಆದರೆ, ಸರ್ಕಾರ ಇನ್ನೂ ದೊಡ್ಡದಾದ 2 ಬೆಡ್ ರೂಂ ಮನೆಯನ್ನು ಕಟ್ಟಿಕೊಡಲಿದೆ.
ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ 6 ಲಕ್ಷ ವೆಚ್ಚದಲ್ಲಿ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡಲು ಅವಕಾಶವಿದೆ. ಆದರೆ, ಕೊಡಗಿನಲ್ಲಿ ಆದ ಹಾನಿಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದ್ದು, 10 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ' ಎಂದು ಹೇಳಿದ್ದಾರೆ.
ಕೊಡಗು ಜಿಲ್ಲೆಯ ಕೆ.ನಿಡುಗಣೆ, ಕರ್ಣಂಗೇರಿ, ಗಾಳಿಬೀಡು, ಮದೆ, ಬಿಳಿಗೇರಿ, ಸಂಪಾಜೆ, ಜಂಬೂರು ಮತ್ತು ಇತರ ಸ್ಥಳಗಳಲ್ಲಿ 110 ಎಕರೆ ಜಾಗವನ್ನು ಗುರುತಿಸಲಾಗಿದ್ದು, ಅಲ್ಲಿ 30*40 ಅಳತೆಯ ನಿವೇಶನದಲ್ಲಿ ಮನೆ ನಿರ್ಮಾಣವಾಗಲಿದೆ.












Click it and Unblock the Notifications