ಕುಶ ಆನೆ ಮರಳಿ ಕಾಡಿಗೆ; ಸಚಿವ ಅರವಿಂದ ಲಿಂಬಾವಳಿ
ಮಡಿಕೇರಿ, ಏಪ್ರಿಲ್ 28; ಅರಣ್ಯ ಇಲಾಖೆ ಸೆರೆ ಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ 'ಕುಶ'ನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದಾರೆ.
ಬುಧವಾರ ಈ ಸಂಬಂಧ ಸಚಿವರು ತಮ್ಮ ಕಚೇರಿಯಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ಒಂದು ವರ್ಷದಿಂದ ದುಬಾರೆ ಶಿಬಿರದಿಂದ ತಪ್ಪಿಸಿಕೊಂಡ ಆನೆ 'ಕುಶ'ನನ್ನು ಸೆರೆ ಹಿಡಿದು ತರಲಾಗಿತ್ತು.
ಆದರೆ 'ಕುಶ' ಆನೆಯನ್ನು ಸೆರೆ ಹಿಡಿದು ಇಲಾಖೆಯಿಂದ ಹಿಂಸೆ ನೀಡಲಾಗುತ್ತಿದೆ ಎಂದು ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಇಂದು ಸಭೆ ನಡೆಸಿ ಮಾಹಿತಿ ಪಡೆದರು. ಅಧಿಕಾರಿಗಳು ಆನೆಗೆ ಯಾವುದೇ ಹಿಂಸೆ ನೀಡಿಲ್ಲ. ಆನೆ ಆರೋಗ್ಯವಾಗಿದೆ ಎಂದು ಮಾಹಿತಿ ನೀಡಿದರು.

ಅಂತಿಮವಾಗಿ ಸಚಿವರು 'ಕುಶ' ಆನೆಗೆ ರೋಡಿಯೋ ಕಾಲರ್ ಅಳವಡಿಸಿ, ಬಿಡುಗಡೆ ಮಾಡಲು ಸೂಕ್ತ ಸ್ಥಳ ನಿಗದಿ ಪಡಿಸಿದ ಮೇಲೆ, ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಿಡುಗಡೆ ಮಾಡಲು ಆದೇಶಿಸಿದರು.
ಇದೇ ಸಂದರ್ಭದಲ್ಲಿ ದುಬಾರೆ ಸಮೀಪ ಪ್ರಜ್ಞಾ ಚೌಟ ಎನ್ನುವವರು ಆನೆಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡು ಪೋಷಿಸುತ್ತಿರುವ ಬಗ್ಗೆ ಸ್ಥಳೀಯರಿಂದ ವ್ಯಕ್ತವಾಗಿರುವ ಆಕ್ಷೇಪಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸುಪರ್ದಿಯಲ್ಲಿರುವ ಆನೆಗಳನ್ನು ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.












Click it and Unblock the Notifications