ಕೊಡಗಿನ ಗ್ರಾಮ ಪಂಚಾಯಿತಿಗಳಲ್ಲಿ ಕೊರೊನಾ ಕೇರ್ ಸೆಂಟರ್
ಮಡಿಕೇರಿ, ಮಾರ್ಚ್ 23: ಕೊಡಗಿನ ಪ್ರತೀ ಗ್ರಾಮ ಪಂಚಾಯಿತಿಗಳಲ್ಲಿ ಕೋವಿಡ್-19 ಕೇರ್ ಸೆಂಟರ್ ನ್ನು ತೆರೆಯಲು ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ಅವರ ಅಧ್ಯಕ್ಷತೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ ಪೆನ್ನೇಕರ್ ಅವರ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.
Recommended Video
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಮುಂದಿನ ಹಂತದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಪ್ರತೀ ಹೋಬಳಿ ಕೇಂದ್ರಕ್ಕೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನೋಡಲ್ ಅಧಿಕಾರಿಗಳು ತಮ್ಮ ಹಂತದಲ್ಲಿ ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಮನೆ ಬಾಗಿಲಿಗೆ ಎರಡು ತಿಂಗಳ ಪಡಿತರ ಬರಲಿದ್ದು, ಬಯೋಮೆಟ್ರಿಕ್ ಇರುವುದಿಲ್ಲ, ಯಾವುದೇ ಕಾರಣಕ್ಕೂ ಗೊಂದಲಕ್ಕೆ ಒಳಗಾಗದೆ ಜನರು ಗುಂಪು ಸೇರಬಾರದು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ತರಕಾರಿ, ದಿನಸಿ ಪದಾರ್ಥಗಳ ಅಂಗಡಿಗಳಿಗೆ ಯಾವುದೇ ರೀತಿಯ ತೊಂದರೆಯಿಲ್ಲ. ಉಳಿದಂತೆ ಸರ್ಕಾರದ ನಿರ್ದೇಶನದಂತೆ ಲಾಕ್ ಡೌನ್ ಮಾಡಬೇಕು. ಯಾವುದೇ ಕಾರಣಕ್ಕೂ ಇದರಲ್ಲಿ ವಿನಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೇರಳ ರಾಜ್ಯಕ್ಕೆ ಕೊಡಗು ಜಿಲ್ಲೆಯ ಮೂಲಕ ವಾಹನಗಳು ಹೋಗಲು ಬಿಡುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಮುಂದಿನ ಹಂತದಲ್ಲಿ ಸವಾಲುಗಳನ್ನು ಎದುರಿಸಲು ಇನ್ನಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಅನೀಸ್ ಕೆ ಜಾಯ್ ಅವರು ನಿರ್ದೇಶನ ನೀಡಿದರು.
ಸರ್ಕಾರದ ನಿರ್ದೇಶನದಂತೆ ಲಾಕ್ ಡೌನ್ ಕಾರ್ಯವನ್ನು ಕಠಿಣವಾಗಿ ನಿರ್ವಹಿಸಬೇಕಿದೆ. ಯಾರಿಗೂ ವಿಧೇಯತೆ ತೋರುವ ಅಗತ್ಯವಿಲ್ಲ. ಲಾಕ್ ಡೌನ್ ಸಂದರ್ಭದಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎಂಬ ಬಗ್ಗೆ ಮಾಹಿತಿ ನೀಡಲಾಗಿದ್ದು, ಅದರಂತೆ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.