ಉತ್ತಮ ಮಳೆಯಾಗಲೆಂದು ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ದರ್ಶನ್ ಪುಟ್ಟಣ್ಣಯ್ಯ
ಕೊಡಗು, ಜುಲೈ 6: ಕಾವೇರಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೊಡಗಿನಲ್ಲಿ ಮುಂಗಾರು ಚೇತರಿಕೆ: ಬರೆ, ಗುಡ್ಡ ಕುಸಿತದ ಭೀತಿ
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಸಂಘದ ಮುಖಂಡ ದರ್ಶನ್ ಪುಟ್ಟಣ್ಣಯ್ಯ, ಮಂಡ್ಯದಲ್ಲಿ ಕಬ್ಬು ಬೆಳೆಯುವ ರೈತರಿಗೆ ಕೆಆರ್ಎಸ್ ಅಣೆಕಟ್ಟೆಯಿಂದ ನೀರು ಹರಿಸುವಂತೆ ಬೇಡಿಕೊಳ್ಳುತ್ತಿದ್ದೇವೆ. ರಾಜ್ಯದ ಸಚಿವರಲ್ಲೂ ಮನವಿ ಮಾಡಿದ್ದೇವೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವೂ ರೈತ ವಿರೋಧಿ ನೀತಿ ಅನುಸರಿಸುತ್ತಿರುವುದು ಬೇಸರ ಎಂದರು.
ನಾಲೆಗಳಿಗೆ ನೀರು ಹರಿಸದೇ ರೈತರ ತಾಳ್ಮೆ ಪರೀಕ್ಷೆ ಮಾಡಲಾಗುತ್ತಿದೆ. ಹೋರಾಟ ನಡೆಸಿದರೆ ಹತ್ತಿಕ್ಕುವ ಪ್ರಯತ್ನ ಮತ್ತೊಂದೆಡೆ ನಡೆಯುತ್ತಿದೆ. ಕೆಆರ್ ಎಸ್ನಿಂದ ನೀರು ಹರಿಸದಿರಲು ಕಾರಣವೇನು ಎಂದು ಪ್ರಶ್ನಿಸಿದರು. ನೀರು ಹರಿಸದೇ ಸುಮಾರು 40 ಸಾವಿರ ರೈತ ಕುಟುಂಬಗಳು ಕಂಗಾಲಾಗಿವೆ. ಕಾವೇರಿ ನದಿ ನೀರು ಅವಲಂಬಿಸಿರುವ ರೈತರ ಮೇಲೆ ನೂರಾರು ಕೋಟಿ ರೂಪಾಯಿ ಸಾಲದ ಹೊರೆಯಿದೆ. ಈ ಸತ್ಯಾಂಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವೂ ಅರಿತುಕೊಳ್ಳಬೇಕು. ನಮ್ಮ ಪಾಲಿನ ನೀರನ್ನು ರೈತರ ಜಮೀನಿಗೆ ಹರಿಸಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ಪುತ್ರ ನಿಖಿಲ್ ಸೋಲಿಗೆ ರೈತರ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ಮಂಡ್ಯ ರೈತರ ಸಮಸ್ಯೆ ಆಲಿಸುವುದನ್ನು ಬಿಟ್ಟು ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ ಎಂದು ದೂರಿದರು.