ಕೊಡಗಿನಲ್ಲಿಯೇ ಕುಡಿಯುವ ನೀರಿಲ್ಲ: ಹಾರಂಗಿಯಿಂದ ನೀರು ಬಿಡುಗಡೆ
ಮಡಿಕೇರಿ, ಮಾರ್ಚ್ 25: ಕರ್ನಾಟಕದಲ್ಲಿನ ಬರದ ಛಾಯೆಯ ಕಾರಣ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಕೊಡಗು ಜಿಲ್ಲೆಯಲ್ಲಿಯೇ ನೀರಿನ ಕೊರರೆ ಕಂಡುಬಂದಿದೆ. ಸುಡುವ ಬಿಸಿಲಿನ ನಡುವೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಡ್ಯಾಂನಿಂದ ನೀರು ಹರಿಸಲಾಗುತ್ತಿದೆ.
ರಾಜ್ಯದ ಜೀವನದಿ ಕಾವೇರಿಯ ತವರು ಕೊಡಗಿನಲ್ಲಿಯೂ ಬರ ಪರಿಸ್ಥಿತಿ ಉಂಟಾಗಿದೆ. ಕಾವೇರಿ ನದಿ ಬತ್ತಿ ಹೋಗಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಸುಮಾರು 15 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಸಮಸ್ಯೆ ಉಂಟಾಗಿದೆ.

ಕೊಡಗು ಜಿಲ್ಲೆಯ 5 ಗ್ರಾಮ ಪಂಚಾಯಿತಿ ವ್ಯಾಪ್ತಿಯ 15 ಉಪ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೆಬ್ಬಾಲೆಯಲ್ಲಿರುವ ಗ್ರಾಮೀಣ ಕುಡಿಯುವ ನೀರಿನ ಘಟಕದಿಂದ ನೀರು ಮೇಲೆತ್ತಲೂ ನೀರು ಸಿಗುತ್ತಿಲ್ಲ.
ಕಾವೇರಿ ನದಿ ಬತ್ತಿ ಹೋದ ಪರಿಣಾಮ ಹಾರಂಗಿ ಡ್ಯಾಂನಿಂದ ಸುಮಾರು 400 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತದೆ. ಪ್ರತಿ ದಿನ 100 ಕ್ಯುಸೆಕ್ನಂತೆ ನೀರು ಹರಿಸಲು ತೀರ್ಮಾನಿಸಲಾಗಿದ್ದು, ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ನೀರು ಹರಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಯಾವ ಯಾವ ಪಂಚಾಯಿತಿಗಳು: ಕಾವೇರಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾದ ಕಾರಣ ಹೆಬ್ಬಾಲೆ, ಶಿರಂಗಾಲ ಸೇರಿದಂತೆ ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ 15 ಉಪ ಗ್ರಾಮಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಇದರಿಂದಾಗಿ ಹಾರಂಗಿ ಜಲಾಶಯದಿಂದ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಹಾರಂಗಿ ಜಲಾಶಯದಲ್ಲಿ ಸದ್ಯ 2 ಟಿಎಂಸಿ ಅಡಿಯಷ್ಟು ನೀರಿನ ಸಂಗ್ರಹವಿದೆ. ಇದರಿಂದ ನಾಲ್ಕು ದಿನಗಳ ಕಾಲ ಪ್ರತಿದಿನ 100 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತದೆ. ಮೊದಲು ಕೇವಲ 100 ಕ್ಯುಸೆಕ್ ನೀರು ಹರಿಸಲು ತೀರ್ಮಾನಿಸಿ ನೀರು ಬಿಡಲಾಗಿತ್ತು. ಆದರೆ ಅದು ಸಾಕಾಗದ ಕಾರಣ 400 ಕ್ಯುಸೆಕ್ ನೀರು ಹರಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಾರಂಗಿ ಜಲಾಶಯದ ಕೆಳಭಾಗದಲ್ಲಿರುವ ಹಾಸನ, ಕೊಡಗು ಜಿಲ್ಲೆಯ ಜನರಿಗೆ ಕುಡಿಯುವ ನೀರು ಹರಿಸಲು, ದನಕರುಗಳಿಗೆ ಕುಡಿಯುವ ನೀರಿಗಾಗಿ ಮಾತ್ರ ನದಿಗೆ ನೀರು ಹರಿಸಲಾಗುತ್ತಿದೆ. ಬೇರೆ ಉದ್ದೇಶಗಳಿಗೆ ನೀರು ಬಳಕೆ ಮಾಡಬಾರದು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಬರ, ಕುಡಿಯುವ ನೀರಿನ ಕೊರತೆ ನಡುವೆಯೇ ಕೊಡಗು ಜಿಲ್ಲೆಯ ವಿವಿಧ ಭಾಗದಲ್ಲಿ ಕಳೆದ ವಾರ ಎರಡು ದಿನಗಳ ಕಾಲ ಮಳೆ ಸುರಿದಿದೆ. ಇದರಿಂದಾಗಿ ಜನರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಈಗ ಸುರಿಯುವ ಮಳೆಯ ನೀರು ನದಿ ಸೇರುವುದಿಲ್ಲ.
ಸಭೆ ನಡೆಸಿದ ಜಿಲ್ಲಾಧಿಕಾರಿಗಳು: ಬರ ನಿರ್ವಹಣೆ ಸಂಬಂಧ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳ ಸಭೆಯನ್ನು ನಡೆಸಿದರು.
ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ವ್ಯತ್ಯಯ ಆಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್ಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಬೇಸಿಗೆ ಜೊತೆಗೆ ಲೋಕಸಭಾ ಚುನಾವಣೆ ಪ್ರಕಟವಾಗಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಜೊತೆಗೆ ಚುನಾವಣಾ ಕರ್ತವ್ಯವನ್ನು ಅಧಿಕಾರಿಗಳು ಸಮನ್ವಯತೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗಾಗಲೇ ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಒದಗಿಸುವಲ್ಲಿ ವ್ಯತ್ಯಯ ಉಂಟಾಗಬಾರದು ಎಂದು ಸೂಚನೆ ನೀಡಲಾಗಿದೆ. ತಹಶೀಲ್ದಾರ್ ಮತ್ತು ತಾಲೂಕು ಪಂಚಾಯಿತಿ ಇಒ ಜೊತೆ ಒಟ್ಟುಗೂಡಿ ಸಮನ್ವಯತೆ ಸಾಧಿಸಿ ಕುಡಿಯುವ ನೀರು ಪೂರೈಕೆಗೆ ಮುಂದಾಗಬೇಕು. ಜಲಮೂಲ, ತೆರೆದ ಬಾವಿ, ಬೋರ್ ವೆಲ್ ಹೀಗೆ ಕುಡಿಯುವ ನೀರಿನ ಸಂಪನ್ಮೂಲವನ್ನು ಸರಿಯಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದ್ದಾರೆ.












Click it and Unblock the Notifications