ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ 2 ದಿನಗಳಲ್ಲಿ ತೀರ್ಮಾನ ಪ್ರಕಟ: ಸಚಿವ ಎಸ್ಟಿಎಸ್
ಮಡಿಕೇರಿ, ಜುಲೈ 2: ಜೂನ್ 30 ಕ್ಕೆ ರೈತರ ಸಾಲ ವಾಪಸ್ ಕೊಡಲು ಕೊನೆಯ ದಿನಾಂಕವಿತ್ತು. ಇನ್ನೂ ಡಿಸೆಂಬರ್ ವರೆಗೆ ಮರುಪಾವತಿ ಮಾಡುವಂತೆ ಆಗ್ರಹಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಇನ್ನು 2-3 ದಿನಗಳಲ್ಲಿ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
Recommended Video
ಮಡಿಕೇರಿಯ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಹಕಾರ ಇಲಾಖೆ ವತಿಯಿಂದ ಕೊರೊನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರಿಗೆ ತಲಾ 3000 ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮದಲ್ಲಿ ಚೆಕ್ ಕೊಡುವ ಮೂಲಕ ಚಾಲನೆ ನೀಡಿ ಸಚಿವರು ಮಾತನಾಡಿದರು.
ಕೊಡಗಿನ ರೆಸಾರ್ಟ್ ಗಳತ್ತ ಬರುವ ಪ್ರವಾಸಿಗರಿಗೆ ಎಚ್ಚರಿಕೆ!
ಕೋವಿಡ್ ಪರಿಸ್ಥಿತಿ ಇನ್ನೂ ಮುಂದುವರಿದಿರುವ ಕಾರಣ ಸಾಲ ಮರುಪಾವತಿ ಅವಧಿಯನ್ನು ವಿಸ್ತರಣೆ ಮಾಡಬೇಕೆಂಬ ಬಗ್ಗೆ ರೈತರಿಂದ ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜೊತೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಈ ಬಾರಿ 14,500 ಕೋಟಿ ರೂ. ಸಾಲ
ಕಳೆದ ವರ್ಷ ರೈತರಿಗೆ 13,500 ಕೋಟಿ ರುಪಾಯಿ ಸಾಲ ಕೊಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ನಬಾರ್ಡ್ ನಿಂದ ಹೆಚ್ಚುವರಿ ಒಂದು ಸಾವಿರ ಕೋಟಿ ರುಪಾಯಿ ಲಭಿಸಿರುವುದರಿಂದ ಈ ಬಾರಿ 14,500 ಕೋಟಿ ರೂ. ಸಾಲ ನೀಡಲು ಚಾಲನೆ ಕೊಟ್ಟಿದ್ದೇವೆ ಎಂದರು.
ಎಲ್ಲ ರೈತರಿಗೂ ಸಂಪೂರ್ಣವಾಗಿ ಸಾಲ ಸಿಗಬೇಕು ಎಂಬ ದೃಷ್ಟಿಯಿಂದ ಮುಂದಿನ ಸಾಲಿನಲ್ಲಿ 20 ಸಾವಿರ ಕೋಟಿ ರುಪಾಯಿ ಸಾಲದ ವ್ಯವಸ್ಥೆ ಮಾಡಬೇಕು. ಈ ಸಂಬಂಧ ಕೇಂದ್ರದ ಗಮನ ಸೆಳೆಯಬೇಕೆಂದು ಮುಖ್ಯಮಂತ್ರಿಗಳ ಬಳಿಯೂ ಮನವಿ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.
ಫಲಾನುಭವಿಗಳ ಆಯ್ಕೆ ಸಮಿತಿಗೆ ಜಿಲ್ಲಾಧಿಕಾರಿಗಳನ್ನು ಅಧ್ಯಕ್ಷರು
ಬಡವರ ಬಂಧು ಯೋಜನೆಯಡಿ ಸಾಲ ವಿತರಣೆ ಮಾಡಲು ಫಲಾನುಭವಿಗಳ ಆಯ್ಕೆ ಸಮಿತಿಗೆ ಜಿಲ್ಲಾಧಿಕಾರಿಗಳನ್ನು ಅಧ್ಯಕ್ಷರನ್ನಾಗಿ ಮಾಡಿರುವ ಕ್ರಮವನ್ನು ಮರುಪರಿಶೀಲನೆ ಮಾಡಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ ಸೋಮಶೇಖರ್ ಇದೇ ಸಂದರ್ಭದಲ್ಲಿ ಹೇಳಿದರು.
ಬಡವರ ಬಂಧು ಫಲಾನುಭವಿಗಳ ಆಯ್ಕೆ ಅಧಿಕಾರ ಡಿಸಿಸಿ ಬ್ಯಾಂಕ್ ಗೆ
ಕೊಡಗು ಡಿಸಿಸಿ ಬ್ಯಾಂಕ್ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸಾಕಷ್ಟು ಒತ್ತಡದ ಕೆಲಸಗಳಿರುತ್ತವೆ. ಹೀಗಾಗಿ ಹೊಸ ಆದೇಶದ ಬಗ್ಗೆ ಗಮನ ಹರಿಸಲಾಗುವುದು, ಜೊತೆಗೆ ಈ ಹಿಂದೆ ಇದ್ದಂತೆ ಫಲಾನುಭವಿಗಳ ಆಯ್ಕೆ ವಿಷಯದಲ್ಲಿ ಡಿಸಿಸಿ ಬ್ಯಾಂಕಿಗೂ ಸಹ ಅಧಿಕಾರ ನೀಡುವ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು. ಆಯಾ ಜಿಲ್ಲಾಧಿಕಾರಿಗಳೂ ಫಲಾನುಭವಿಗಳನ್ನು ಆಯ್ಕೆ ಮಾಡಲಿ ಅಂತಿಮವಾಗಿ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಾಲ ವಿತರಣೆ ಬಗ್ಗೆ ಮಾಹಿತಿ
ಇದೇ ವೇಳೆ ಡಿಸಿಸಿ ಬ್ಯಾಂಕ್ ನಿಂದ ರೈತರಿಗೆ ಎಷ್ಟು ಸಾಲ ವಿತರಣೆ ಮಾಡಲಾಗಿದೆ? ಎಷ್ಟು ಹೊಸ ರೈತರಿಗೆ ಸಾಲ ನೀಡಲಾಗಿದೆ? ಬಡವರ ಬಂಧು ಹಾಗೂ ಕಾಯಕ ಯೋಜನೆಯಡಿ ಎಷ್ಟು ಸಾಲ ವಿತರಣೆಯಾಗಿದೆ? ಸಾಲ ವಿತರಣೆ ಹಾಗೂ ವಸೂಲಾತಿಯಲ್ಲಿ ಏನಾದರೂ ಸಮಸ್ಯೆಯಾಗಿದೆಯೇ ಎಂಬಿತ್ಯಾದಿ ವಿಷಯಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಶಾಸಕರಾದ ಕೆ.ಜೆ ಬೋಪಯ್ಯ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಗಣಪತಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.