ಗಣಪತಿ ಆತ್ಮಹತ್ಯೆ : ಕೆಜೆ ಜಾರ್ಜ್ ವಿರುದ್ಧ ಎಫ್ ಐಆರ್
ಮಡಿಕೇರಿ, ಜುಲೈ 19: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಜೆ ಜಾರ್ಜ್ ಸೇರಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಮಡಿಕೇರಿ ಪೊಲೀಸರು ಮಂಗಳವಾರ ಪ್ರಾಥಮಿಕ ತನಿಖಾ ವರದಿ (ಎಫ್ ಐಆರ್) ದಾಖಲಿಸಿದ್ದಾರೆ.
ಕೆ.ಜೆ.ಜಾರ್ಜ್, ಐಜಿಪಿ ಪ್ರಣವ್ ಮೊಹಾಂತಿ ಹಾಗೂ ಎಡಿಜಿಪಿ ಎ.ಎಂ.ಪ್ರಸಾದ್ ವಿರುದ್ಧ ಐಪಿಸಿ 306ರ ಅಡಿ (ಆತ್ಮಹತ್ಯೆಗೆ ಪ್ರಚೋದನೆ) ಎಫ್ಐಆರ್ ದಾಖಲಿಸುವಂತೆ ಮಡಿಕೇರಿಯ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ನ್ಯಾಯಾಲಯವು ಸೋಮವಾರ ತನಿಖೆ ನಡೆಸುತ್ತಿರುವ ಪೊಲೀಸರಿಗೆ ನಿರ್ದೇಶಿಸಿತ್ತು. [ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣದ Timeline]

ಡಿವೈಎಸ್ಪಿ ಗಣಪತಿ ಅವರ ಪುತ್ರ ನೆಹಾಲ್ ಅವರ ಪರವಾಗಿ ಅರ್ಜಿ ಮಂಡಿಸಿದ ಹೈಕೋರ್ಟ್ ವಕೀಲ ಎಂ.ಟಿ.ನಾಣಯ್ಯ ಅವರು ಸಿಆರ್ಪಿಸಿ 156(3) ಅಡಿ ಪ್ರಕರಣ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ನ್ಯಾಯಾಧೀಶರಾದ ಅನ್ನಪೂರ್ಣೇಶ್ವರಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾ. ಅನ್ನಪೂರ್ಣೇಶ್ವರಿ ಅವರು ಮೂವರು ಆರೋಪಿಗಳ ವಿರುದ್ಧವೂ ಎಫ್ಐಆರ್ ದಾಖಲಿಸಿ ಆಗಸ್ಟ್ 5ರ ಒಳಗಾಗಿ ವರದಿ ನೀಡುವಂತೆ ಮಡಿಕೇರಿ ನಗರ ಠಾಣೆ ಪೊಲೀಸರಿಗೆ ಸೂಚಿಸಿದರು.
ಪ್ರಕರಣದ ಹಿನ್ನಲೆ: ಮಂಗಳೂರಿನ ಐಜಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಎಂ.ಕೆ.ಗಣಪತಿ ಅವರು ಜುಲೈ 7ರಂದು ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಕೆ.ಜೆ.ಜಾರ್ಜ್ ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳ ಹೆಸರು ಪ್ರಸ್ತಾಪಿಸಿದ್ದರು. ನಂತರ ಮಡಿಕೇರಿ ವಿನಾಯಕ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳೀಯ ಪೊಲೀಸರು ಗಣಪತಿ ಅವರ ತಂದೆ ಕುಶಾಲಪ್ಪ ಹೇಳಿಕೆ ಆಧರಿಸಿ ಸಿಆರ್ಪಿಸಿ 174ರ (ಅಸಹಜ ಸಾವು) ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಎಫ್ ಐಆರ್ ದಾಖಲಿಸಿರಲಿಲ್ಲ.












Click it and Unblock the Notifications