ಕುಸಿದ ಕೊಡಗಿನ ಜನತೆ ಮನೋಬಲ ವೃದ್ಧಿಗೆ ಸಂಗೀತ-ನೃತ್ಯದ ಸಿಂಚನ

Recommended Video

      ಮನೋಬಲ ವೃದ್ದಿಗೆ ಮುಂದಾದ ಜಿಲ್ಲಾಡಳಿತದಿಂದ | Oneindia Kannada

      ಬೆಂಗಳೂರು, ಆಗಸ್ಟ್ 23: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ನಿರಾಶ್ರಿತರಾಗಿರುವವರಿಗೆ ತೆರೆದ ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ತರ ಮನೋಬಲ ವೃದ್ಧಿಗಾಗಿ ಯೋಗಾಭ್ಯಾಸ ಮತ್ತು ಗ್ರಾಮೀಣ ಸೊಗಡಿನ ಪಾರಂಪರಿಕ ನೃತ್ಯ, ಸಂಗೀತ,ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

      ಈ ಮೂಲಕ ನೊಂದ ಮನಸುಗಳಿಗೆ ಸಮಾಧಾನ ನೀಡುವ ಕಾರ್ಯವನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ. ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಆಸ್ತಿ-ಪಾಸ್ತಿ ನಷ್ಟ, ಜೀವ ಹಾನಿ ಅನುಭವಿಸಿರುವ ಕುಟುಂಬಗಳಲ್ಲಿ ಸದ್ಯ ಮುಂದೇನು ಎಂಬ ಆತಂಕ ಆವರಿಸಿದೆ.

      ಹೀಗಾಗಿ ಸಂತ್ರಸ್ತರಲ್ಲಿ ಮಾನಸಿಕ ಸ್ಥೈರ್ಯ ತುಂಬುವ ಮೂಲಕ ಬದುಕಿನಲ್ಲಿ ಭರವಸೆ ಮೂಡಿಸಲು ಮಾನಸಿಕ ತಜ್ಞರಿಂದ ಸಮಾಲೋಚನೆ ಮಾಡಿಸುವ ಕಾರ್ಯ ಈಗಾಗಲೆ ಕೊಡಗು ಜಿಲ್ಲೆಯ ಪರಿಹಾರ ಕೇಂದ್ರಗಳಲ್ಲಿ ಆರಂಭವಾಗಿದೆ. ಸದ್ಯ ಜಿಲ್ಲೆಯಲ್ಲಿ 51 ಪರಿಹಾರ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಸುಮಾರು 6900 ಸಂತ್ರಸ್ತರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

      ಸಂತ್ರಸ್ತರ ಪರಿಹಾರ ಕೇಂದ್ರದಲ್ಲಿ ಆಶ್ರಯಪಡೆದವರೆಷ್ಟು ಮಂದಿ

      ಸಂತ್ರಸ್ತರ ಪರಿಹಾರ ಕೇಂದ್ರದಲ್ಲಿ ಆಶ್ರಯಪಡೆದವರೆಷ್ಟು ಮಂದಿ

      ಈ ಪೈಕಿ ಪುರುಷರು ಸುಮಾರು 3000 ರಷ್ಟಿದ್ದರೆ, ಮಹಿಳೆಯರ ಸಂಖ್ಯೆ ಸುಮಾರು 3400 ಹಾಗೂ ಮಕ್ಕಳ ಸಂಖ್ಯೆ ಸುಮಾರು 500. ಮಾನಸಿಕ ತಜ್ಞ ವೈದ್ಯರಾದ ಡಾ. ರೂಪೇಶ್ ಗೋಪಾಲ್ ಅವರು ಜೊತೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಿಷನ್ ಡೈರೆಕ್ಟರ್ ಆಗಿರುವ ಡಾ. ರತನ್ ಕೇಲ್ಕರ್ ಸಲಹೆಯಂತೆ ಆಸ್ತಿ-ಪಾಸ್ತಿ ಕಳೆದುಕೊಂಡು ನಿರಾಶ್ರಿತರಾಗಿರುವ ಸಂತ್ರಸ್ತರ ಮನೋಬಲ ವೃದ್ಧಿಗಾಗಿ ಹಾಗೂ ನೊಂದ ಮನಸುಗಳನ್ನು ಶಾಂತಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಪರಿಹಾರ ಕೇಂದ್ರಗಳಲ್ಲಿ ಯೋಗಾಭ್ಯಾಸ ಪ್ರಾರಂಭಿಸಲಾಗಿದೆ.

      ಮಕ್ಕಳಿಗೆ ಪ್ರಾಜೆಕ್ಟರ್ ಮೂಲಕ ಚಲನಚಿತ್ರ ಪ್ರದರ್ಶನ

      ಮಕ್ಕಳಿಗೆ ಪ್ರಾಜೆಕ್ಟರ್ ಮೂಲಕ ಚಲನಚಿತ್ರ ಪ್ರದರ್ಶನ

      ಇದರ ಜೊತೆಗೆ ಪರಿಹಾರ ಕೇಂದ್ರಗಳಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ಗ್ರಾಮೀಣ ಸೊಗಡಿನ ಪಾರಂಪರಿಕ ನೃತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಪರಿಹಾರ ಕೇಂದ್ರಗಳಲ್ಲಿ ಪ್ರೊಜೆಕ್ಟರ್ ಗಳ ಮೂಲಕ ಚಲನಚಿತ್ರ ಪ್ರದರ್ಶನ ಕೈಗೊಳ್ಳಲಾಗುತ್ತಿದೆ.

      ಮಕ್ಕಳಿಗೆ ಆಟಿಕೆ ವಸ್ತುಗಳ ಪೂರೈಕೆ ಮಾಡಲಾಗುತ್ತಿದ್ದು, ನೊಂದ ಪಾಲಕರಿಗೆ ಮಕ್ಕಳಿಂದ ಇನ್ನಷ್ಟು ತೊಂದರೆಯಾಗದಿರಲಿ ಎಂಬುದು ಹಾಗೂ ಮಕ್ಕಳು ಖುಷಿಯಿಂದ ಕಾಲ ಕಳೆಯುವುದನ್ನು ಕಂಡು ಪಾಲಕರ ಮನಸ್ಸು ಕೂಡ ಉಲ್ಲಸಿತಗೊಳ್ಳಲಿದೆ ಎಂಬುದು ಜಿಲ್ಲಾಡಳಿತದ ಆಶಯವಾಗಿದೆ.

      ಬದುಕಿಗೆ ಭರವಸೆ ಮೂಡಿಸುವ ಯತ್ನ

      ಬದುಕಿಗೆ ಭರವಸೆ ಮೂಡಿಸುವ ಯತ್ನ

      ಪ್ರೀತಿ ಪಾತ್ರರನ್ನು ಅಥವಾ ಮನೆಗಳನ್ನು ಕಳೆದುಕೊಂಡು, ಮುಂದೇನು ಎನ್ನುವ ಆತಂಕದಲ್ಲಿರುವ ನಿರಾಶ್ರಿತರು ಹಾಗೂ ಸಂತ್ರಸ್ತರಲ್ಲಿ ಬದುಕು ಕಟ್ಟಿಕೊಳ್ಳುವ ಭರವಸೆಯನ್ನು ನೊಂದ ಮನಸುಗಳಿಗೆ ನೀಡಬೇಕಿದೆ. ಇಂತಹವರಿಗೆ ಸಮಾಲೋಚನೆ ನಡೆಸುವ ಮೂಲಕ, ಸರ್ಕಾರ ನಿಮ್ಮೊಂದಿಗೆ ಸದಾ ಇದೆ.

      ಪರಿಹಾರ ಕಾರ್ಯಗಳನ್ನು ಮಾಡುತ್ತಿದೆ. ಸದ್ಯ ಸರ್ಕಾರ ಜನರ ಪ್ರಾಣ ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತಿದ್ದು, ಆಸ್ತಿ-ಪಾಸ್ತಿ ನಷ್ಟದ ಬಗ್ಗೆ ಮಾಹಿತಿ ಪಡೆದು, ಶೀಘ್ರದಲ್ಲೇ ಪುನರ್ವಸತಿ ಕಾರ್ಯ, ಮನೆ ಕಳೆದುಕೊಂಡವರಿಗೆ ಮನೆ, ಜೀವ ಹಾನಿ ಅನುಭವಿಸಿರುವವರಿಗೆ ಹಣಕಾಸಿನ ನೆರವು ಪರಿಹಾರ ದೊರಕಿಸುವ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಅಲ್ಲದೆ ವಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವುದು, ಆರೋಗ್ಯ ರಕ್ಷಣೆಗಾಗಿ ಪರಿಹಾರ ಕೇಂದ್ರಗಳಲ್ಲಿ ವ್ಶೆದ್ಯರಿಂದ ಉಚಿತ ಆರೋಗ್ಯ ತಪಾಸಣೆಯನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ.

      ಯೋಗಾಭ್ಯಾಸ ನಡೆಸಲು ಯೋಗ ಶಿಕ್ಷಕರ ಬಳಕೆ

      ಯೋಗಾಭ್ಯಾಸ ನಡೆಸಲು ಯೋಗ ಶಿಕ್ಷಕರ ಬಳಕೆ

      ವಿಚಲಿತಗೊಂಡಿರುವ ಮನಸ್ಸನ್ನು ಶಾಂತಗೊಳಿಸಲು, ಸಮಾಧಾನಗೊಳಿಸಲು ಯೋಗ ಒಳ್ಳೆಯ ಮಾರ್ಗವಾಗಿದೆ. ಸಂತ್ರಸ್ತರ ಪರಿಹಾರ ಕೇಂದ್ರಗಳಲ್ಲಿ, ಸಂತ್ರಸ್ತರ ಮನಸ್ಸನ್ನು ಸಮಾಧಾನ ಪಡಿಸುವ ನಿಟ್ಟಿನಲ್ಲಿ 30 ಜನರ ತಂಡ ಕೊಡಗು ಜಿಲ್ಲೆಗೆ ಆಗಮಿಸಿದ್ದು, ಇವರು ಪರಿಹಾರ ಕೇಂದ್ರಗಳಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರಿಗೂ ಯೋಗಾಭ್ಯಾಸ ಪ್ರಾರಂಭಿಸಿದ್ದು, ಸಂತ್ರಸ್ತರು ಯೋಗಾಭ್ಯಾಸಕ್ಕೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಆಸಕ್ತಿಯಿಂದ ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಪರಿಹಾರ ಕೇಂದ್ರಗಳಲ್ಲಿ ಕಂಡುಬರುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+